ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಾಲ್ಯದಲ್ಲಿಯೇ ಸೈನ್ಯ ಕಟ್ಟಿದ ಕೀರ್ತಿ ಶಿವಾಜಿ ಮಹಾರಾಜರವರದ್ದು, ಅವರ ಧೈರ್ಯ, ಸ್ಥೈರ್ಯ, ಸಾಹಸ ಹಾಗೂ ಮಹಾತ್ವಾಕಾಂಕ್ಷಿ ಗುಣಗಳನ್ನು ಇಂದಿನ ಯುವಕರು ಮೈಗೂಡಿಸಿಕೊಳ್ಳಬೇಕುಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಬುಧವಾರ ಹಮ್ಮಿಕೊಂಡ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು, ಶಿವಾಜಿ ಮಹಾರಾಜರು, ತಾಯಿಯ ಮಾರ್ಗದರ್ಶನದಿಂದ ಅಪ್ರತಿಮ ವ್ಯಕ್ತಿತ್ವವನ್ನು ರೂಪಿಸಿಕೊಂಡರು ಎಂದು ಹೇಳಿದರು.
ಶಿವಾಜಿ ಮಹಾರಾಜರು ಉತ್ತಮ ಆಡಳಿತಗಾರರಾಗಿದ್ದರು. ಗೆರಿಲ್ಲಾ ಯುದ್ದ ಕೌಶಲ್ಯ ಸೈನ್ಯದಲ್ಲಿ ಅಳವಡಿಸಿಕೊಂಡಿದ್ದ ಅವರ ಧೈರ್ಯ-ಸಾಹಸ, ಉತ್ತಮ ಆಡಳಿತ ಇಂದಿನ ಪಿಳಿಗೆಗೆ ಪ್ರೇರಣಾದಾಯಕವಾಗಿದೆ ಎಂದು ಅವರು ಹೇಳಿದರು.
ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಉಪನ್ಯಾಸ ನೀಡಿದ ಡಾ. ಆನಂದ ಕುಲಕರ್ಣಿ ಅವರು ಶಿವಾಜಿ ಮಹಾರಾಜರ ಮಹಾನ ವ್ಯಕ್ತಿತ್ವ ದಾರ್ಶನಿಕ ವಿಚಾರಧಾರೆಗಳು, ಹುಟ್ಟು, ಬಾಲ್ಯ ಹಾಗೂ ಸಾಮ್ರಾಜ್ಯ ಕಟ್ಟಿದ ಕುರಿತು ಉಪನ್ಯಾಸದ ಮೂಲಕ ಬೆಳಕು ಚೆಲ್ಲಿದರು.
ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ ಮಾತನಾಡಿದರು. ನಿವೃತ್ತ ಶಿಕ್ಷಕ ಮಮದಾಪುರ ನಿರ್ವಹಿಸಿ, ವಂದಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ರಾಹುಲ ಜಾಧವ, ವಿಠ್ಠಲ ಹೊಸಪೇಟೆ, ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಿಜಯಕುಮಾರ್ ಚವ್ಹಾಣ, ನಿವೃತ್ತ ಪ್ರಾಂಶುಪಾಲ ಸದಾಶಿವ ಪವಾರ, ವಿವಿಧ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಮೆರವಣಿಗೆಗೆ ಚಾಲನೆ
ಜಯಂತಿ ಕಾರ್ಯಕ್ರಮಕ್ಕೂ ಮೊದಲು ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ನಗರದ ಛತ್ರಪತಿ ಶಿವಾಜಿ ವೃತ್ತದಲ್ಲಿ ಚಾಲನೆ ನೀಡಿದರು.
ಮೆರವಣಿಗೆಯೂ ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ, ಕನಕದಾಸ ವೃತ್ತ ಮಾರ್ಗವಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರಕ್ಕೆ ತಲುಪಿ ಸಮಾವೇಶಗೊಂಡಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸೇರಿದಂತೆ ಸುರೇಶ ಬಿಜಾಪುರ, ಭೀಮರಾಯ ಜಿಗಜಿಣಗಿ, ದೇವೆಂದ್ರ ಮಿರೆಕರ, ಸೋಮನಗೌಡ ಕಲ್ಲೂರ, ವಿದ್ಯಾವತಿ ಅಂಕಲಗಿ, ಗಿರೀಶ್ ಕುಲಕರ್ಣಿ ಉಪಸ್ಥಿತರಿದ್ದರು.

ಸಚಿವ ಎಂ.ಬಿ.ಪಾಟೀಲರಿಂದ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ
ವಿಜಯಪುರ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಅವರು ವಿಜಯಪುರ ನಗರದಲ್ಲಿರುವ ಛತ್ರಪತಿ ಶಿವಾಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

