ಕಂದಾಯ ಇಲಾಖೆ ಘೋಷಣೆ | ಸಚಿವ ಕೃಷ್ಣ ಬೈರೇಗೌಡ ತೀರ್ಮಾನ | ಹಣ ಡಬ್ಲಿಂಗ್ ಆಸೆಯಿಂದ ಮೋಸ ಹೋಗಿದ್ದ ಗ್ರಾಹಕರು
ಬೆಂಗಳೂರು: ಐಎಂಎ ಹಗರಣದಲ್ಲಿ ಹಣ ಕಳೆದುಕೊಂಡ ಎಲ್ಲಾ ಜನರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಮೊತ್ತವನ್ನು ನೀಡುವುದಾಗಿ ಕಂದಾಯ ಇಲಾಖೆ ಸೋಮವಾರ ಘೋಷಿಸಿದೆ.
ಬಹುಕೋಟಿ ಹಗರಣ ನಡೆದ ನಂತರ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಈ ಎಲ್ಲಾ ಆಸ್ತಿಗಳನ್ನೂ ಮಾರಿ ರಂಜಾನ್ ಹಬ್ಬಕ್ಕೆ ಮುನ್ನ ಮೋಸ ಹೋದವರಿಗೆ ಹಣ ಹಿಂತಿರುಗಿಸುವ ಸಂಬಂಧ ಸಚಿವ ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿ ಹಲವು ತೀರ್ಮಾನಗಳನ್ನು ಕೈಗೊಂಡಿದ್ದಾರೆ.
ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದು, ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ ಹಲವರು ಭಾಗಿಯಾಗಿದ್ದರು.

“ರಂಜಾನ್ ಹಬ್ಬಕ್ಕೂ ಹತ್ತು ದಿನ ಮೊದಲೇ ಐಎಂಎನಲ್ಲಿ ಹಣ ಹೂಡಿ ಮೋಸ ಹೋದವರಿಗೆ ಅವರ ಹೂಡಿಕೆಯ ಅನುಪಾತದ ಆಧಾರದಲ್ಲಿ ಪರಿಹಾರ ನೀಡಲು ಕ್ರಮವಹಿಸಲಾಗುವುದು.”
– ಕೃಷ್ಣ ಬೈರೇಗೌಡ
ಕಂದಾಯ ಸಚಿವರು

ಹಣ ಡಬ್ಲಿಂಗ್ ಆಸೆಯಿಂದ ಮೋಸ ಹೋದ ಗ್ರಾಹಕರು
ಹಣ ಡಬ್ಲಿಂಗ್ ಆಸೆಯಿಂದಾಗಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಠೇವಣಿದಾರರ ಖಾತೆಗಳ ಮೂಲಕ 3213.58 ಕೋಟಿ ರೂ.ಗಳನ್ನು ಐಎಂಎ ಕಂಪೆನಿಯಲ್ಲಿ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಕಂಪೆನಿಯ ಒಟ್ಟು ಠೇವಣಿದಾರರ ಸಂಖ್ಯೆ 69069 ಆಗಿದ್ದು, ಈ ಪೈಕಿ 1400 ಕೋಟಿ ರೂ.ಗಳನ್ನು ಲಾಭಾಂಶದ ಮಾದರಿಯಲ್ಲಿ ಐಎಂಎ ಕಾಲಕಾಲಕ್ಕೆ ಠೇವಣಿದಾರರಿಗೆ ನೀಡುತ್ತಾ ಬಂದಿದೆ. ಹಗರಣ ಬೆಳಕಿಗೆ ಬಂದ ನಂತರ ವಿಶೇಷ ನ್ಯಾಯಾಲಯದ ಆದೇಶದಂತೆ ಕಂಪೆನಿ ಖಾತೆಯಲ್ಲಿದ್ದ 19.12 ಕೋಟಿ ರೂ.ಗಳನ್ನು 50,000 ರೂ.ಗಳಂತೆ 6858 ಜನ ಸಂತ್ರಸ್ತರ ಖಾತೆಗಳಿಗೆ 2022 ಏಪ್ರಿಲ್ನಲ್ಲಿ ಜಮೆ ಮಾಡಲಾಗಿತ್ತು ಎಂದು ಕಂದಾಯ ಇಲಾಖೆ ಪ್ರಕಟನೆ ನೀಡಿದೆ.
ಬಾಕ್ಸ್ ೨
ಒಟ್ಟು 534.5 ಕೋಟಿ ರೂ. ಸರ್ಕಾರ ಮುಟ್ಟುಗೋಲು
ಐಎಂಎ ಕಂಪೆನಿಗೆ ಸಂಬಂಧಿಸಿದ ಹತ್ತಕ್ಕೂ ಹೆಚ್ಚು ಆಸ್ತಿಗಳನ್ನು ಈಗಾಗಲೇ ಸರ್ಕಾರ ವಶಕ್ಕೆ ಪಡೆದಿದೆ. ಚರಾಸ್ಥಿಗಳ ಮೌಲ್ಯ 106.92 ಕೋಟಿ ಹಾಗೂ ಸ್ಥಿರಾಸ್ತಿಗಳ ಮೌಲ್ಯ 401.92 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದಲ್ಲದೆ, ಕಂಪೆನಿಗೆ ಸಂಬಂಧಿಸಿದ ವಿವಿಧ ಬ್ಯಾಂಕ್ ಖಾತೆಗಳಿಂದ 2.88 ಕೋಟಿ ರೂ., ನಗದು ಹಣ 11.72 ರೂ. ಹೂಡಿಕೆ ಪತ್ರ 11.06 ಕೋಟಿ ರೂ. ಸೇರಿದಂತೆ ಒಟ್ಟಾರೆ 534.5 ಕೋಟಿ ರೂ.ಗಳನ್ನು ಸರ್ಕಾರ ಮುಟ್ಟುಗೋಲು ಈಗಾಗಲೇ ಹಾಕಿದೆ ಎಂದು ಇಲಾಖೆ ಹೇಳಿದೆ.
ಬಾಕ್ಸ್ ೩
ಅರ್ಹ ಸಂತ್ರಸ್ತರಿಗೆ ಹರಿಹಾರ
ಐಎಂಎ ಹಗರಣ ಬೆಳಕಿಗೆ ಬಂದಾಗಲೇ ಸರ್ಕಾರ ಸಂತ್ರಸ್ತರನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ನೀಡಿತ್ತು. ಈ ವೇಳೆ ಐಎಂಎ ಜೊತೆ ಆರ್ಥಿಕ ವ್ಯವಹಾರ ಮಾಡಿದ ಬ್ಯಾಂಕ್ ಖಾತೆ ಚಾಲ್ತಿಯಲ್ಲಿದ್ದರೆ ಅದನ್ನೇ ಅಧಿಕೃತ ಎಂದು ಪರಿಗಣಿಸಲಾಯಿತು. ಒಂದು ವೇಳೆ ಖಾತೆ ನಿಷ್ಕ್ರಿಯವಾಗಿದ್ದರೆ ಠೇವಣಿಪತ್ರ, ಷೇರುಪ್ರಮಾಣ ಪತ್ರದಂತಹ ದಾಖಲಾತಿಗಳನ್ನು ಕೋರಿತ್ತು.
ಅರ್ಜಿ ಸಲ್ಲಿಸುವವರ ಮಾಹಿತಿಗಳನ್ನು ಐಎಂಎ ಸಂಸ್ಥೆಯಲ್ಲಿರುವ ದತ್ತಾಂಶಗಳೊಂದಿಗೆ ಹೊಂದಾಣಿಕೆ ಮಾಡಿ ಹಾಗೂ ಆಧಾರ್ ಕಾರ್ಡ್, ಇತರ ಮಾಹಿತಿಗಳನ್ನು ಸಮೀಕರಿಸಿ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ. ಒಂದು ವೇಳೆ ಫಲಾನುಭವಿಗಳು ಮೃತಪಟ್ಟಿದ್ದರೆ ಠೇವಣಿದಾರರು ಸೂಚಿಸಿರುವ ನಾಮನಿರ್ದೇಶಿತ ವ್ಯಕ್ತಿಗಳಿಗೆ ಆ ಹಣವನ್ನು ನೀಡಲು ಕ್ರಮವಹಿಸಲಾಗಿದೆ ಎಂದು ಕಂದಾಯ ಇಲಾಖೆ ಪ್ರಕಟಿಸಿದೆ.

