ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲಿಸಿದ ಜಿ.ಪಂ.ಸಿಇಓ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ರವರು ಜುಲೈ ೨ರಂದು ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣವಾದ ಎನ್.ಆರ್.ಎಲ್.ಎಮ್ ಸಂಜೀವಿನಿ ಶೆಡ್ ಕಟ್ಟಡ ಹಾಗೂ ನೂತನ ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಇದೇ ವೇಳೆ ನೂತನವಾಗಿ ನಿರ್ಮಾಣವಾಗುತ್ತಿರುವ ಗ್ರಂಥಾಲಯ ಕಟ್ಟಡಕ್ಕೆ ಬೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿ, ಗ್ರಂಥಾಲಯ ಪೂರ್ಣಗೊಂಡ ತಕ್ಷಣವೇ ಎಲ್ಲ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಬೇಕು ಎಂದರು.
ಅಂಗನವಾಡಿ ಮಕ್ಕಳಿಗೆ ಬೆಂಚ್ ವಿತರಣೆ: ಸಿಇಓ ರಿಷಿ ಆನಂದ ಅವರು, ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕುರ್ಚಿ ಮತ್ತು ಬೆಂಚ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಕ್ಕಳೊಂದಿಗೆ ಸಂವಾದ ನಡೆಸಿ ಕೇಂದ್ರದಲ್ಲಿ ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ ವಿತರಣೆ, ಆಟ, ಪಾಠ ಯೋಗಕ್ಷೇಮ ಕುರಿತು ವಿಚಾರಿಸಿದರಲ್ಲದೆ, ಕೇಂದ್ರದಲ್ಲಿ ಎಲ್ಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಮತ್ತು ಮಕ್ಕಳಿಗೆ ಸಮಯಾನುಸಾರ ಪೌಷ್ಠಿಕ ಆಹಾರ ವಿತರಣೆಗೆ ಕ್ರಮವಹಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದೇ ವೇಳೆ ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಒಕ್ಕೂಟದ ಸದಸ್ಯರೊಂದಿಗೆ ಸಂಘದ ಉಳಿತಾಯ, ಸ್ವ-ಉದ್ಯೋಗ ಮತ್ತು ಸಾಲ ಸೌಲಭ್ಯದಿಂದ ಸಂಘಗಳಿಗೆ ಅನುಕೂಲವಾಗಿರುವ ಬಗ್ಗೆ ಹಾಗೂ ಮಹಿಳಾ ಸಬಲೀಕರಣ ಕುರಿತು ಚರ್ಚಿಸಿದರು.
ಬಳಿಕ ನಿಡೋಣಿ ಗ್ರಾಮದಲ್ಲಿರುವ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಗ್ಯ ಕ್ಷೇಮ ಕೇಂದ್ರಕ್ಕೆ ಭೇಟಿ: ಆರೋಗ್ಯ ಕ್ಷೇಮ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರತಿನಿತ್ಯ ಆಸ್ಪತ್ರೆಗೆ ಭೇಟಿ ಕೊಡುವ ರೋಗಿಗಳ ವಿವರಗಳ ಕುರಿತು ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದರು.
ನಂತರ, ೧೫ ನೇ ಹಣಕಾಸಿನ ಯೋಜನೆ ಅಡಿ ಮತ್ತು ಗ್ರಾ.ಪಂ. ಅನುದಾನದಿಂದ ನೂತನವಾಗಿ ನಿರ್ಮಿಸಲಾಗಿರುವ ಜ್ಞಾನ ಮತ್ತು ಯೋಗ ಮಂದಿರ ಭೇಟಿ ನೀಡಿ ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜೆ. ಎಸ್. ಪಠಾಣ, ಸಹಾಯಕ ನಿರ್ದೇಶಕರು (ಗ್ರಾ.ಉ) ವ್ಹಿ. ಎಸ್. ಹಿರೇಮಠ, ವೈದ್ಯಾಧಿಕಾರಿಗಳಾದ ಡಾ. ಶೀತಲ ಕಿನಗಿ, ತಾಲೂಕು ಯೋಜಾನಾಧಿಕಾರಿಗಳಾದ ಎಸ್ ಬಿ. ಪಾಟೀಲ, ನಿಡೋಣಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಬಿ. ಹೆಚ್. ಮುಜಾವರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಎಸ್. ಎಸ್. ಮ್ಯಾಗೇರಿ, ಗ್ರಾಮ ಪಂಚಾಯತಿಯ ಚುನಾಯಿತ ಸದಸ್ಯರು, ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿಯ ಸಿಬ್ಬಂದಿ, ಮಹಿಳಾ ಒಕ್ಕೂಟಗಳ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

