ಉದಯರಶ್ಮಿ ದಿನಪತ್ರಿಕೆ
ಕೆಂಭಾವಿ: ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡಲು ಸಾಧ್ಯ. ಸಾಧನೆಗೆ ಪರಿಶ್ರಮವೇ ಹೊರತು ಅನ್ಯಮಾರ್ಗವಲ್ಲ ಎಂದು ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಾರ್ವತಿ ಬಾಪೂಗೌಡ ಹೇಳಿದರು.
ಪಟ್ಟಣದಲ್ಲಿರುವ ಹಿಲ್ ಟಾಪ್ ಕಾಲೋನಿಯಲ್ಲಿರುವ ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಅಂಕಗಳ ಜೊತೆಗೆ ಜೀವನದ ಮೌಲ್ಯಗಳ ಬೆಳೆಸಿಕೊಳ್ಳಬೇಕಾದ ಅಗತ್ಯವಿದೆ ಎಂದವರು, ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ನಿರಾಶೆಯಾಗಬಾರದು, ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯಾಳಗಿ ಪ್ರೌಢ ಶಾಲೆಯ ಮುಖ್ಯಗುರು ಶಿವಣ್ಣಗೌಡ ಪಾಟೀಲ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬಹಳ ಪ್ರಮುಖವಾಗಿರುತ್ತದೆ, ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಬೇಕು ಸಕರಾತ್ಮಕ ಚಿಂತನೆಗಳು ಮೈಗೂಡಿಸಿಕೊಂಡು. ಮುನ್ನಡೆದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಗುರಿ ಸಾಧನೆ ಮಾಡಬೇಕಾದರೆ ನಿರಂತರ ಪ್ರಯತ್ನ ಅಗತ್ಯವಾಗಿದೆ, ಮಕ್ಕಳ ಬಗ್ಗೆ ಪಾಲಕರು ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಪಾಲಕರು ಮಕ್ಕಳ ಮನಸ್ಸು ಅರ್ಥಮಾಡಿಕೊಳ್ಳಬೇಕು, ಅವರಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿಯಿದೆಯೋ ಅದೇ ಕ್ಷೇತ್ರದಲ್ಲಿ ಅವರನ್ನು ಪ್ರೋತ್ಸಾಹಿಸಬೇಕು ಅಂದಾಗ ಮಾತ್ರ ಮಕ್ಕಳು ನಿಶ್ಚಿತ ಗುರಿ ತಲುಪುತ್ತಾರೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ವಿಶ್ವನಾಥರೆಡ್ಡಿ ಅಬ್ಬೆ ತುಮಕೂರು, ಡಾ. ಮಹಾಂತೇಶ ಸುಬೇದಾರ, ಸಿದ್ದು ನಡಕೂರ, ರುದ್ರಗೌಡ ಅಸಂತಪುರ, ಶ್ರೇಶೈಲ್ ಸಿಂದಗಿ, ಸುರೇಶ ಪರಸನಹಳ್ಳಿ, ಸೇರಿದಂತೆ ಅನೇಕ ವಿದ್ಯಾರ್ಥಿಗಳು ಹಾಜರಿದ್ದರು.

