ಉದಯರಶ್ಮಿ ದಿನಪತ್ರಿಕೆ
ಇಂಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಧಾರವಾಡದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಜರುಗಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕಿನ ಶಿರಕನಹಳ್ಳಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ೭ನೇ ವರ್ಗದ ವಿದ್ಯಾರ್ಥಿನಿ ಪೂರ್ಣಿಮಾ ಕೆಂಭಾವಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ.
ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹಾಗೂ ಯೋಜನಾಧಿಕಾರಿ ಭಾರತಿ ಶೆಟ್ಟರ ಅವರು ವಿಜೇತ ಪೂರ್ಣಿಮಾಳಿಗೆ ಪ್ರಶಸ್ತಿ ಪತ್ರ ಹಾಗೂ ೨೫೦೦೦ ರೂ.ಗಳ ಚೆಕ್ ನೀಡಿ ಗೌರವಿಸಿದ್ದಾರೆ.
ರೈತರಾದ ತಂದೆ ರಮೇಶ ಹಾಗೂ ತಾಯಿ ಮಲ್ಲಮ್ಮಳ ಸುಪುತ್ರಿಯಾದ ಪೂರ್ಣಿಮಾ ಕೆಂಭಾವಿ-ಈ ವಿದ್ಯಾರ್ಥಿನಿಯ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್. ಆಲಗೂರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್. ನಡಗಡ್ಡಿ, ಶಿಕ್ಷಣ ಸಂಯೋಜಕ ಪ್ರಕಾಶ ನಾಯಕ, ಬಿಆರ್ಪಿ ಎ.ಜಿ. ಚೌಧರಿ, ಸಿಆರ್ಪಿ ಸಂತೋಷ ನೆರಕಿ, ಮುಖ್ಯ ಶಿಕ್ಷಕ ಭೀಮು ಲಮಾಣಿ, ಎಸ್ಡಿಎಂಸಿ ಅಧ್ಯಕ್ಷ ಶಂಕರಗೌಡ ಪಾಟೀಲ ಸೇರಿದಂತೆ ಶಾಲಾ ಶಿಕ್ಷಕರು, ಎಸ್ ಡಿ ಎಂ ಸಿ ಸದಸ್ಯರು, ಗ್ರಾಮಸ್ಥರು ವಿದ್ಯಾರ್ಥಿನಿಯ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.