ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ನೀಡಲಾದ ಸಲಹೆ-ಸೂಚನೆಗಳನ್ನು ಜಿಲ್ಲೆಯಾದ್ಯಂತ ಪಾಲಿಸುವ ಮೂಲಕ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.
ಗುಡುಗು ಮತ್ತು ಸಿಡಿಲಿನ ಅಪಾಯ ತಗ್ಗಿಸಲು ಸಾಮಾನ್ಯವಾಗಿ ಸಿಡಿಲಿಗೆ ತುತ್ತಾಗುವ ಸ್ಥಳಗಳನ್ನು ಗುರುತಿಸಿ, ಸಾರ್ವಜನಿಕ ಆಸ್ತಿ, ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸಬೇಕು. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಇಂಡಿಯನ್ ಮೆಟ್ರಾಲಾಜಿಕಲ್ ಇಲಾಖೆಯ ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರ ಸಮೂಹ ಮಾಧ್ಯಮಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ತಿಳುವಳಿಕೆ ಮೂಡಿಸುವುದು ಹಾಗೂ ಈ ಕುರಿತು ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಗ್ರಾಮ ಪಂಚಾಯತಿಗಳ ಮೂಲಕ ಮಾಹಿತಿ ನೀಡುವುದು ಮತ್ತು ಜಾಗೃತಿ ಮೂಡಿಸುವುದು.
ಸ್ಥಳೀಯ ಜನರನ್ನು ಎಚ್ಚರಿಸಲು ಹಾಗೂ ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನ ನೀಡಲು ಶಾಲೆ, ಕಾಲೇಜುಗಳು, ರೈತ ಸಂಪರ್ಕ ಕೇಂದ್ರ, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು.
ಕೃಷಿ ಇಲಾಖೆಯ ಅಧಿಕಾರಿ-ನೌಕರರು ರೈತ ಸಂಪರ್ಕ ಕೇಂದ್ರಗಳು, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಅಧಿಕಾರಿ-ಸಿಬ್ಬಂದಿಗಳು, ಗುಡುಗು ಸಿಡಿಲು ಸಂದರ್ಭದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳ ಬಗ್ಗೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೃಷಿಕರಿಗೆ, ಕುರಿ ಮೇಕೆ ಹಾಗೂ ಇತರೆ ಜಾನುವಾರುಗಳ ಸಾಕಾಣಿಕೆದಾರರಿಗೆ ಸೂಕ್ತ ಅರಿವು ಮೂಡಿಸಬೇಕು.
ಗುಡುಗು ಮತ್ತು ಸಿಡಿಲು ಸಂದರ್ಭಧಲ್ಲಿ ಪಾಲಿಸಬೇಕಾದ ಸಲಹೆ ಸೂಚನೆ: ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಹಾಗೂ ಕಾಮನ್ ಅಲರ್ಟ್ ಪ್ರೋಟೋಕಾಲ್ ಮೂಲಕ ಬರುವ ಸಂದೇಶಗಳನ್ನು ಮೊಬೈಲ್ನಲ್ಲಿ ಗಮನಿಸುವುದು, ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು. ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತಲ್ಲ, ಸುರಕ್ಷಿತವಾದ ಕಟ್ಟಡಗಳ ಆಶ್ರಯ ಪಡೆಯುವುದು, ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು, ತಗ್ಗು ಪ್ರದೇಶದಲ್ಲಿ ಆಶ್ರಯ ಪಡೆಯುವುದು, ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು, ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ್ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.
ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು, ಗುಂಪಿನಲ್ಲಿದ್ದರೆ ಅಪಾಯವನ್ನ ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು, ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು, ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು, ಅರಣ್ಯ ಪ್ರದೇಶದಲ್ಲಿದ್ದರೆ ಚಿಕ್ಕ, ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು, ಲೋಹದ ವಸ್ತುಗಳು, ದ್ವಿಚಕ್ರ ವಾಹನ, ದೂರವಾಣಿ ಬಳಸಬಾರದು, ತಂಬಿ ಬೇಲಿ ಯಂತ್ರಗಳಿಂದ ದೂರವಿರುವುದು, ಕಬ್ಬಿಣದ ಸರಳುಗಳ್ಳುಳ್ಳ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಸಂಪರ್ಕದಿಂದ ದೂರವಿರುವುದು, ಮಕ್ಕಳು ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು.
ಗುಡುಗು ಸಿಡಿಲಿನ ಸಂದರ್ಭದಲ್ಲಿ ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕಬಾರದು, ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗು ಸಂದರ್ಭದಲ್ಲಿ ಸ್ನಾನ ಮತ್ತು ಶವರ ತೆಗೆದುಕೊಳ್ಳಬಾರದು, ಪಾತ್ರೆ ತೊಳೆಯಬಾರದು, ಬಟ್ಟೆ ಒಗೆಯಬಾರದು, ಆಟದ ಮೈದಾನ, ಉದ್ಯಾನವನಗಳು, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಬೇಕು. ಮಿಂಚಿನ ಒಡೆತದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಇರುವುದರಿಂದ ಅರಣ್ಯ ಪ್ರದೇಶದಿಂದ ದೂರವಿದ್ದು ಗಿಡ ಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸುವು ಸೇರಿದಂತೆ ವಿವಿಧ ಸಲಹೆಗಳನ್ನು ನೀಡಲಾಗಿದೆ.

