ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತೀವ್ರವಾಗಿ ಖಂಡಿಸಿದೆ.
ಪಹಲ್ಗಾಮನಲ್ಲಿ ನಡೆದ ನರಮೇಧ ಖಂಡಿಸಿ ಬುಧವಾರ ನಗರದಲ್ಲಿ ಎಬಿವಿಪಿ ಸಭೆ ನಡೆಸಿ, ಉಗ್ರರನ್ನು ಕೂಡಲೇ ಬಂಧಿಸಲು ಆಗ್ರಹಿಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಮಾಳಿ, ನಗರ ಸಹ ಕಾರ್ಯದರ್ಶಿ ಅಭಿಷೇಕ ಬಡಿಗೇರ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಸುರೇಖಾ ಕುಲಕರ್ಣಿ ಮಾತನಾಡಿ, ಜಮ್ಮು ಕಾಶ್ಮೀರದ ಪಹಲ್ಗಾಮನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ಹೇಡಿತನದ ಗುಂಡಿನ ದಾಳಿ ಕೃತ್ಯವನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂಬುದು ಸಾರ್ವಕಾಲಿಕ ಸತ್ಯ, ಅಲ್ಲಿನ ಪ್ರತ್ಯೇಕವಾದದ ಮನಸ್ಥಿತಿಯನ್ನು ಬದಲಾಯಿಸಲು ಹಾಗೂ ಜನ-ಜೀವನ ಸ್ಥಿತಿಗತಿಗಳನ್ನು ಸ್ಥಿರಗೊಳಿಸಿ ಶಾಂತಿಯುತ ಕಾಶ್ಮೀರವೆಂಬುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.
ಈ ಸಂದರ್ಭದಲ್ಲಿ ಸಂದೀಪ ಅರಳಗುಂಡಿ, ಚೇತನ ಕೋರವಾರ, ಪವಿತ್ರಾ, ಸಹನಾ, ಐಶ್ವರ್ಯ, ನೇಸರ ಬಜಂತ್ರಿ, ಸಂಜೀವ, ಕಾರ್ತಿಕ, ಪೂಜನ್ನ, ಸಂದೀಪ, ಚೇತನ, ಸುಮಾರು ೧೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕೃತ್ಯವನ್ನು ಖಂಡಿಸಿ ಪ್ರತಿಭಟನೆ ಮಾಡಿದರು.