ವಿಜಯಪುರ ಜಿಲ್ಲಾ ಮಟ್ಟದ ತಾಯಿ ಮತ್ತು ಶಿಶು ಮರಣ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾಹಿತಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಯೋಜನೆಯಡಿಯ ಸೌಕರ್ಯಗಳು ಮತ್ತು ಗುಣಮಟ್ಟದ ಚಿಕಿತ್ಸೆ ಸೇರಿದಂತೆ ವಿವಿಧ ಆರೋಗ್ಯ ಸೌಲಭ್ಯಗಳಿಂದ ಜಿಲ್ಲೆಯಲ್ಲಿ ಸರಾಸರಿ ಪ್ರಮಾಣಕ್ಕಿಂತಲು ತಾಯಿ-ಶಿಶು ಮರಣ ಕಡಿಮೆಯಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದರು.
ಬುಧವಾರ ನಡೆದ ಜಿಲ್ಲಾ ಮಟ್ಟದ ತಾಯಿ ಮತ್ತು ಶಿಶು ಮರಣ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕಳೆದ ಮೂರು ವರ್ಷಗಳಿಗೆ ಹೋಲಿಸಿದ್ದಲ್ಲಿ ೨೦೨೪-೨೫ನೇ ಸಾಲಿನಲ್ಲಿ ತಾಯಿ ಶಿಶುಗಳ ಮರಣ ಪ್ರಮಾಣ ಕಡಿಮೆಯಾಗಿದೆ. ಸತತ ಪ್ರಯತ್ನ, ಉತ್ತಮವಾದ ಆರೋಗ್ಯ ಸೇವೆಯಿಂದಾಗಿ ಮರಣ ಪ್ರಮಾಣ ಕಡಿಮೆಯಾಗಿರುವುದಕ್ಕೆ ಅವರು ಪ್ರಶಂಸೆ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಜನನವಾಗುವ ಪ್ರತಿ ಸಾವಿರ ಶಿಶುಗಳ ಪೈಕಿ ಬೇರೆ ಬೇರೆ ಕಾರಣಗಳಿಂದ ಮೃತಪಡುವ ಶೇ.೫.೭೭ ರಷ್ಟು ಪ್ರಮಾಣವಾಗಿದ್ದು, ಸತತ ಗರ್ಭೀಣಿಯರ ಆರೋಗ್ಯ ತಪಾಸಣೆ, ವೈದ್ಯರ ಕಾಳಜಿ, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಯರ್ತೆರು ಹಾಗೂ ಕ್ಷೇತ್ರ ಮಟ್ಟದ ಆರೋಗ್ಯ ಸಿಬ್ಬಂದಿಗಳ ಸಹಕಾರದೊಂದಿಗೆ ಗರ್ಭೀಣಿಯರನ್ನು ಪ್ರಥಮ ತ್ರೈಮಾಸಿಕದಲ್ಲಿ ಹೆಸರು ನೊಂದಾಯಿಸಲಾಗುತ್ತದೆ. ೧೨ ರಿಂದ ೧೪ ಬಾರಿ ಅವರ ನಿಯಮಿತ ತಪಾಸಣೆಗೊಳಪಡಿಸಿ, ವಿವಿಧ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ ಉಚಿತ ಆರೋಗ್ಯ ಚಿಕಿತ್ಸೆ ನೀಡಿರುವುದರಿಂದ ತಾಯಿ-ಶಿಶು ಮರಣ ಪ್ರಮಾಣ ಕಡಿಮೆಗೊಳಿಸಲು ಸಹಕಾರಿಯಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ತಾಯಿ ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಆರ್.ಸಿ.ಹೆಚ್ ಪೋರ್ಟಲ್ ಮೂಲಕ ಗರ್ಭೀಣಿಯರಿಗೆ ಕಾಲಕಾಲಕ್ಕೆ ಆರೋಗ್ಯ ಮಾಹಿತಿ ಒದಗಿಸುವುದರೊಂದಿಗೆ ತಾಯಿ ಶಿಶು ಮರಣ ತಡೆಯಲು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ ಅವರು ಮಾತನಾಡಿ, ಜಿಲ್ಲೆಯಲ್ಲಿ ತಾಯಿ ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಗುಣಾತ್ಮಕ ಆರೋಗ್ಯ ಸೇವೆ, ಪ್ರಸವಪೂರ್ವ ಆರೈಕೆ, ಗಂಡಾಂತರ ಗರ್ಭೀಣಿ ಹೆರಿಗೆಗಳನ್ನು ಗುರುತಗಿಸಿ ಅವರಿಗೆ ಪ್ರಸೂತಿ ತಜ್ಞ ವೈದ್ಯರಿಂದ ಆರೈಕೆ ಹಾಗೂ ಆಪ್ತಸಮಾಲೋಚನೆ ಮೂಲಕ ಶೇ.೧೦೦ ರಷ್ಟು ಹೆರಿಗೆಗಳನ್ನು ಆರೋಗ್ಯ ಸಂಸ್ಥೆಗಳಲ್ಲಿ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಕೆ.ಡಿ.ಗುಂಡಬಾವಡಿ, ಡಾ.ಎಸ್.ಎಲ್.ಲಕ್ಕಣ್ಣವರ ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು, ವಿವಿಧ ವೈದ್ಯಾದಿಕಾರಿಗಳು ಉಪಸ್ಥಿತರಿದ್ದರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

