ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಪಾಲಕರಿಗೆ ಕರೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಪ್ರಾಥಮಿಕ ಹಂತದಿಂದಲೇ ಶಿಕ್ಷಣಕ್ಕಾಗಿ ಒತ್ತು ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಕರೆ ನೀಡಿದರು.
ನಗರದ ಟಕ್ಕೆಯಲ್ಲಿರುವ ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಶುಕ್ರವಾರ ನಡೆದ ಎಂಎಸ್ಐಎಲ್ ಸಿಎಸ್ಆರ್ ಅನುದಾನದಡಿ ನಿರ್ಮಿಸಲಾದ ಸಭಾ ಭವನ ಉದ್ಘಾಟನೆ, ೨೦೨೪-೨೫ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಗಸ್ತ್ಯ ಫೌಂಡೇಶನ್ ಪ್ರಾಯೋಜಕತ್ವದ ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಸಂಚಾರಿ ವಿಜ್ಞಾನ ಪ್ರಯೋಗಾಲಯದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮಕ್ಕಳ ಸರ್ವಾಂಗೀಣ ಅಭಿವೃದ್ದಿಗಾಗಿ ಪಾಲಕರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಕಡ್ಡಾಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಗುಣಮಟ್ಟದ ಶಿಕ್ಷಣ ಒದಗಿಸುವ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ದಿಗಾಗಿ ಪ್ರಾಥಮಿಕ ಶಾಲಾ ಹಂತದಲ್ಲಿಯೇ ಪಾಲಕರು, ಶಿಕ್ಷಕರು ವಿಶೇಷ ಗಮನ ಹರಿಸಬೇಕು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು ನೀಡಿ ಅವಶ್ಯಕ ವಾತಾವರಣ ನಿರ್ಮಿಸಲಾಗಿದೆ. ಅವಶ್ಯಕವಿರುವ ವಿವಿಧ ಪರಿಕರಗಳನ್ನು ಸಹ ಒದಗಿಸಲಾಗುತ್ತಿದೆ. ಜಿಲ್ಲೆಯ ಶೈಕ್ಷಣಿಕ ಉನ್ನತಿಗಾಗಿ ವಿವಿಧ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗುವುದು. ನಿರಂತರ ಶೈಕ್ಷಣಿಕ ಕಮ್ಮಟ, ಕಾರ್ಯಗಾರ ಮಾಡುವ ಮೂಲಕ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವತ್ತ ಎಲ್ಲರೂ ಶ್ರಮಿಸಬೇಕು. ಕಲಿಕಾ ಮಟ್ಟ ಹೆಚ್ಚಿಸಲು ಶ್ರಮಿಸಬೇಕು. ಶಾಲೆಗೆ ಶಿಕ್ಷಕ ಹೃದಯವಿದ್ದ ಹಾಗೆ..ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಒಟ್ಟಾರೆ ಜಿಲ್ಲೆಯ ಶೈಕ್ಷಣಿಕ ಬೆಳವಣಿಗೆಯ ಜವಾಬ್ದಾರಿಯನ್ನು ಸಾಮಾಜಿಕ ಜವಾಬ್ದಾರಿಯಾಗಿ ತೆಗೆದುಕೊಂಡು ಶಿಕ್ಷಕರು, ಅಧಿಕಾರಿಗಳು ಶ್ರಮಿಸುವ ಮೂಲಕ ಶೈಕ್ಷಣಿಕ ಗುಣಮಟ್ಟ ಹಾಗೂ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಕೈ ಜೋಡಿಸಬೇಕು ಎಂದು ಅವರು ಹೇಳಿದರು.
ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಅವರು ಮಾತನಾಡಿ, ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಅನೇಕ ಸೌಲಭ್ಯಗಳನ್ನು ಒದಗಿಸಿದೆ. ಈ ಸೌಲಭ್ಯಗಳನ್ನು ಬಳಸಿಕೊಳ್ಳುವ ಮೂಲಕ ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಿ, ಶಿಕ್ಷಕರು ಶ್ರಮಿಸಬೇಕು. ಶಿಕ್ಷಕರು, ವಿಜ್ಞಾನದ ಅವಿಷ್ಕಾರಗಳ ಕುರಿತು, ಹೊಸ ಹೊಸ ವಿಚಾರಗಳನ್ನು ಮಕ್ಕಳಿಗೆ ಬೋಧನೆ ಮಾಡಬೇಕು. ಸ್ಮಾರ್ಟ ಕ್ಲಾಸ್ ವ್ಯವಸ್ಥೆ ಸಹ ಒದಗಿಸಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯ ಸುಭದ್ರಗೊಳಿಸಬೇಕು ಎಂದು ಹೇಳಿದರು.
ಧಾರವಾಡದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹಾಗೂ ಜಿಪಂ ಸಿಇಓ ರಿಷಿ ಆನಂದ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀಮತಿ ಟಿ.ಎಚ್. ಕೊಲ್ಹಾರ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಗುರು ದಾಸ್ಯಾಳ, ಬಿಇಒ ಕಚೇರಿಯ ಸಮನ್ವಯಾಧಿಕಾರಿ ಶ್ರೀಮತಿ ಮೋಸಲಗಿ ಅಗಸ್ತ್ಯ ಫೌಂಡೇಶನ್ ಸಮನ್ವಯಾಧಿಕಾರಿ ಶ್ರೀಮತಿ ಗೀತಾ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಬಳೋಲಮಟ್ಟಿ ಸ್ವಾಗತಿಸಿದರು. ಪರಶುರಾಮ ಭಜಂತ್ರಿ ನಾಡಗೀತೆ ಹಾಡಿದರು.

” ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಿ, ಅವರ ಭವಿಷ್ಯ ಬೆಳಗುವ ಜವಾಬ್ದಾರಿಯಾಗಿದೆ. ಮಕ್ಕಳು ಉನ್ನತ ಶಿಕ್ಷಣ ಪಡೆದು ಸಾಧಕರಾಗಿ ಹೊರ ಹೊಮ್ಮಲು ಸುಸಜ್ಜಿತ ಶಾಲಾ ಕೊಠಡಿಗಳು ಸೇರಿದಂತೆ ಸರ್ಕಾರ ಅಗತ್ಯ ಸೌಲಭ್ಯ ನೀಡಿದ್ದು, ಇದರ ಸದುಪಯೋಗ ಪಡೆದುಕೊಂಡು ಗುಣಮಟ್ಟದ ಶಿಕ್ಷಣ ಒದಗಿಸಲು ಮುಂದಾಗಬೇಕು.”
– ಸಂಗಮೇಶ ಬಬಲೇಶ್ವರ
ಅಧ್ಯಕ್ಷರು, ಕರ್ನಾಟಕ ಬಾಲವಿಕಾಸ ಅಕಾಡೆಮಿ

” ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವ ಸಚಿವರ ಆಶಯದಂತೆ ಸಿಎಸ್ಆರ್ ಅನುದಾನವನ್ನು ಬಳಸಿಕೊಂಡು ಸುಸಜ್ಜಿತ ಸಭಾಭವನ ಸ್ಮಾರ್ಟಕ್ಲಾಸ್ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ. ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸಿ ಪ್ರೊತ್ಸಾಹಿಸಲು ಸರ್ಕಾರ ಸಮವಸ್ತ್ರ, ಶೂ, ಪಠ್ಯ ಪುಸ್ತಕಗಳನ್ನು ಒದಗಿಸುತ್ತದೆ. ಈ ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆದು, ಸಾಧಕರಾಗಿ ಹೊರ ಹೊಮ್ಮಬೇಕು.”
– ರಿಷಿ ಆನಂದ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿಜಯಪುರ