ವಿಜಯಪುರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿಗಾಗಿ ಹಮ್ಮಿಕೊಂಡ ಸೈಕಲ್ ಜಾಥಾಕ್ಕೆ ಚಾಲನೆ ನೀಡಲಾಯಿತು.
ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಸ್ಕೌಟ್ಸ್ ಹಾಗೂ ಗೈಡ್ಸ್ ಸಹಯೋಗದಲ್ಲಿ ಆಯೋಜಿಸಿದ ಸೈಕಲ್ ಜಾಥಾಕ್ಕೆ ಜಿಲ್ಲಾ ಪಂಚಾಯತ ಆವರಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆ ಚುನಾವಣೆ-೨೦೨೩ರ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಈಗಾಗಲೇ ಹಲವಾರು ರೀತಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಮತದಾರರನ್ನು ಆಕರ್ಷಿಸುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಕಾರ್ಯನಿರ್ವಹಿಸುತ್ತಿದ್ದು, ಇಂದು ಹಮ್ಮಿಕೊಂಡ ಸೈಕಲ್ ಜಾಥಾ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಮತ್ತು ಗ್ರಾಮಗಳಲ್ಲಿ ಸಂಚರಿಸಿ ಮತದಾನ ಜಾಗೃತಿ ಮೂಡಿಸಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಬಿಸಿಲು ತಾಪಮಾನ ಹೆಚ್ಚಿಗಿದ್ದು, ಸೈಕಲ್ ಸವಾರರು ಮತದಾನ ಜಾಗೃತಿಯ ಜೊತೆಗೆ ತಮ್ಮ ಆರೋಗ್ಯದ ಕಡೆ ಗಮನವಿರಲಿ, ನೆರಳಲ್ಲಿ ವಿಶ್ರಾಂತಿ ಪಡೆದು ಮುಂದೆ ಸಾಗಬೇಕು. ಜೊತೆಯಲ್ಲಿ ತಂಪು ಪಾನೀಯ, ನೀರು, ಹಣ್ಣು-ಹಂಪಲುಗಳಿರಲಿ ಏನಾದರೂ ಸಮಸ್ಯೆ ಉದ್ಭವಿಸಿದರೆ ತಕ್ಷಣವೇ ಗಮನಕ್ಕೆ ತರುವಂತೆ ಸೈಕಲ್ ಸವಾರರಿಗೆ ಹೇಳಿದರು.
ಈ ಸೈಕಲ್ ಜಾಥಾ ಬಸವನ ಬಾಗೇವಾಡಿ, ನಿಡಗುಂದಿ, ಮುದ್ದೇಬಿಹಾಳ, ತಾಳಿಕೋಟೆ, ಸಿಂದಗಿ ಮತ್ತು ದೇವರ ಹಿಪ್ಪರಗಿ ತಾಲೂಕುಗಳಲ್ಲಿ ಸಂಚರಿಸಿ, ಜಿಲ್ಲೆಯ ೩೦ಕ್ಕೂ ಹೆಚ್ಚಿನ ಸ್ಥಳದಲ್ಲಿ ಕಾರ್ಯಕ್ರಮ ನಡೆಸಿ, ಮೇ.೫ಕ್ಕೆ ನಗರಕ್ಕೆ ಆಗಮಿಸಿ ಜಾಥಾ ಮುಕ್ತಾಯವಾಗಲಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಗೈಡ್ಸ್ ಆಯುಕ್ತರಾದ ಶ್ರೀಮತಿ ವಿದ್ಯಾವತಿ ಅಂಕಲಗಿ, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಗಳು, ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ, ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರಾದ ಎ.ಬಿ.ಅಲ್ಲಾಪುರ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಜಿಲ್ಲಾ ಸಂಘಟಕರಾದ ರಾಜಶೇಖರ ಖೇಡಗಿ ಸೇರಿದಂತೆ ಜಿಲ್ಲಾ ಪಂಚಾಯತಿ ಅಧಿಕಾರಿಗಳು ಉಪಸ್ಥಿತರಿದ್ದರು.