ಗುಂಪುಗಾರಿಕೆಯಲ್ಲಿ ನಂಬಿಕೆ ಇಲ್ಲ | ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ | ಕೇಂದ್ರ ನಾಯಕತ್ವದ ನಿರ್ಧಾರಕ್ಕೆ ಭಿನ್ನಮತಿಯರು ಬದ್ಧರಾಗಿರಬೇಕು | ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿಮತ
ಬೆಂಗಳೂರು: ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟದ ಬಗ್ಗೆ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷದಲ್ಲಿನ ಬಣಗಳು ತಾಳ್ಮೆಯಿಂದ ವರ್ತಿಸಿ, ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಚರ್ಚೆಯ ಮೂಲಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಬೇಕು ಎಂದರು.
ಪಕ್ಷದ ಹೈಕಮಾಂಡ್ ಶೀಘ್ರದಲ್ಲೇ ಕರ್ನಾಟಕ ಬಿಜೆಪಿಯಲ್ಲಿನ ಬೆಳವಣಿಗೆಗಳತ್ತ ಗಮನ ಹರಿಸಿ, ಎಲ್ಲ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿ, ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದರು.
‘ಕಾಂಗ್ರೆಸ್ ಪಕ್ಷದ ದುರಾಡಳಿತದಿಂದಾಗಿ ರಾಜ್ಯದಲ್ಲಿ ಜನರು, ಅದರಲ್ಲೂ ವಿಶೇಷವಾಗಿ ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸಾಚಾರ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇದರ ವಿರುದ್ಧ ಸಮರ ಸಾರಬೇಕಿದ್ದ ವಿರೋಧ ಪಕ್ಷ ಬಿಜೆಪಿ ಆಂತರಿಕ ಕಚ್ಚಾಟದಲ್ಲಿ ತೊಡಗಿರುವುದು ದುರದೃಷ್ಟಕರ’ ಎಂದು ಬೊಮ್ಮಾಯಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನನ್ನಾಗಿ ಬಿವೈ ವಿಜಯೇಂದ್ರ ಅವರನ್ನು 2023ರ ನವೆಂಬರ್ನಲ್ಲಿ ನೇಮಿಸಲಾಯಿತು. ವಿಜಯೇಂದ್ರ ಅವರನ್ನು ಬದಲಿಸಬೇಕೆಂದು ಬಿಜೆಪಿ ನಾಯಕರ ಗುಂಪೊಂದು ಸಾರ್ವಜನಿಕವಾಗಿಯೇ ಒತ್ತಾಯಿಸುತ್ತಿದ್ದು, ಪರ – ವಿರೋಧದ ಬಣಗಳಾಗಿ ಬದಲಾಗಿವೆ. ವಿಜಯೇಂದ್ರ ಅವರಿಗೆ ಪಕ್ಷದೊಳಗಿನ ಅಸಮಾಧಾನವನ್ನು ತಣಿಸಿ, ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪಕ್ಷವು ರಾಷ್ಟ್ರದಾದ್ಯಂತ ದಕ್ಷ ಆಡಳಿತವನ್ನು ನೀಡುತ್ತಿದೆ. ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು, ಗುಂಪುಗಾರಿಕೆಯಲ್ಲಿ ನನಗೆ ನಂಬಿಕೆ ಇಲ್ಲ. ಹೀಗಾಗಿ, ನಾನು ಯಾವುದೇ ಒಂದು ಗುಂಪಿನ ಸಭೆ ಕರೆಯುವ ಪ್ರಶ್ನೆ ಉದ್ಭವಿಸುವುದಿಲ್ಲ. ಎಲ್ಲರನ್ನು ಒಟ್ಟಿಗೆ ಸೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿರುವ ಹಲವು ನಾಯಕರಲ್ಲಿ ನಾನು ಒಬ್ಬ ಎಂದು ಅವರು ಹೇಳಿದರು.
ಸದ್ಯ ದೆಹಲಿಯಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಮತ್ತು ಇತರ ನಾಯಕರು ಮಂಗಳವಾರ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂಬ ವರದಿಗಳ ನಂತರ ಈ ಸ್ಪಷ್ಟನೆ ಬಂದಿದೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಇತರ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಎರಡೂ ಕಡೆಯ ಸದಸ್ಯರು ತಾಳ್ಮೆಯಿಂದ ವರ್ತಿಸಬೇಕು ಮತ್ತು ಚರ್ಚೆಯ ಮೂಲಕ ತಮ್ಮ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಬೇಕು. ಇದು ಸಾಧ್ಯವಾಗದಿದ್ದರೆ, ಅವರೆಲ್ಲರೂ ಕೇಂದ್ರ ನಾಯಕತ್ವದ ನಿರ್ಧಾರಕ್ಕೆ ಬದ್ಧರಾಗಿರಬೇಕು’ ಎಂದು ಹೇಳಿದರು.

ಭಿನ್ನಮತೀಯರ ಭೇಟಿಗೆ ಸಿಗದ ಬಿಜೆಪಿ ವರಿಷ್ಠರು
ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಪಕ್ಷದ ಭಿನ್ನಮತೀಯ ನಾಯಕರು ಬುಧವಾರ ಇಲ್ಲಿ ಸಭೆ ಸೇರಿ ಮುಂದಿನ ಹೋರಾಟದ ರಣತಂತ್ರ ರೂಪಿಸಿದ್ದಾರೆ. ಆದರೆ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಮಹದಾಸೆಗೆ ಫಲ ಸಿಗಲಿಲ್ಲ. ಆದರೆ ಅವರ ಪ್ರಯತ್ನವು ಉದ್ದೇಶಿತ ಫಲಿತಾಂಶಗಳನ್ನು ನೀಡಿದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕು.
ಬುಧವಾರ ಮುಕ್ತಾಯಗೊಂಡ ದೆಹಲಿ ವಿಧಾನಸಭಾ ಚುನಾವಣೆಯ ಕಾರ್ಯದಲ್ಲಿ ನಿರತರಾಗಿರುವ ಪಕ್ಷದ ಹೈಕಮಾಂಡ್, ಫೆಬ್ರವರಿ 8 ರಂದು ಫಲಿತಾಂಶಗಳ ನಂತರ ಕರ್ನಾಟಕದ ರಾಜಕೀಯ ಬಿಕ್ಕಟ್ಟನ್ನು ಪರಿಶೀಲಿಸುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಫೆಬ್ರವರಿ 9 ಅಥವಾ 10 ರಂದು ಕರ್ನಾಟಕ ಘಟಕದ ಪಕ್ಷದ ಅಧ್ಯಕ್ಷರನ್ನು ಸರ್ವಾನುಮತದಿಂದ ಘೋಷಿಸುವ ಸಾಧ್ಯತೆಯಿದೆ.
ರಾಜ್ಯ ಅಧ್ಯಕ್ಷರ ಹುದ್ದೆಗೆ ಚುನಾವಣೆ ಘೋಷಿಸುವುದು ಪಕ್ಷದ ನಿಯಮವಾಗಿಲ್ಲ. ರಾಜ್ಯ ಉಸ್ತುವಾರಿ ಮತ್ತು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಆಗಮಿಸಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ.
ಹೈಕಮಾಂಡ್, ವಿಶೇಷವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಶೀರ್ವಾದದೊಂದಿಗೆ ವಿಜಯೇಂದ್ರ ರಾಜ್ಯ ಅಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆಯಿದೆ. ಕೆಲವು ಭಿನ್ನಮತೀಯರನ್ನು ಸೇರಿಸಿಕೊಳ್ಳುವ ಮೂಲಕ ಮತ್ತು ಜಿಲ್ಲಾ ಅಧ್ಯಕ್ಷರನ್ನು ಬದಲಾಯಿಸುವ ಮೂಲಕ ಪದಾಧಿಕಾರಿಗಳನೆ ಮಾಡುವ ಯೋಜನೆಯಲ್ಲಿದೆ ಎಂದು ಅವರು ಹೇಳಿದರು.
ಚುನಾವಣೆ ಘೋಷಣೆಯಾದರೆ ಭಿನ್ನಮತೀಯ ಬಣದಲ್ಲಿ ಗುರುತಿಸಿಕೊಂಡು ತಾವು ಕೂಡ ಅಧ್ಯಕ್ಷ ಹುದ್ದೆಗೆ ಆಕಾಂಕ್ಷಿಯೆಂದು ಬಿಂಬಿಸಲು ಪ್ರಯತ್ನಿಸಿದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಮೂಲಕ ಸಮಾಧಾನಪಡಿಸಲಾಗುವುದು ಎಂದು ಬಿಜೆಪಿಯ ಆಂತರಿಕ ಮೂಲಗಳು ತಿಳಿಸಿವೆ.

