ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದಲ್ಲಿ ಅಧ್ಯಯನ ಪೀಠಗಳ ಸ್ಥಾಪನೆಗೆ ಅನುದಾನದ ಕೊರತೆ ಇದೆ ಎಂದು ಕುಲಪತಿ ಪ್ರೊ. ಬಿ.ಕೆ.ತುಳಸಿಮಾಲಾ ಹೇಳಿದರು.
ಮಹಿಳಾ ವಿವಿ ಘಟಿಕೋತ್ಸವ ಕುರಿತು ಮಾಹಿತಿ ನೀಡಲು ಬುಧವಾರ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ವಿಜಯಪುರ ಜಿಲ್ಲೆಯ ಪತ್ರಿಕಾ ರಂಗದ ಭೀಷ್ಮ ಮೊಹರೆ ಹಣಮಂತರಾಯರ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪಿಸಬೇಕೆಂಬ ಬೇಡಿಕೆಯ ಕುರಿತಂತೆ ಪತ್ರಕರ್ತರು ಪ್ರಶ್ನೆ ಕೇಳಿದಾಗ ಅಧ್ಯಯನ ಪೀಠ ಸ್ಥಾಪನೆಗೆ ಅನುದಾನದ ಕೊರತೆ ಇದೆ. ಹೀಗಾಗಿ ಪೀಠ ಸ್ಥಾಪನೆಗೆ ವಿಳಂಬವಾಗಿದೆ ಎಂದರು.
ಕಳೆದ ಮೂರು ವರ್ಷಗಳಿಂದ ಅಧ್ಯಯನ ಪೀಠ ಸ್ಥಾಪನೆಗಾಗಿ ಸರಕಾರಕ್ಕೆ ವಿಶ್ವವಿದ್ಯಾನಿಲಯಲಯದಿಂದ ಪ್ರಸ್ತಾವನೆ ಸಲ್ಲಿಸಿ ಅನುದಾನಕ್ಕಾಗಿ ಪ್ರಯತ್ನ ಮಾಡುತ್ತ ಬರಲಾಗಿದೆ. ಈ ಪ್ರಯತ್ನ ಇನ್ನೂ ಸಫಲವಾಗಿಲ್ಲ ಎಂದರು.
ಅನುದಾನ ಕೊರತೆಯಿಂದಾಗಿ ಪೀಠ ಸ್ಥಾಪನೆ ವಿಳಂಬವಾಗುತ್ತಿದೆ. ಈ ವರ್ಷವೂ ಅನುದಾನಕ್ಕಾಗಿ ಮತ್ತೆ ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.
ಪತ್ರಿಕಾ ರಂಗಕ್ಕೆ ಮೊಹರೆ ಹಣಮಂಮತರಾಯರ ಕೊಡುಗೆ ಅಪಾರ. ಹೀಗಾಗಿ ಅವರ ಹೆಸರಿನಲ್ಲಿ ವಿಜಯಪುರದ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಒಂದು ಅಧ್ಯಯನ ಪೀಠ ಸ್ಥಾಪಿಸಬೇಕೆಂದು ಸರಕಾರವನ್ನು ಒತ್ತಾಯಿಸಿ ಮೂರು ವರ್ಷಗಳ ಹಿಂದೆ ವಿಜಯಪುರದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿ ನಂತರ ಈ ನಿರ್ಣಯ ಪ್ರತಿಯೊಂದಿಗೆ ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರಿಗೆ ಪತ್ರ ಬರೆದಿದ್ದನ್ನೂ ಇಲ್ಲಿ ಸ್ಮರಿಸಬಹುದು.
ಪತ್ರಿಕಾಗೋಷ್ಟಿಯಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ.ಚಂದ್ರಶೇಖರ, ಪ್ರೊ. ಸಕ್ಪಾಲ್ ಹೂವಣ್ಣ, ಮಾಧ್ಯಮ ಸಮಿತಿ ಅಧ್ಯಕ್ಷ ಪ್ರೊ.ಓಂಕಾರ ಕಾಕಡೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

