ಬೀಮಾತೀರದ ಹಂತಕ ಬಾಗಪ್ಪ ಹರಿಜನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು | ನಾಲ್ವರು ಆರೋಪಿಗಳು ವಶಕ್ಕೆ | ಪೊಲೀಸರ ಸಾಹಸಕ್ಕೆ ವ್ಯಾಪಕ ಪ್ರಶಂಸೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭೀಮಾತೀರದ ಹಂತಕನೆಂದು ಕುಖ್ಯಾತಿ ಪಡೆದಿದ್ದ ಶಾರ್ಪಶೂಟರ್ ಬಾಗಪ್ಪ ಹರಿಜನ ನನ್ನು ಫೆ.೧೧ರಂದು ರಾತ್ರಿ ಮಾರಕಾಸ್ತ್ರಗಳಿಂದ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಗಳನ್ನು ವಿಜಯಪುರ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ ವಿಜಯಪುರ ಪೋಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು, ಕಳೆದ ಫೆ.11ರಂದು ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಾ ನಗರದಲ್ಲಿ ರಾತ್ರಿ 09.30 ಗಂಟೆಯ ಸುಮಾರಿಗೆ ಪಿಂಟು ಹಾಗೂ ಇನ್ನೂ 4-5 ಜನ ದುಷ್ಕರ್ಮಿಗಳು ಸೇರಿಕೊಂಡು ಭಾಗಪ್ಪ ಹುಚ್ಚಪ್ಪ ಹರಿಜನ ಈತನಿಗೆ ಪಿಸ್ತೂಲ್ನಿಂದ ಗುಂಡು ಹಾರಿಸಿ, ಕೊಡಲಿ ಹಾಗೂ ಮಚ್ಚಿನಿಂದ ಕುತ್ತಿಗೆಗೆ, ಎದೆಗೆ ಮತ್ತು ಕೈಗಳಿಗೆ ಹಲ್ಲೆ ಮಾಡಿ ಕೊಲೆ ಮಾಡಿ ಪರಾರಿಯಾಗಿದ್ದರು. ಭಾಗಪ್ಪ ಹರಿಜನ ಅಂದು ಸ್ಥಳದಲ್ಲಿಯೇ ಮೃತಪಟ್ಟಿದ್ದ. ಈ ಬಗ್ಗೆ ಮೃತನ ಮಗಳಾದ ಗಂಗೂಬಾಯಿ ಭಾಗಪ್ಪ ಹರಿಜನ, ಸಾ: ಬಬಲಾದಿ ತಾ: ಇಂಡಿ ರವರು ನೀಡಿದ ದೂರಿನ ಮೇರೆಗೆ ಗಾಂಧಿಚೌಕ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ನಂ: 32/2025 ಕಲಂ: 189(2), 191(2), 191(3), 352, 103, 190 ಬಿಎನ್ಎಸ್ ಆ್ಯಕ್ಟ್-2023 ಮತ್ತು 25(ಎ) ಭಾರತೀಯ ಆಯುಧ ಕಾಯ್ದೆ ಅಡಿ ಪ್ರಕರಣ ದಾಖಲಾಗಿರುತ್ತದೆ. ಮೃತ ಭಾಗಪ್ಪ ಹುಚ್ಚಪ್ಪ ಹರಿಜನ ಈತನ ಮೇಲೆ 10 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಅಫಜಲಪೂರ ಪೊಲೀಸ್ ಠಾಣೆಯಲ್ಲಿ 01 ಕೊಲೆ ಪ್ರಕರಣ ಸೇರಿದಂತೆ. ಒಟ್ಟು 06 ಕೊಲೆ ಪ್ರಕರಣಗಳು ದಾಖಲಾಗಿರುತ್ತವೆ ಎಂದು ತಿಳಿಸಿದರು.
ಇತ್ತೀಚೆಗೆ ವಿಜಯಪುರ ನಗರದಲ್ಲಿ ರವಿ ಮೇಲಿನಕೇರಿ ಎಂಬುವವರಿಗೆ ತುಳಸಿರಾಮ ಹರಿಜನ ಹಾಗೂ ಆತನ ಸಹಚರರಾದ ಅಲೇಕ್ಸ್ ಗೊಲ್ಲರ, ಶಣ್ಮುಖ ನಡುವಿನಕೇರಿ, ಪ್ರಕಾಶ ಗೊಲ್ಲರ, ಮುರುಗೇಶ ಉಳ್ಳಾಗಡ್ಡಿ, ರಾಜೇಸಾಬ ರುದ್ರವಾಡಿ ಇವರು ಸೇರಿಕೊಂಡು ಕೊಲೆ ಮಾಡಿದ್ದು, ಆರೋಪಿತರು ಸದ್ಯ ನ್ಯಾಯಾಂಗ ಬಂಧನದಲ್ಲಿರುತ್ತಾರೆ, ಭಾಗಪ್ಪ ಹರಿಜನ ಹಾಗೂ ರವಿ ಮೇಲಿನಕೇರಿ ಇವರು ಸಂಬಂಧಿಕರಾಗಿರುತ್ತಾರೆ. ಇವರಿಬ್ಬರ ನಡುವೆ ಕೆಲವು ವರ್ಷಗಳಿಂದ ಹಣಕಾಸಿನ ವ್ಯವಹಾರವಿದ್ದು, ಇಬ್ಬರೂ ಸೇರಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು, ರವಿ ಮೇಲಿನಕೇರಿ ಮೃತಪಟ್ಟ ನಂತರ ಭಾಗಪ್ಪ ಹರಿಜನ ರವಿ ಮೇಲಿನಕೇರಿ ತಮ್ಮನಾದ ಪ್ರಕಾಶ ಮೇಲಿನಕೇರಿ ಈತನಿಗೆ, ನಿಮ್ಮ ಅಣ್ಣ ನನ್ನ ಹೆಸರು ಹೇಳಿ ಹಣ, ಆಸ್ತಿ ಮತ್ತು ವಾಹನ ಎಲ್ಲವನ್ನು ಮಾಡಿಕೊಂಡಿರುತ್ತಾನೆ. ಅವೆಲ್ಲವನ್ನು ನನಗೆ ಬಿಟ್ಟು ಕೊಡಬೇಕು ಅಂತಾ ಒತ್ತಡ ಹಾಕುತ್ತಿದ್ದನಲ್ಲದೆ, ಹಲವಾರು ಬಾರಿ ಬೆದರಿಕೆ ಸಹ ಹಾಕಿದ್ದನಂತೆ. ಇತ್ತೀಚೆಗೆ ಭಾಗಪ್ಪ ಈತನು ಪ್ರಕಾಶ ಮೇಲಿನಕೇರಿಗೆ ನೀವು ನನಗೆ ಆಸ್ತಿ ಬಿಟ್ಟುಕೊಡಬೇಕು. ಇಲ್ಲದಿದ್ದರೆ ರೂ.10 ಕೋಟಿ ಹಣ ಕೊಡಬೇಕು. ಅದೂ ಆಗದಿದ್ದರೆ ನಿಮ್ಮ ಅಣ್ಣನ ಹೆಂಡತಿಯನ್ನು ನನ್ನ ಹತ್ತಿರ ಕಳುಹಿಸು ಎಂದು ಅವನ ಅಣ್ಣನ ಹೆಂಡತಿಯ ಕುರಿತಾಗಿ ಅವಾಚ್ಯ ಪದ ಬಳಕೆ ಮಾಡಿ ಮಾತನಾಡಿರುತ್ತಾನೆ. ಅಲ್ಲದೆ ನಾನು ಹೇಳಿದಂತೆ ಮಾಡದಿದ್ದರೆ ನಿಮ್ಮ ಅಣ್ಣನಿಗೆ ಹೇಗೆ ಹೊಡೆದಿರುತ್ತೇನೆಯೋ ಅದೇ ತರಹ ನಿನಗೂ ಹೊಡೆಯುತ್ತೇನೆ ಅಂತಾ ಧಮಕಿ ಹಾಕಿದ್ದರಿಂದ. ಪ್ರಕಾಶ ಮೇಲಿನಕೇರಿ ಈತನಿಗೆ ತನ್ನ ಅಣ್ಣನ ಕೊಲೆ ಭಾಗಪ್ಪ ಹರಿಜನ ಈತನ ಆಜ್ಞೆಯ ಮೇರೆಗೆ ನಡೆದಿರುತ್ತದೆ ಅಂತಾ ಖಚಿತವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಭಾಗಪ್ಪ ಹರಿಜನ ಈತನಿಗೆ ಮುಗಿಸಿ ಬಿಡಬೇಕು ಅಂತಾ ಪ್ರಕಾಶ ಮೇಲಿನಕೇರಿ ತನ್ನ ಸಂಬಂಧಿಕ ಹಾಗೂ ಸ್ನೇಹಿತರೊಂದಿಗೆ ಸಂಚು ಮಾಡಿ. ದಿನಾಂಕ: 11.02.2025 ರಂದು ರಾತ್ರಿ 09.30 ಗಂಟೆಯ ಸುಮಾರಿಗೆ ಭಾಗಪ್ಪ ಹರಿಜನ ಈತನು ತನ್ನ ಮನೆಯ ಹೊರಗಡೆ ವಾಕಿಂಗ್ ಮಾಡುತ್ತಿದ್ದಾಗ. ಆಟೋ ಹಾಗೂ ಬೈಕ್ನಲ್ಲಿ ಬಂದು. ಪಿಸ್ತೂಲ್ನಿಂದ ಗುಂಡು ಹಾರಿಸಿ, ಕೊಡಲಿ, ಮಚ್ಚು ಹಾಗೂ ಜಂಬೆಯಿಂದ ಹೊಡೆದು ಕೊಲೆ ಮಾಡಿರುತ್ತಾರೆ ಎಂದು ವಿವರಿಸಿದರು.

ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತರಾದ
1) ಪ್ರಕಾಶ @ ಪಿಂಟು ಲಕ್ಷ್ಮಣ ಮೇಲಿನಕೇರಿ, 26 ವರ್ಷ, ಸಾ: ಅಗರಖೇಡ, ತಾ: ಇಂಡಿ
2) ರಾಹುಲ ಭೀಮಾಶಂಕರ ತಳಕೇರಿ, 20 ವರ್ಷ, ಸಾ: ಹೋರ್ತಿ, ತಾ: ಇಂಡಿ
3) ಸುದೀಪ ತಾಯಿ: ರೇಣುಕಾ ಕಾಂಬಳೆ, 20 ವರ್ಷ, ಸಾ: ಅಗರಖೇಡ, ತಾ: ಇಂಡಿ
4) ಮಣಿಕಂಠ @ ಗದಿಗೆಪ್ಪ ಶಂಕ್ರಪ್ಪ ಬೆನಕೊಪ್ಪ, 27 ವರ್ಷ, ಸಾ: ಬಸವೇಶ್ವರ ಆಶ್ರಯ ಕಾಲನಿ, ಬೈಲಹೊಂಗಲ, ಜಿ: ಬೆಳಗಾವಿ.
ಇವರನ್ನು ಬಂಧಿಸಲಾಗಿದ್ದು ಆರೋಪಿತರಿಂದ ಕ್ರತ್ಯಕ್ಕೆ ಬಳಸಲಾದ ಆಯುಧ ಹಾಗೂ ವಾಹನಗಳನ್ನು ಜಪ್ತಿ ಹಾಗೂ ಇನ್ನಿತರ ತನಿಖಾ ಕಾರ್ಯ ಪ್ರಗತಿಯಲ್ಲಿರುತ್ತದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ಪೊಲೀಸರ ಸಾಹಸಕ್ಕೆ ಪ್ರಶಂಸೆ
ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಅವರ ಮಾರ್ಗದರ್ಶನದಲ್ಲಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ಹಟ್ಟಿ, ಡಿವೈಎಸ್ಪಿ ಬಸವರಾಜ್ ಎಲಿಗಾರ್, ಸಿಪಿಐ ಪ್ರದೀಪ್ ತಳಕೇರಿ, ಸಿಪಿಐ ಮಲ್ಲಯ್ಯ ಮಠಪತಿ, ಪಿಎಸ್ ಐ ರಾಜು ನೇತೃತ್ವದಲ್ಲಿ ಜಿಲ್ಲಾ ಪೊಲೀಸರೇ ಒಂದು ತಂಡವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೇವಲ 24 ಗಂಟೆಗಳಲ್ಲಿ ಪೊಲೀಸರು ಕ್ಷಿಪ್ತ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿ ಸಾಹಸ ಮೆರೆದಿದ್ದಾರೆ. ಪೊಲೀಸರ ಕಾರ್ಯವೈಖರಿಗೆ ಜಿಲ್ಲೆಯಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದೆ.

