ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಅಸಮಾಧಾನ
ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಸರ್ಕಾರ ಬಸ್ ನಿಲ್ದಾಣದ ಆವರಣದಲ್ಲಿ ಮಾಚಿದೇವರ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಆಗ್ರಹಿಸಿದ್ದಾರೆ
ಪಟ್ಟಣದಲ್ಲಿ ಮಂಗಳವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು. ನೂತನ ಬಸ್ ನಿಲ್ದಾಣದ ನಿರ್ಮಾಣ ಹಾಗೂ ಮಡಿವಾಳ ಮಾಚಿದೇವರ ಹೆಸರನ್ನು ನಾಮಕರಣಗೊಳಿಸುವಲ್ಲಿ ಹಿಂದಿನ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಹಾಗೂ ಬಿಜೆಪಿ ಸರ್ಕಾರ ತೋರಿದ ಬದ್ಧತೆಯೇ ಕಾರಣ. ಆದರೆ ಇಂದಿನ ಬಸ್ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮಕ್ಕೆ ಕನಿಷ್ಟ ಸೌಜನ್ಯಕ್ಕಾದರೂ ಅವರನ್ನು ಆಮಂತ್ರಿಸದೇ ಇರುವ ಸಾರಿಗೆ ಇಲಾಖೆಯ ಅಧಿಕಾರಿಗಳ ಕ್ರಮ ಅಕ್ಷಮ್ಯವಾದುದು.
ಜಗದೀಶ ಶೆಟ್ಟರ್ ನೇತೃತ್ವದ ರಾಜ್ಯದ ಹಿಂದಿನ ಬಿಜೆಪಿ ಸರ್ಕಾರ ಮಡಿವಾಳ ಮಾಚಿದೇವರ ಜನ್ಮಸ್ಥಳ ಅಭಿವೃದ್ಧಿಗಾಗಿ ೩ ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿತ್ತು. ನಂತರ ಶಾಸಕ ಸೋಮನಗೌಡ ಪಾಟೀಲರು ತಮ್ಮ ಅವಧಿಯಲ್ಲಿ ೪.೯೫ ಕೋಟಿ ರೂ.ಗಳ ಅನುದಾನ ಬಿಡುಗಡೆಗೊಳಿಸಿ ನೂತನ ಬಸ್ ನಿಲ್ದಾಣಕ್ಕೆ ಅಡಿಗಲ್ಲು ನೆರವೇರಿಸಿದರು. ನಂತರ ಬಸ್ ನಿಲ್ದಾಣಕ್ಕೆ ಮಾಚಿದೇವರ ಹೆಸರನ್ನು ನಾಮಕರಣಗೊಳಿಸುವ ಪ್ರಕ್ರಿಯೆಯಲ್ಲಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಅವರೊಂದಿಗೆ ಸೇರಿ ಸುರೇಶ ದೇಸಾಯಿ, ಬಿ.ಕೆ.ಪಾಟೀಲ ನೇತೃತ್ವದ ದೇವರಹಿಪ್ಪರಗಿ ಗೆಳೆಯರ ಬಳಗದ ಮೂಲಕ ಅಂದಿನ ಸಾರಿಗೆ ಸಚಿವ ಶ್ರೀರಾಮಲು ನಂತರ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಕ.ಕ.ರ.ಸಾ.ನಿಗಮದ ಅಧ್ಯಕ್ಷರಾದ ರಾಮಲಿಂಗಾರೆಡ್ಡಿ ಇದಕ್ಕೆ ಒಪ್ಪಿಗೆ ನೀಡಿದ್ದರು. ಇದು ಬಸ್ ನಿಲ್ದಾಣ ಹಾಗೂ ನಾಮಕರಣಕ್ಕೆ ಸಂಬಂಧಿಸಿದ ವಾಸ್ತವಿಕ ವಿಷಯ.
ದೇವರಹಿಪ್ಪರಗಿ ಪಟ್ಟಣ ಹಾಗೂ ಮತಕ್ಷೇತ್ರಕ್ಕಾಗಿ ಮಾಜಿಶಾಸಕ ಸೋಮನಗೌಡ ಪಾಟೀಲರು ತಮ್ಮ ಅಧಿಕಾರವಧಿಯಲ್ಲಿ ಸಾಕಷ್ಟು ಅಭಿವೃದ್ಧಿಪರ ಕಾರ್ಯಗಳನ್ನು ಮಾಡಿದ್ದರೂ ಈಗ ಮಾತ್ರ ಉದ್ಘಾಟನಾ ಕಾರ್ಯಕ್ರಮಗಳಿಗೆ ಅವರನ್ನು ಆಮಂತ್ರಿಸದೇ ಇರುವದನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದೆ. ದೇವರಹಿಪ್ಪರಗಿ ಪಟ್ಟಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ ೩೫ ಕೋಟಿ ರೂ.ಗಳ ಅನುದಾನ ಮಂಜೂರಾತಿ ತಂದು, ಪ್ರಥಮ ಹಂತದಲ್ಲಿ ೧೨ ಕೋಟಿ ಅನುದಾನದಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾರಣರಾದ ಮಾಜಿ ಶಾಸಕರ ಕಾರ್ಯಕ್ಕೆ ಈಗ ಉಳಿದ ಹಣವನ್ನು ಸರ್ಕಾರದಿಂದ ಬಿಡುಗಡೆಗೊಳಿಸಿ ೧೦೦ ಹಾಸಿಗೆಗಳ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಸ್ಥಳೀಯ ಶಾಸಕರು ಸಿದ್ಧಗೊಳಿಸಬೇಕಾಗಿದೆ ಅದಕ್ಕಾಗಿ ಶಾಸಕರು ಕೂಡಲೇ ಅಗತ್ಯ ಕ್ರಮ ವಹಿಸಲು ಆಗ್ರಹಿಸಿದ್ದಾರೆ.
