ವಿಜಯಪುರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ೨೯ ಕೇಂದ್ರಗಳಲ್ಲಿ ಜರುಗಲಿರುವ ಆದರ್ಶ ವಿದ್ಯಾಲಯಗಳ ೬ನೇ ತರಗತಿಯ ಪ್ರವೇಶ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ತಿಳಿಸಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ೨೦೨೫-೨೬ನೇ ಸಾಲಿನ ಆದರ್ಶ ವಿದ್ಯಾಲಯಗಳ ಪ್ರವೇಶ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯ ಬಸವನ ಬಾಗೇವಾಡಿ, ಇಂಡಿ, ಮುದ್ದೇಬಿಹಾಳ, ಸಿಂದಗಿ ಹಾಗೂ ವಿಜಯಪುರ ತಾಲೂಕಿನ ಒಟ್ಟು ೨೯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ ೨೩ರಂದು ಆದರ್ಶ ವಿದ್ಯಾಲಯಗಳ ೬ನೇ ತರಗತಿಯ ಪ್ರವೇಶ ಪರೀಕ್ಷೆಗಳು ಜರುಗಲಿವೆ. ಪರೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿಯೊಂದಿಗೆ ತಾವು ಕರ್ತವ್ಯ ನಿರ್ವಹಿಸಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಗುರುತಿನ ಚೀಟಿಯನ್ನು ಆನ್ಲೈನ್ ಮುಖಾಂತರ ಪಡೆದುಕೊಂಡು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು. ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ. ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿಲಾಗಿದೆ. ಅಂದು ಬೆಳಿಗ್ಗೆ ೯ ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್ಗಳು, ಇಂಟರನೆಟ್, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಪರೀಕ್ಷೆಗಳನ್ನು ಸುಸುತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಡಯಟಿನ ಪ್ರಾಂಶುಪಾಲರಾದ ಶ್ರೀಮತಿ ಉಮಾದೇವಿ ಸೊನ್ನದ, ಜಿಲ್ಲಾ ನೋಡಲ್ ಅಧಿಕಾರಿಗಳಾದ ನಾರಾಯಣ ಬಾಬಾನಗರ, ಹುಸೇನಸಾ ಮುಲ್ಲಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಟಿ.ಎಸ್ ಕೊಲ್ಹಾರ, ಎಲ್ಲ ತಾಲೂಕು ಶಿಕ್ಷಣಾಧಿಕಾರಿಗಳು, ಆದರ್ಶ ವಿದ್ಯಾಲಯಗಳ ಮುಖ್ಯೋಪಾಧ್ಯಾಯರು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಡಯಟ್ನ ಉಪನ್ಯಾಸಕರು, ಸ್ಥಳೀಯ ಜಾಗೃತ ದಳದ ಸದಸ್ಯರುಗಳು, ಶಿಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.

