ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ “ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ” (ಬೇಟಿ ಪಡಾವೋ ಬೇಟಿ ಬಚಾವೋ) ಯೋಜನೆಯು ೧೦ ವರ್ಷ ಪೂರ್ಣವಾದ ಹಿನ್ನಲೆಯಲ್ಲಿ ವಿನೂತನವಾಗಿ ದಶಮಾನೋತ್ಸವ ಸರಣಿ ಕಾರ್ಯಕ್ರಮವನ್ನು ಬುಧವಾರ ಆಯೋಜಿಸಲಾಗಿತ್ತು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, “ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ” ಪ್ರತಿಜ್ಞಾ ವಿಧಿ ಬೋಧಿಸಿ, ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿ, ಲಿಂಗ ಪಕ್ಷಪಾತ ಹಾಗೂ ಲಿಂಗ ಆಯ್ಕೆ ಮಾಡುವುದನ್ನು ತಡೆಗಟ್ಟಬೇಕು. ಹೆಣ್ಣು ಮಕ್ಕಳ ಉಳಿವು ಮತ್ತು ಅವರ ರಕ್ಷಣೆ ಮಾಡಿ ಹೆಣ್ಣು ಲಿಂಗಾನುಪಾತ ಅಸಮಾನತೆ ತಡೆಯಬೇಕು ಹಾಗೂ ಹೆಣ್ಣು ಮಗುವಿಗೆ ಶಿಕ್ಷಣ ದೊರೆಯುತ್ತಿರುವ ಬಗ್ಗೆ ಖಾತ್ರಿ ಪಡೆಸಿಕೊಳ್ಳುವಂತೆ ರ್ಯಾಲಿಯಲ್ಲಿ ಅವರು ಹೇಳಿದರು.
ಪ್ರತಿ ವರ್ಷ ಶೇಕಡಾ ೦೨% ರಷ್ಟು ಹೆಣ್ಣು ಮಗುವಿನ ಜನನ ಪ್ರಮಾಣದಲ್ಲಿ ಸುಧಾರಣೆ, ಸಾಂಸ್ಥಿಕ ಹೆರಿಗೆ ಪ್ರಮಾಣದಲ್ಲಿ ಶೇಕಡಾ ೯೫% ಕ್ಕಿಂತ ಅಧಿಕಗೊಳಿಸುವುದು, ಪ್ರತಿ ವರ್ಷ ಶೇಕಡಾ ೦೧%ರಷ್ಟು ಗರ್ಭಿಣಿಯರ ಮೊದಲ ೦೩ ತಿಂಗಳ ನೊಂದಣಿ ಪ್ರಮಾಣವನ್ನು ಅಧಿಕಗೊಳಿಸುವುದು, ಪ್ರತಿ ವರ್ಷ ಶೇಕಡಾ ೦೧% ರಷ್ಟು ಪ್ರೌಢ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿಯಲ್ಲಿ ಹೆಣ್ಣು ಮಕ್ಕಳ ದಾಖಲಾತಿಯನ್ನು ಅಧಿಕಗೊಳಿಸಿವುದು, ಪ್ರೌಢ ಮತ್ತು ಪದವಿ ಪೂರ್ವ ಹಂತಗಳಲ್ಲಿ ಹೆಣ್ಣು ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು, ಸುರಕ್ಷಿತ ಮುಟ್ಟಿನ ನೈರ್ಮಲ್ಯತೆ ನಿರ್ವಹಣೆ ಕುರಿತು ಜಾಗೃತಿ ಮೂಡಿಸುವುದು, ಈ ಕಾರ್ಯಕ್ರಮದ ಪ್ರಮುಖ ಉದ್ದೇಶ ಹಾಗೂ ಗುರಿಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕ್ಷೇತ್ರ ಪ್ರಚಾರ ಇಲಾಖೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಭಾಗಿತ್ವ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
