ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಬರುವ ಏಪ್ರಿಲ್ ೫ರಂದು ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಹಾಗೂ ಏಪ್ರಿಲ್ ೧೪ ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತ್ಯೋತ್ಸವ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ ೧೮ ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಬರುವ ಏಪ್ರಿಲ್ ೫ರಂದು ಡಾ. ಬಾಬು ಜಗಜೀವನರಾಂ ಅವರ ೧೧೮ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ನಗರದ ಸೆಟ್ಲೈಟ್ ಬಸ್ ನಿಲ್ದಾಣದ ಹತ್ತಿರ ಇರುವ ಡಾ. ಬಾಬು ಜಗಜೀವನರಾಂ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಬೆಳಿಗ್ಗೆ ೯ ಗಂಟೆಗೆ ವಿವಿಧ ಕಲಾತಂಡಗಳೊಂದಿಗೆ ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರದ ಮೆರವಣಿಗೆ ಜರುಗಲಿದೆ. ನಗರದ ವಿವಿಧ ವೃತ್ತಗಳಿಂದ ಸಾಗಿ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜಯಂತಿ ಅಂಗವಾಗಿ ಸಭಾ ಕಾರ್ಯಕ್ರಮ ಆಯೋಜಿಸಲಾಗುವುದು. ಜಯಂತಿ ಕಾರ್ಯಕ್ರಮ ಅಂಗವಾಗಿ ಉಪನ್ಯ್ಯಾಸಕರಿಂದ ಡಾ. ಬಾಬು ಜಗಜೀವನರಾಂ ಅವರ ಜೀವನ ಚರಿತ್ರೆ ಹಾಗೂ ಸಾಧನೆ ಕುರಿತು ಉಪನ್ಯಾಸ, ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಓರ್ವ ಪ್ರಗತಿಪರ ರೈತನ್ನು ಗುರುತಿಸಿ ಸನ್ಮಾನ ಮಾಡಲು ತೀರ್ಮಾನಿಸಲಾಯಿತು.
ಏಪ್ರಿಲ್ ೧೪ ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ೧೩೪ನೇ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಬುದ್ಧ ವಿಹಾರದಿಂದ ವಿವಿಧ ಕಲಾ ತಂಡಗಳೊಂದಿಗೆ ಡಾ. ಬಿ.ಆರ್ ಅಂಬೇಡ್ಕರ ಅವರ ಭಾವಚಿತ್ರ ಮೆರವಣಿಗೆ ನಡೆಯಲಿದ್ದು, ಕಂದಗಲ್ಲ ಶ್ರೀ ಹನಂತರಾಯ ರಂಗ ಮಂದಿರದಲ್ಲಿ ಸಭಾ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಜಯಂತಿ ಕಾರ್ಯಕ್ರಮದಲ್ಲಿ ನುರಿತ ಉಪನ್ಯಾಸಕರೋರ್ವರಿಂದ ಉಪನ್ಯಾಸ ಏರ್ಪಡಿಸುವುದು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ನಿರ್ಧರಿಸಲಾಯಿತು. ಮಹನೀಯರ ಜೀವನಾಧಾರಿತ ನೃತ್ಯ ರೂಪಕ ಪ್ರಸ್ತುತಪಡಿಸಲು ನಿರ್ಣಯಿಸಲಾಯಿತು. ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಆಯೋಜಿಸುವಂತೆಯೂ, ಆಯಾ ಜಯಂತಿ ದಿನಗಳಂದು ನಗರದಲ್ಲಿರುವ ವಿವಿಧ ವೃತ್ತಗಳಿಗೆ ದೀಪಾಲಂಕಾರ, ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ ವೇದಿಕೆ ಅಲಂಕಾರ, ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆಗೆಳನ್ನು ಕೈಗೊಳ್ಳುವಂತೆಯೂ, ಈ ಮಹನೀಯರ ಜಯಂತಿ ಕಾರ್ಯಕ್ರಮಗಳಿಗೆ ಎಲ್ಲ ಇಲಾಖೆಯ ಅಧಿಕಾರಿ,ಸಿಬ್ಬಂದಿಗಳು ಭಾಗವಹಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲೀಕ ಮಾನವರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆ, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.