ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಜಿಲ್ಲೆಯ ಚಡಚಣದಲ್ಲಿ ಇದೇ ಏ.೭ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ ಹೇಳಿದರು.
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ, ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಚಡಚಣದ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಎಸ್. ಎಸ್. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇದೇ ಏಪ್ರಿಲ್ ೭ರಂದು ಬೆಳಿಗ್ಗೆ, ೯.೩೦ ರಿಂದ ಸಾಯಂಕಾಲ ೪.೦೦ ಘಂಟೆಯವರೆಗೆ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ, ಈ ಮೇಳದಲ್ಲಿ ೪೦ ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಇಲ್ಲಿಯವರೆಗೆ ಪ್ರತಿಷ್ಠಿತ ೩೮ ಕಂಪನಿಗಳು ನೋಂದಣಿ ಮಾಡಿಕೊಂಡಿವೆ ಎಂದು ಅವರತು ಹೇಳಿದರು.
ಎಸ್.ಎಸ್.ಎಲ್.ಸಿ/ಪಿಯುಸಿ/ಐಟಿಐ/ಡಿಪ್ಲೊಮಾ/ವದವಿ/ ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಪದವೀಧರರಿಗೆ ಉದ್ಯೋಗ ಮೇಳದಲ್ಲಿ ಅವಕಾಶವಿದ್ದು, ನೋಂದಣಿಯು ಉಚಿತವಾಗಿರುತ್ತದೆ. ಇಲ್ಲಿಯವರೆಗೆ ೧೮೮೧ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಇನ್ನು ೩೦೦೦ ಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳುವ ನಿರೀಕ್ಷೆ ಇರುತ್ತದೆ ಎಂದು ಅವರು ತಿಳಿಸಿದರು.
ನಿರುದ್ಯೋಗ ಸಮಸ್ಯೆ ನಿವಾರಣೆಗೆ ಶಾಲಾ ಮಟ್ಟದಲ್ಲಿಯೇ ಮಕ್ಕಳಿಗೆ ಕೌಶಲ್ಯಾಧಾರಿತ ಕಲಿಕೆಗೆ ಒತ್ತು ನೀಡುವ ಉದ್ದೇಶದೊಂದಿಗೆ ೮ ರಿಂದ ೧೦ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ “ನನ್ನ ವೃತ್ತಿ ನನ್ನ ಆಯ್ಕೆ” ಹಾಗೂ ಕಾಲೇಜು ಮಟ್ಟದಲ್ಲಿ ಕಲಿಕೆ ಜೊತೆ ಕೌಶಲ್ಯ ಯೋಜನೆ ರೂಪಿಸಲಾಗಿದೆ. ಈಗಾಗಲೇ ಕೌಶಲ್ಯಾಧಾರಿತ ಕಲಿಕೆಯನ್ನು ಝಳಕಿ, ನಿಡಗುಂದಿಯಲ್ಲಿ “ನನ್ನ ವೃತ್ತಿ ನನ್ನ ಆಯ್ಕೆ” ಹಾಗೂ ಅಕ್ಕಮಹಾದೇವಿ ವಿಶ್ವವಿದ್ಯಾಲಯದಲ್ಲಿ ಕಲಿಕೆ ಜೋತೆ ಕೌಶಲ್ಯ ಯೋಜನೆಯನ್ನು ಪ್ರ್ರಾಯೋಗಿಕವಾಗಿ ಅನುಷ್ಠಾನ ಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪಾರಂಪರಿಕ ಕೌಶಲ್ಯ ಹಾಗೂ ಪ್ರಾದೇಶಿಕ ಕೌಶಲ್ಯಗಳನ್ನು ಅನುಷ್ಠಾನ ಮಾಡಲಾಗುವುದು ಎಂದು ಅವರು ಹೇಳಿದರು.
ಇದೇ ವೇಳೆ ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್ ಅವರು ಮಾತನಾಡಿ ಚಡಚಣದಲ್ಲಿ ನಡೆಯುತ್ತಿರುವ ಈ ಉದ್ಯೋಗ ಮೇಳದಲ್ಲಿ ಜಿಲ್ಲೆಯ ಹೆಚ್ಚಿನ ನಿರುದ್ಯೋಗಿ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಉದ್ಯೋಗ ಮೇಳದ ಪೋಸ್ಟರ್ಗಳನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಸಿ.ಬಿ.ಕುಂಬಾರ, ಜಿಲ್ಲಾ ಉದ್ಯೋಗಾಧಿಕಾರಿ ಮಹೇಶ ಮಾಳವಾಡಕರ್ ಉಪಸ್ಥಿತರಿದ್ದರು.

