ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಖಡಕ್ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ದೌಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ತರ ಮನೆಗಳಿಗೆ ಭೇಟಿ ಮಾಡಿ, ಮಾಹಿತಿ ಕ್ರೋಡೀಕರಿಸಿ, ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿ ಪ್ರಕರಣಗಳನ್ನು ಅತ್ಯಂತ ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ದೌರ್ಜನ್ಯ ಪ್ರಕರಣಗಳನ್ನು ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳ ಪರಿಹಾರ ಧನವನ್ನು ಆದ್ಯತೆ ಮೇಲೆ ಸಂತ್ರಸ್ತರಿಗೆ ಬಿಡುಗಡೆ ಮಾಡಲು ಕ್ರಮ ವಹಿಸಬೇಕು. ನಿಯಮಾನುಸಾರ ಹಾಗೂ ಪ್ರಕರಣಾನುಸಾರ ಕಾಲಮಿತಿಯೊಳಗೆ ಪರಿಹಾರ ಧನ ಒದಗಿಸಬೇಕು. ಯಾವುದೇ ಬಾಕಿ ಉಳಿಸಿಕೊಳ್ಳದಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ವಿವಿಧ ನಿಗಮಗಳು ಭೂ ಒಡೆತನ ಯೋಜನೆಯಡಿಯ ಫಲಾನುಭವಿಗಳ ಮಾಹಿತಿಯನ್ನು ಇಂದೀಕರಣ ಮಾಡಿ, ಆದ್ಯತೆಯ ಮೇಲೆ ಅನುಪಾಲನಾ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಪರಿಶಿಷ್ಟ ಜಾತಿ ಕಾಲೋನಿ ಸೇರಿದಂತೆ ಎಲ್ಲ ಕಡೆ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗದ ಆರ್ಥಿಕ ಮಟ್ಟ ಸುಧಾರಿಸಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕಾರ್ಯನಿರ್ವಹಿಸಿ ಈ ಜನಾಂಗದ ಶ್ರೇಯೋಭಿವೃದ್ದಿಗಾಗಿ ಜಾರಿಗೊಳಿಸಲಾದ ಯೋಜನೆಗಳ ಲಾಭ ದೊರಕಿಸಲು ಕ್ರಮ ವಹಿಸಬೇಕು. ಎಲ್ಲ ಇಲಾಖೆಗಳಲ್ಲಿ ಎಸ್ಸಿಪಿ-ಟಿಎಸ್ಪಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವ ಮೂಲಕ ಅರ್ಹರಿಗೆ ಲಾಭ ದೊರಕಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು, ಬ್ಯಾಂಕಿನ ಮೂಲಕ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದಾಗ ಅರ್ಹರಿಗೆ ಸಾಲ-ಸೌಲಭ್ಯ ಒದಗಿಸಲು ಸೂಚನೆ ನೀಡಿದರು.
ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವ,ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ನಿರ್ಮಾಣಕ್ಕಾಗಿ ಜಾಗ ಒದಗಿಸುವ,ಸಮುದಾಯ ಭವನ ಕಾಮಗಾರಿ, ಎಸ್ ಸಿಪಿ ಹಾಗೂ ಟಿಎಸ್ಪಿ ಅನುದಾನ ಸಮರ್ಪಕ ಬಳಕೆಗೆ, ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಚರಂಡಿಗಳ ಸ್ವಚ್ಛತೆ, ಅಂಗನವಾಡಿಯಲ್ಲಿ ನೇಮಕಾತಿ, ರಸ್ತೆ ಅತಿಕ್ರಮಣ ತೆರವು, ಪರಿಶಿಷ್ಟ ಜಾತಿ, ಪಂಗಡದ ನೌಕರರ ಮುಂಬಡ್ತಿ, ಭೂ ಒಡೆತನ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಸಭೆಯ ಗಮನಕ್ಕೆ ತಂದಾಗ ಈ ಕುರಿತು ಜಿಲ್ಲಾಧಿಕಾರಿಗಳು, ಈಗಾಗಲೇ ಸದಸ್ಯರು ಎತ್ತಿರುವ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲಾಗಿದ್ದು, ಬಾಕಿ ಇರುವ ಸಮಸ್ಯೆಗಳಿಗೆ ಅತ್ಯಂತ ತ್ವರಿತವಾಗಿ ಪರಿಹರಿಸಿ ಇತ್ಯರ್ಥಪಡಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಎಸ್ಸಿ-ಎಸ್ಟಿ ಕಾಯ್ದೆ ಹಾಗೂ ಪೋಕ್ಸೊ (ಎಸ್ಸಿ-ಎಸ್ಟಿ) ಕಾಯ್ದೆಯಡಿ ಜಿಲ್ಲೆಯಲ್ಲಿ ಕಳೆದ ೨೦೨೪ ರಿಂದ ಫೆಬ್ರವರಿ-೨೦೨೫ರವರೆಗೆ ದಾಖಲಾದ ೨೬೫ ಪ್ರಕರಣಗಳ ಪೈಕಿ ೧ ಪ್ರಕರಣದಲ್ಲಿ ಶಿಕ್ಷೆಯಾಗಿದ್ದು, ೩೪ ಪ್ರಕರಣಗಳನ್ನು ಬಿಡುಗಡೆಗೊಳಿಸಿದ್ದು, ೩೭ ಪ್ರಕರಣಗಳು ವಿಲೇವಾರಿ ಮಾಡಲಾಗಿದೆ. ತಿಂಗಳ ಅಂತ್ಯದಲ್ಲಿ ಒಟ್ಟು ೨೨೯ ಪ್ರಕರಣಗಳು ಬಾಕಿ ಉಳಿದಿವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಅವರು ಮಾತನಾಡಿ, ಎಸ್ ಪಿಟಿಎಸ್ ಪಿ ಯೋಜನೆ ಅನುದಾನ ಫಲಾನುಭವಿಗಳಿಗೆ ತಲುಪವಂತೆ ನೋಡಿಕೊಳ್ಳಲು ಮನವಿ ಮಾಡಿಕೊಂಡರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಅಜೂರ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಅಶೋಕ ಘೋಣಸಗಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾ ಶ್ರೀಮತಿ ಎಲ್.ರೂಪಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲಿಕ ಮಾನವರ, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರುಗಳಾದ ಅಭಿಷೇಕ ಚಕ್ರವರ್ತಿ, ಮದನಕುಮಾರ ನಾಗರದಿನ್ನಿ, ನಿರ್ಮಲಾ ಹೊಸಮನಿ, ಸಿದ್ದು ರಾಯಣ್ಣವರ, ಬಂದಗಿ ಸಿದ್ದಪ್ಪ ಗಸ್ತಿ, ಯಮನಪ್ಪ ಸಿದರಡ್ಡಿ, ಮಹಾಂತೇಶ ಸಾಸಬಾಳ, ಮಲ್ಲು ತಳವಾರ, ರಾಜಶೇಖರ ಚೌರ, ನಾನು ಸೋಮು ಲಮಾಣಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

