ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಗ್ರಾಮದ ವಾರ್ಡುಗಳಲ್ಲಿ ತಲೆದೋರಿರುವ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಜಿ.ವ್ಹಿ.ಪಟ್ಟಣಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನ ಕೋರವಾರ ಗ್ರಾಮದ ವಿವಿಧ ವಾರ್ಡುಗಳಲ್ಲಿ ಕಂಡು ಬರುತ್ತಿರುವ ನೀರಿನ ಸಮಸ್ಯೆಯ ಕುರಿತಾಗಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಬುಧವಾರ ಗ್ರಾಮ ಪಂಚಾಯಿತಿಗೆ ಆಗಮಿಸಿ ಗಮನ ಸೆಳೆದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ವಕ್ತಾರ ಚನ್ನಪ್ಪಗೌಡ ಬಿರಾದಾರ ಮಾತನಾಡಿ, ಗ್ರಾಮದಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದ್ದು, ತಿಂಗಳಿಗೊಮ್ಮೆ ನೀರು ಪೂರೈಸಲಾಗುತ್ತಿದೆ. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಕೂಡಲೇ ಪುರದಾಳ ಕೆರೆಯಿಂದ ಪೈಪ್ಲೈನ್ ಮೂಲಕ ಬರುವ ನೀರು ಪೋಲಾಗದಂತೆ ತಡೆದು ನೀರಿನ ಸಮಸ್ಯೆ ನೀಗಿಸಬೇಕು ಎಂದರು.
ತಾಲ್ಲೂಕಾಧ್ಯಕ್ಷ ಸಿದ್ರಾಮಪ್ಪ ಅವಟಿ ಮಾತನಾಡಿ, ಮುಂದಿನ ತಿಂಗಳು ಕೋರವಾರೇಶ ಜಾತ್ರಾ ನಿಮಿತ್ಯ ಆಗಮಿಸುವ ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕು. ಮತ್ತು ಗ್ರಾಮದ ದೇವಸ್ಥಾನದ ಮುಖ್ಯರಸ್ತೆ ಹಾಗೂ ಚರಂಡಿಗಳನ್ನು ಸ್ವಚ್ಛಗೊಳಿಸಿ ಡಿಡಿಟಿ ಸಿಂಪಡಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ವಲಯ ಘಟಕದ ಮಲ್ಲನಗೌಡ ಸುಂಕದ, ಜಗದೀಶ ಮೇಲಿನಮಠ, ರಾಮು ಹೊನಮಟ್ಟಿ, ಭೀಮನಗೌಡ ನಂದಗೌಡರ ಸಹಿತ ಇತರರು ಇದ್ದರು

