ವಿಜಯಪುರದಲ್ಲಿ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪ್ರಶಂಸೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ- ನೆಮ್ಮದಿಯಿಂದ ಬದುಕಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುವ ಪೊಲೀಸರ ಕಾರ್ಯ ಶ್ಲಾಘನೀಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಜಿಲ್ಲಾ ಪೊಲಿಸ್ ಕವಾಯತು ಮೈದಾನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಕಾರ್ಯ ಮಾಡುತ್ತ, ನೊಂದವರಿಗೆ ಭರವಸೆ ನೀಡಿ ನಿಮ್ಮೊಂದಿಗೆ ನಾವಿದ್ದೇವೆ ಎಂಬುದು ಪೊಲೀಸ್ ಕಾರ್ಯವೈಖರಿಯಾಗಿದೆ. ಪ್ರತಿಯೊಂದು ಹಂತದಲ್ಲಿ ಪೊಲೀಸರ ಅವಶ್ಯಕತೆ ಇದೆ. ಇದು ಸಮಾಜದ ಭಾಗವಾಗಿದೆ. ನೆಮ್ಮದಿಯ ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪೊಲೀಸರ ಕರ್ತವ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಪೊಲೀಸರು ಸಮಾಜದ ಒಳಿತಿಗಾಗಿ ಹಗಲಿರುಳು ಕರ್ತವ್ಯ ನಿರ್ವಹಿಸುವುದರಿಂದಲೇ ಸಮಾಜದಲ್ಲಿ ಶಾಂತಯುತವಾಗಿ ಜೀವನ ನಡೆಸಲು ಸಾಧ್ಯವಾಗುತ್ತದೆ. ವಿಪತ್ತು-ಆಪತ್ತು ಸೇರಿದಂತೆ ತುರ್ತು ಸಂದರ್ಭಗಳಲ್ಲಿ ಕಾರ್ಯನಿರ್ವಹಣೆ ಮಾಡುವ ಮೂಲಕ ಸಮಾಜದಲ್ಲಿ ಶಾಂತಿ ಕಾಪಾಡುವ ಇವರ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ.
ಜಿಲ್ಲೆಯ ಪೊಲೀಸರ ಕಾರ್ಯದಕ್ಷತೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕಷ್ಟಕರ ಸಂದರ್ಭಗಳಲ್ಲಿ ತತಕ್ಷಣ ಸ್ಪಂದಿಸಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಾರೆ. ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಸೇರಿದಂತೆ ಜಿಲ್ಲೆಯ ನಾಲ್ಕು ಜನ ಪೊಲೀಸರು ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿರುವುದಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ತಂತ್ರಜ್ಞಾನ ಯುಗದಲ್ಲಿ ಪೊಲೀಸ್ ಸೇವೆ ಸ್ವರೂಪ ಗಮನಾರ್ಹ ಬದಲಾವಣೆಯಾಗಿದ್ದು, ತಂತ್ರಜ್ಞಾನದ ಬಳಕೆಯಿಂದ ಅಪರಾಧಗಳ ಪ್ರಕರಣಗಳನ್ನು ಭೇಧಿಸಲು ಸಹಕಾರಿಯಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಮಾತನಾಡಿ, ಈ ದಿನದಂದು ಹೆಚ್ಚು ಶ್ರದ್ಧಾಪೂರ್ವಕವಾಗಿ, ರಚನಾತ್ಮಕವಾಗಿ ಮತ್ತು ನಿಷ್ಠೆಯೊಂದಿಗೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಸೇವೆಯಲ್ಲಿರುವ ಪೊಲೀಸ್ ಸಿಬ್ಬಂದಿ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ನಮ್ಮ ಸಂಕಲ್ಪವನ್ನು ಮತ್ತಷ್ಟು ದೃಢಪಡಿಸಿಕೊಳ್ಳುವುದಾಗಿದೆ. ಇಲಾಖೆಯಲ್ಲಿ ಅನೇಕ ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಪೊಲೀಸರ ಸೇವೆ, ತ್ಯಾಗ ಮನೋಭಾವನೆ ಗೌರವಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.
ನಿವೃತ್ತ ಪೊಲೀಸ್ ನಿರೀಕ್ಷಕ ಎನ್.ಎಸ್.ಜನಗೌಡ ಅವರು ಧ್ವಜವಂದನೆ ಸ್ವೀಕರಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ, ಐಆರ್ಬಿ ಕಮಾಂಡೆಂಟ್ ಪ್ರಸನ್ನಕುಮಾರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಡಿವೈಎಸ್ಪಿ ಬಸವರಾಜ ಯಲಿಗಾರ, ಸೇರಿದಂತೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ನಿವೃತ್ತ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.
ನಿವೃತ್ತ ಶಿಕ್ಷಕ ಎಚ್.ಯು.ಮಮದಾಪುರ ಕಾರ್ಯಕ್ರಮ ನಿರ್ವಹಿಸಿದರು.

ಆಕರ್ಷಕ ಪಥಸಂಚಲನ
ಪರೇಡ್ ಕಮಾಂಡರ್ ವಿಠ್ಠಲ ಕೊಕಟನೂರ ಅವರ ನೇತೃತ್ವದಲ್ಲಿ ಆರ್.ಎಸ್.ಐ ಮಲ್ಲನಗೌಡ ಗುತ್ತರಗಿ, ದಾನೇಶ ಕಲ್ಯಾಣಿ, ಚಿದಾನಂದ ತಳವಾರ, ಕೂಡಗಿ ಪೊಲೀಸ್ ಠಾಣೆಯ ಪಿಎಸ್ಐ ಯತೀಶ ಕೆ.ಎನ್., ಕಲಕೇರಿ ಪಿಎಸ್ಐ ಸುರೇಶ ಮಂಟೂರ, ಬಬಲೇಶ್ವರ ಠಾಣೆ ಪಿಎಸ್ಐ ಅಶೋಕ ನಾಯಕ, ಝಳಕಿ ಪಿಎಸ್ಐ ಮಂಜುನಾಥ ಪಾಟೀಲ, ದೇವರಹಿಪ್ಪರಗಿ ಪಿಎಸ್ಐ ಬಸವರಾಜ ತಿಪ್ಪಾರೆಡ್ಡಿ, ಗಾಂಧಿಚೌಕ್ ಠಾಣೆ ಪಿಎಸ್ಐ ಶ್ರೀಮತಿ ಸುಷ್ಮಾ ನಂದಗೋಳ, ಗೋಲಗುಂಬಜ್ ಪಿಎಸ್ಐ ಎಂ.ಡಿ.ಗೋರಿ ಇವರನ್ನೊಳಗೊಂಡ ೧೦ ತಂಡಗಳು ಆಕರ್ಷಕ ಪಥ ಸಂಚಲನ ನಡೆಸಿಕೊಟ್ಟರು. ಅರ್ಜುನ ಭಜಂತ್ರಿ ಹಾಗೂ ಮಾನೆ ನೇತೃತ್ವದ ತಂಡ ಸುಶ್ರಾವ್ಯವಾಗಿ ಬ್ಯಾಂಡ್ ನುಡಿಸಿದರು.

“ಧ್ವಜ ದಿನಾಚರಣೆ ಸಂದರ್ಭದಲ್ಲಿ ಪೊಲೀಸ್ ಧ್ವಜಗಳನ್ನು ಮಾರಾಟ ಮಾಡಿ, ಧ್ವಜಗಳ ಮಾರಾಟದಿಂದ ಸಂಗ್ರಹವಾದ ವಂತಿಗೆಯನ್ನು ನಿವೃತ್ತ ಮತ್ತು ಸೇವಾ ನಿರತ ಪೊಲೀಸ್ರ ಕ್ಷೇಮಾಭಿವೃದ್ದಿಗೆ ಬಳಸಿಕೊಳ್ಳಲಾಗುತ್ತದೆ. ಜಿಲ್ಲೆಯಲ್ಲಿ ಈಗಾಗಲೇ ಪೊಲೀಸರ ಸಲುವಾಗಿ ಹಲವಾರು ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸುವಿಧಾ ಗ್ಯಾಸ್ ಏಜೆನ್ಸಿ, ಪೊಲೀಸ್ ಬ್ಯಾಡ್ಮಿಂಟನ್, ಶೆಟಲ್ ಕೋಟ್, ವ್ಯಾಯಾಮ ಶಾಲೆ, ಗ್ರಂಥಾಲಯ, ಪೊಲೀಸ್ ಕ್ಯಾಂಟೀನ್, ಪೊಲೀಸ್ ಸಿಬ್ಬಂದಿ ತಂಗುದಾಣ, ಶುದ್ಧ ಕುಡಿಯುವ ನೀರಿನ ಘಟಕ, ಪೊಲೀಸ್ ಸಮುದಾಯ ಭವನ, ಆರೋಗ್ಯ ಶಿಬಿರ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪೊಲೀಸ್ ಕಲ್ಯಾಣ ನಿಧಿಯಿಂದ ಪೊಲೀಸ್ ಸಿಬ್ಬಂದಿ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ, ವೈದ್ಯಕೀಯ ಸಹಾಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗಿದೆ. ಶೇ.೫೦ರಷ್ಟು ಅನುದಾನವನ್ನು ನಿವೃತ್ತ ಅಧಿಕಾರಿಗಳ ಪೊಲೀಸ್ ಕಲ್ಯಾಣ ನಿಧಿಗೆ ಶೇ.೫೦ ರಷ್ಟನ್ನು ಕೇಂದ್ರ ಪೊಲೀಸ್ ನಿಧಿಗೆ ಜಮೆ ಮಾಡಲಾಗುತ್ತದೆ.”
– ಲಕ್ಷ್ಮಣ ನಿಂಬರಗಿ
ವಿಜಯಪುರ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ

“ಜಿಲ್ಲೆಯ ಕಾನೂನು ಸುವ್ಯವಸ್ಥೆ ಗಟ್ಟಿಗೊಳಿಸುವಲ್ಲಿ ಪೊಲೀಸರ ಕಾರ್ಯ ಬಹುಮುಖ್ಯವಾಗಿದೆ. ಇದರಿಂದ ಸಮಾಜದಲ್ಲಿ ಶಿಸ್ತು ಬದ್ಧ ಜೀವನ ನಡೆಸಲು, ಸಾರ್ವಜನಿಕರು ನೆಮ್ಮದಿಯ ಜೀವನಕ್ಕೆ ಕಾರಣವಾಗಿದೆ. ಅಪರಾಧ ತಡೆ, ಸಂಚಾರಿ ನಿಯಮಗಳ ಉಲ್ಲಂಘನೆ ಸೇರಿದಂತೆ ಯಾವುದೇ ಅಪರಾಧ ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ.”
– ರಿಷಿ ಆನಂದ್
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿಜಯಪುರ

“ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸಿ ನಿವೃತ್ತರಾದ ನಿವೃತ್ತ ಪೊಲೀಸ್ ಅಧಿಕಾರಿಗಳ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಅವರ ಸಮಸ್ಯೆಗಳನ್ನು ಆಲಿಸಿ ನಿಯಮಾನುಸಾರ ಕಾನೂನಿನ ಚೌಕಟ್ಟಿನಲ್ಲಿ ಬಗೆಹರಿಸಿ, ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವ ಮೂಲಕ ಸದಾಕಾಲ ಜಿಲ್ಲಾಡಳಿತ ಸ್ಪಂದಿಸಲಿದೆ.”
– ಟಿ.ಭೂಬಾಲನ್
ಜಿಲ್ಲಾಧಿಕಾರಿ, ವಿಜಯಪುರ

