ಜಿಲ್ಲಾ ಆಸ್ಪತ್ರೆ ಏಡ್ಸ್ಸ್ ನಿಯಂತ್ರಣ ಕಛೇರಿ ಜಿಲ್ಲಾ ಮೇಲ್ವಿಚಾರಕ ಬಾಬುರಾವ ತಳವಾರ ಕರೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹೆಚ್.ಐ.ವಿ ಸೋಂಕಿನ ಕುರಿತು ವಿದ್ಯಾರ್ಥಿಗಳು ಮತ್ತು ಯುವಜನತೆ ಸಮಾಜದಲ್ಲಿ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ಜಿಲ್ಲಾ ಆಸ್ಪತ್ರೆ ಏಡ್ಸ್ಸ್ ನಿಯಂತ್ರಣ ಕಛೇರಿ ಜಿಲ್ಲಾ ಮೇಲ್ವಿಚಾರಕ ಬಾಬುರಾವ ತಳವಾರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಏಡ್ಸ್ಸ್ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೆಚ್.ಐ.ವಿ ಸೋಂಕಿತ ವ್ಯಕ್ತಿಗಳೊಂದಿಗೆ ತಾರತಮ್ಯ ಮತ್ತು ಕಳಂಕ ಹೋಗಲಾಡಿಸಲು ಸಮುದಾಯದ ಪಾತ್ರ ಅತ್ಯಂತ ಮುಖ್ಯವಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸಮಗ್ರ ಸಮಾಲೋಚನೆ ಮತ್ತು ಪರೀಕ್ಷಾ ಕೇಂದ್ರಗಳು ಲಭ್ಯವಿದ್ದು, ಸೋಂಕಿತರಿಗೆ ಉಚಿತ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಜನರು ಈ ಸೌಲಭ್ಯಗಳ ಬಗ್ಗೆ ಹೆಚ್ಚು ಜಾಗೃತರಾಗಬೇಕಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಏಡ್ಸ ಒಂದು ಗಂಭೀರವಾದ ಕಾಯಿಲೆ ಇದರ ಬಗ್ಗೆ ಯುವಜನತೆ ಎಚ್ಚರಿಕೆಯಿಂದ ಇರಬೇಕು ಎಂದರು. ಇದೇ ಸಂದರ್ಭದಲ್ಲಿ ಹೆಚ್.ಐ.ವಿ ಕುರಿತು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಸ್ಪರ್ಧೆಯಲ್ಲಿ ಸರಿಯಾದ ಉತ್ತರ ಹೇಳಿದವರಿಗೆ ಬಹುಮಾನಗಳನ್ನು ಕೂಡ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಎನ್.ಎಸ್.ಎಸ್. ಕೋಶದ ಸಂಯೋಜನಾಧಿಕಾರಿ ಪ್ರೊ. ಅಶೋಕಕುಮಾರ ಸುರಪುರ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ರುತುಜಾ ಅತಿಥಿಯರನ್ನು ಪರಿಚಯಿಸಿದರು. ಸಂತೋಷಿಮಾ ನಿರೂಪಿಸಿದರು. ಯುವ ರೆಡ್ ಕ್ರಾಸ್ ಘಟಕ ಸಂಯೋಜಕಿ ಡಾ. ಕಲಾವತಿ ಎಚ್. ಕಾಂಬಳೆ ವಂದಿಸಿದರು.