ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಪುರಸ್ಕೃತ ಯೋಜನೆಗಳು ಜಾರಿಯಲ್ಲಿದ್ದು, ಈ ಯೋಜನೆಗಳ ಲಾಭ ನಿಗದಿತ ಅವಧಿಯಲ್ಲಿ ಗ್ರಾಮೀಣ ಜನರಿಗೆ ತಲುಪಿಸುವ ಮೂಲಕ ಪ್ರಗತಿ ಸಾಧಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚಿಸಿದರು.
ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಯೋಜನೆಗಳ ಪ್ರಗತಿಗೆ ಸ್ಥಳೀಯ ಮಟ್ಟದ ಅಧಿಕಾರಿ, ಸಿಬ್ಬಂದಿಗಳ ಪಾತ್ರ ಬಹುಮುಖ್ಯವಾಗಿರುತ್ತದೆ. ಎಲ್ಲ ಅಧಿಕಾರಿ-ಸಿಬ್ಬಂದಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ನಿಗದಿತ ಸಮಯದಲ್ಲಿ ಇಲಾಖೆಯ ಎಲ್ಲ ಯೋಜನೆಗಳ ಪ್ರಗತಿ ಸಾಧಿಸುವಂತೆ ಅವರು ಹೇಳಿದರು.
ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆ ಮತ್ತು ಮಹಿಳಾ ಗ್ರಾಮ ಸಭೆ ದಿನಾಂಕಗಳನ್ನು ಪ್ರತಿ ಗ್ರಾ.ಪಂ. ಗಳಲ್ಲಿ ಕಡ್ಡಾಯವಾಗಿ ನಿಗದಿಪಡಿಸಬೇಕು. ಜೊತೆಗೆ ಬಾಕಿ ಉಳಿದ ಗ್ರಾಮ ಸಭೆಗಳ ದಿನಾಂಕಗಳನ್ನು ಹಾಗೂ ಸಭೆಗಳನ್ನು ನಾಳೆ ೧೮.೦೩.೨೦೨೫ರೊಳಗೆ ಪೂರ್ಣಗೊಳಿಸಬೇಕು. ಒಂದು ವೇಳೆ ನಿಗದಿತ ಸಮಯದಲ್ಲಿ ಪೂರ್ಣಗೊಳಿಸದಿದ್ದಲ್ಲಿ ಅಂತಹ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಅವರು ಅವರು ಎಚ್ಚರಿಕೆ ನೀಡಿದರು.
ಸಾರ್ವಜನಿಕರಿಂದ ಸ್ವೀಕೃತಿಯಾದ ಇ-ಸ್ವತ್ತು ಸಕಾಲ ಅರ್ಜಿಗಳು ಮತ್ತು ʼಜನಸ್ಪಂದನʼ- ಕರ್ನಾಟಕ ಸರ್ಕಾರದ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ ಐಜಿಪಿಆರ್ಎಸ್ಅಡಿ ಸ್ವೀಕೃತಗೊಂಡ ಅರ್ಜಿಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡಬೇಕು. ಪ್ರತಿ ಮಾಹೆಯ ಮೊದಲನೇ ೩ ದಿನಗಳಂದು ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು ಮತ್ತು ಪ್ರತಿವಾರ ನಿರಂತರವಾಗಿ ಮತ್ತು ಕಡ್ಡಾಯವಾಗಿ ಇ-ಸ್ವತ್ತು ಸಕಾಲ ಅರ್ಜಿಗಳು ಮತ್ತು ʼಜನಸ್ಪಂದನʼ- ಕರ್ನಾಟಕ ಸರ್ಕಾರದ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ ಐಜಿಪಿಆರ್ಎಸ್ಅಡಿ ಸ್ವೀಕೃತಗೊಂಡ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ತೆರಿಗೆ ಸಂಗ್ರಹಣೆ- ರಾಜ್ಯದಲ್ಲಿಯೇ ಬಬಲೇಶ್ವರ-ಚಡಚಣ ಪ್ರಗತಿ : ಗ್ರಾಮ ಪಂಚಾಯತಿ ತೆರಿಗೆ ಸಂಗ್ರಹಣೆಯಲ್ಲಿ ರಾಜ್ಯದಲ್ಲಿಯೇ ಬಬಲೇಶ್ವರ ಹಾಗೂ ಚಡಚಣ ತಾಲೂಕುಗಳಲ್ಲಿ ಶೇ.೧೦೦ ರಷ್ಟು ಪ್ರಗತಿಯನ್ನು ಸಾಧಿಸಿವೆ. ಪ್ರಸ್ತುತ ಸಾಲಿನಲ್ಲಿ ಈಗ ಜಿಲ್ಲೆಯ ತೆರಿಗೆ ಸಂಗ್ರಹಣೆಯ ಪ್ರಗತಿಯು ಶೇ.೬೯.೦೦ ರಷ್ಟಿದೆ. ಮಾರ್ಚ್ ಅಂತ್ಯದವರೆಗೆ ಉಳಿದ ಎಲ್ಲ ತಾಲೂಕುಗಳಲ್ಲಿ ಕಡ್ಡಾಯವಾಗಿ ಶೇ. ೧೦೦ ರಷ್ಟು ಪ್ರಗತಿ ಸಾಧಿಸುವಂತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬಾಕಿ ಇರುವ ಪ್ರಧಾನ ಮಂತ್ರಿ ಆವಾಸ ಯೋಜನೆ (ಗ್ರಾಮೀಣ)ಯಡಿ ಫಲಾನುಭವಿಗಳ ಮಂಜೂರಾತಿ ಪ್ರಕ್ರಿಯೆ ಮುಂಬರುವ ಒಂದು ವಾರದಲ್ಲಿ ಪ್ರತಿ ತಾಲೂಕಿನಲ್ಲಿ ಶೇ.೪೦.೦೦ ರಷ್ಟು ಪ್ರಗತಿ ಸಾಧಿಸಬೇಕು. ಸದರಿ ಯೋಜನೆಯಡಿ ವಸತಿ ರಹಿತ ಫಲಾನುಭವಿಗಳ ಸಮೀಕ್ಷೆ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಸಮೀಕ್ಷೆ ಮಾಡಲು ಬಾಕಿ ಉಳಿದ ಫಲಾನುಭವಿಗಳನ್ನು ಸೇರ್ಪಡೆಗೊಳಿಸಿ, ಅರ್ಹ ಫಲಾನುಭವಿಗಳು ಆಯ್ಕೆ ಪಟ್ಟಿಯಿಂದ ಹೊರಗುಳಿಯದಂತೆ ತುರ್ತು ಕ್ರಮ ಕೈಗೊಳ್ಳಬೇಕು. ಜಿಲ್ಲೆಗೆ ನೀಡಲಾಗಿರುವ ಎಂಪಿಕ್ ವಾರ್ಷಿಕ ಗುರಿಗೆ ಎದುರಾಗಿ ಶೇ. ೯೦.೦೦ ರಷ್ಟು ಪ್ರಗತಿ ಸಾಧಿಸಬೇಕು. ಮುಖ್ಯಮಂತ್ರಿ ಗ್ರಾಮೀಣ ನಿವೇಶನ ಯೋಜನೆಯಡಿ ಅಭಿವೃದ್ಧಿ ಹಂತದಲ್ಲಿರುವ ಜಮೀನು ಪ್ರಕರಣಗಳ ಕುರಿತು ಇರುವ ಸಮಸ್ಯೆಗಳನ್ನು ಪರಿಹರಿಸಿಕೊಂಡು ತುರ್ತಾಗಿ ಅಗತ್ಯ ಕ್ರಮಗಳನ್ನು ಕೈಗೊಂಡು ಪ್ರಗತಿ ಸಾಧಿಸಬೇಕು. ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆಗೆ ಹಾಗೂ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಹಂತದಲ್ಲಿರುವ ಜಮೀನಿನ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದರು.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪ್ರಸ್ತುತ ಸಾಲಿನಲ್ಲಿ ವಿಜಯಪುರ ಜಿಲ್ಲೆಗೆ ೪೨.೦೦ಲಕ್ಷ ಮಾನವ ದಿನಗಳ ಗುರಿ ನಿಗದಿಪಡಿಸಲಾಗಿದೆ. ಈಗಾಗಲೇ ೪೦.೦೦ಲಕ್ಷ ಕ್ಕಿಂತ ಹೆಚ್ಚು ಮಾನವ ದಿನಗಳ ಸೃಜನೆಯಾಗಿದೆ. ಪ್ರಸ್ತುತ ವರ್ಷ ಮುಕ್ತಾಯ ಹಂತದಲ್ಲಿರುವುದರಿಂದ ಬಾಕಿ ಉಳಿದ ಮಾನವ ದಿನಗಳನ್ನು ನಿಗದಿತ ಅವಧಿಯಲ್ಲಿ ಸೃಜನೆ ಮಾಡಬೇಕು. ಇದಕ್ಕೆ ಪೂರಕವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸಾರ್ವಜನಿಕರಿಗೆ ನರೇಗಾ ಯೋಜನೆಯ ಕುರಿತು ಜಾಗೃತಿ ಮೂಡಿಸಬೇಕು ಮತ್ತು ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಜನರಿಗೆ ನಿರಂತರವಾಗಿ ಉದ್ಯೋಗ ಒದಗಿಸಬೇಕು. ಪೂರ್ಣಗೊಳ್ಳದೇ ಇರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು. ನರೇಗಾ ಆದ್ಯತಾ ಕಾಮಗಾರಿಗಳ ಪೂರ್ವ ಹಂತ, ಪ್ರಗತಿ ಹಂತ ಹಾಗೂ ಮುಕ್ತಾಯವಾದ ಕಾಮಗಾರಿಗಳನ್ನು ಜಿಯೋ ಟ್ಯಾಗ್ ಮಾಡುವ ಕಾರ್ಯವನ್ನು ಕೂಡಲೇ ಪ್ರಗತಿ ಸಾಧಿಸುವಂತೆ ಅವರು ಸೂಚನೆ ನೀಡಿದರು.
ಇದೇ ವೇಳೆ ಪ್ರಧಾನ ಮಂತ್ರಿ ಆವಾಸ ಯೋಜನೆ (ಗ್ರಾಮೀಣ)ಯ ವಸತಿ ರಹಿತರು ಸೌಲಭ್ಯಗಳನ್ನು ಪಡೆಯಲು ಸ್ವಯಂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಮಾಹಿತಿಯುಳ್ಳ ವಿವಿಧ ಪೋಸ್ಟರ್ ಗಳನ್ನು ಬಿಡುಗಡೆಗೊಳಿಸಿದರು. ಈ ಪೋಸ್ಟರ್ ಗಳನ್ನು ಗ್ರಾ.ಪಂ ಗಳಲ್ಲಿ ಅಳವಡಿಸಿ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪಕಾರ್ಯರ್ಶಿ ಡಾ. ವಿಜಯಕುಮಾರ ಆಜೂರ, ಯೋಜನಾ ನಿರ್ದೇಶಕ ಬಿ.ಎಸ್ ರಾಠೋಡ, ಜಿಲ್ಲಾ ಪಂಚಾಯತಿಯ ಎಲ್ಲ ಹಿರಿಯ ಅಧಿಕಾರಿಗಳು ಜಿಲ್ಲೆಯ ಎಲ್ಲಾ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ & ಪಂ.ರಾ), ಎಲ್ಲ ಗ್ರಾ.ಪಂ. ಗಳ ಅಭಿವೃದ್ಧಿ ಅಧಿಕಾರಿಗಳು, ಎಲ್ಲ ತಾಲೂಕು ಪಂಚಾಯತಿಗಳ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.

