ತಾಳ್ಮೆ ಪರೀಕ್ಷೆ ಮಾಡಬೇಡಿ-ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ | ಅಧಿಕಾರಿಗಳಿಗೆ ಡಿಸಿ ಟಿ.ಭೂಬಾಲನ್ ಖಡಕ್ ಎಚ್ಚರಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನನ್ನ ತಾಳ್ಮೆ ಪರೀಕ್ಷೆ ಮಾಡಬೇಡಿ, ಕಾರ್ಯದಲ್ಲಿ ಅಲಕ್ಷ್ಯತನ, ನಿಷ್ಕಾಳಜಿ ನಾನು ಸಹಿಸುವುದಿಲ್ಲ. ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಯಾವ ಕೆರೆ ಯಾವ ಇಲಾಖೆಗೆ ಸೇರಿದೆ ಎಂಬುದರ ಕುರಿತು ಒಂದು ವಾರದೊಳಗಾಗಿ ಜಿಲ್ಲೆಯಲ್ಲಿರುವ ಎಲ್ಲ ಕೆರೆಗಳ ಆರ್ಟಿಸಿ ಇಂದೀಕರಣ ಮಾಡಿ ಮಾಲೀಕತ್ವ ನಮೂದಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.
ಮಂಗಳವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ತಾಲೂಕಾ ತಹಶೀಲ್ದಾರ, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆ, ಭೂಮಾಪನ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ದಿ ಕುರಿತು ಸಭೆ ನಡೆಸಿ ಅವರು ಸೂಚನೆ ನೀಡಿದ ಅವರು, ಆಯಾ ತಾಲೂಕಾ ತಹಶೀಲ್ದಾರ, ಭೂಮಾಪನ ಇಲಾಖೆ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಬೇಕು. ಅವಶ್ಯವಿದ್ದಲ್ಲಿ ಪೋಲಿಸರ ಸಹಾಯ ಪಡೆದು ತೆರವಿಗೆ ಕ್ರಮ ವಹಿಸಬೇಕು.
ಜಿಲ್ಲೆಯಲ್ಲಿರುವ ಕೆರೆಗಳಿಗೆ ಸಂಬಂಧಿಸಿದಂತೆ ಆರ್.ಟಿ.ಸಿ. ಇಂದೀಕರಣ ಮಾಡಿ, ಕಾಲಂ ನಂ.೯ ರಲ್ಲಿ ಯಾವ ಇಲಾಖೆಗೆ ಸೇರಿದ ಕೆರೆ ಎಂಬುದು ಮಾಲೀಕತ್ವವನ್ನು ಸ್ಪಷ್ಟವಾಗಿ ನಮೂದಿಸಬೇಕು. ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಿ ಸಂರಕ್ಷಣೆಗೆ ಕ್ರಮ ವಹಿಸಬೇಕು. ಮುದ್ದೇಬಿಹಾಳ ತಾಲೂಕಿನ ೩೩ ಕೆರೆಗಳ ಪೈಕಿ ೩ ಕೆರೆಗಳು ಲೋಕೋಪಯೋಗಿ ಇಲಾಖೆಯಿಂದ ಪಂಚಾಯತ್ ರಾಜ್ ಇಲಾಖೆಗೆ ವಿಭಜನೆಯಾಗಿದ್ದರೂ ಸಹ ಆರ್.ಟಿ.ಸಿ.ಯಲ್ಲಿ ಇನ್ನೂ ಹಳೆಯ ಮಾಲೀಕತ್ವ ನಮೂದಾಗಿದ್ದು, ಕೂಡಲೇ ಇಂದೀಕರಣ ಮಾಡಿ ಮಹಾನಗರ ಪಾಲಿಕೆ, ಗ್ರಾಮ ಪಂಚಾಯತ್, ತಾಲೂಕಾ ಪಂಚಾಯತ್ ಪಟ್ಟಣ ಪಂಚಾಯತ್ ಸೇರಿದಂತೆ ಯಾವ ಇಲಾಖೆ ಸೇರಿದೆ ಎಂಬುದನ್ನು ನಮೂದಿಸಬೇಕು. ಕೆಲವೊಂದು ನಗರ ಸ್ಥಳೀಯ ಸಂಸ್ಥೆಗಳು ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೇರಿದ್ದು, ಇಂತಹ ಬದಲಾವಣೆಯಾಗಿರುವ, ಆರ್.ಟಿ.ಸಿ.ಯಲ್ಲಿ ಬದಲಾವಣೆ ಮಾಡಿ ನಮೂದಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

“ಕೆರೆಗಳ ಸಂರಕ್ಷಣೆಗಾಗಿ ಬಿಡುಗಡೆಯಾದ ಅನುದಾನವನ್ನು ಅಧಿಕಾರಿಗಳು ಸಮರ್ಪಕವಾಗಿ ಬಳಕೆ ಮಾಡಬೇಕು. ಯಾವುದೇ ಅನುದಾನ ಬಾಕಿ ಉಳಿಸಿಕೊಳ್ಳಬಾರದು. ಅನುದಾನವನ್ನು ಕೆರೆಗಳಿಗೆ ತಂತಿ, ಬೇಲಿ, ಕಂದಕ ತೆಗೆಯುವುದು ಸೇರಿದಂತೆ ಅನುದಾನ ಬಳಕೆ ಮಾಡಿ ಬಳಕೆ ಪ್ರಮಾಣ ಪತ್ರ ಸಲ್ಲಿಸಬೇಕು. “
– ಟಿ.ಭೂಬಾಲನ್
ಜಿಲ್ಲಾಧಿಕಾರಿ ವಿಜಯಪುರ

