ಬಿಜೆಪಿ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭವಿಷ್ಯ
ಮೈಸೂರು: ರಾಜ್ಯದಲ್ಲಿ ಈಗಲೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿ 130 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಕೇಂದ್ರದಲ್ಲಿ ಎನ್ಡಿಎ ಸರ್ಕಾರದ 11 ವರ್ಷಗಳ ಆಡಳಿತವನ್ನು ಗುರುತಿಸಲು ನಡೆದ ಬಿಜೆಪಿ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವವರೆಗೆ ತಾನು ವಿಶ್ರಮಿಸುವುದಿಲ್ಲ ಎಂದು ಘೋಷಿಸಿದ ಅವರು, ಕೇಂದ್ರದೊಂದಿಗೆ ಸಮನ್ವಯದಿಂದ ಡಬಲ್ ಎಂಜಿನ್ ಸರ್ಕಾರವಾಗಿ ಕೆಲಸ ಮಾಡುವುದಾಗಿ ಹೇಳಿದರು.
ಹಳೇ ಮೈಸೂರು ಪ್ರದೇಶದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವಂತೆ ನೋಡಿಕೊಳ್ಳುವ ಸವಾಲನ್ನು ಸ್ವೀಕರಿಸಿದ್ದೇನೆ ಎಂದು ಹೇಳಿದರಲ್ಲದೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ತಿಳಿಸಿದರು.
ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಕಳಪೆ ಆಡಳಿತದ ಬಗ್ಗೆ ಕಾಂಗ್ರೆಸ್ ಶಾಸಕರು ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಜನರು ಸರ್ಕಾರವನ್ನು ಶಪಿಸುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಉತ್ತಮ ರಸ್ತೆಗಳನ್ನು ಪಡೆಯಲು ಉಚಿತ ಗ್ಯಾರಂಟಿ ಯೋಜನೆಗಳು ಮತ್ತು ಅನ್ನಭಾಗ್ಯ ಅಕ್ಕಿಯನ್ನು ತ್ಯಜಿಸುವಂತೆ ಹೇಳಿರುವ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರನ್ನು ಟೀಕಿಸಿದ ವಿಜಯೇಂದ್ರ, ಜನರ ಗಮನವನ್ನು ಬೇರೆಡೆ ಸೆಳೆಯಲು ಸಿದ್ದರಾಮಯ್ಯ ಕಾಂತರಾಜ್ ಆಯೋಗದ ವರದಿಯನ್ನು ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ರಣದೀಪ್ ಸಿಂಗ್ ಸುರ್ಜೇವಾಲರಿಂದ ನಾಯಕತ್ವಕ್ಕೆ ಅಡಿಪಾಯ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಎಂ ಸ್ಪರ್ಧೆಯಿಂದ ಹೊರಬಂದಿದ್ದಾರೆ ಎಂದು ಸುಳಿವು ನೀಡಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲು ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದೆ. ರಣದೀಪ್ ಸಿಂಗ್ ಸುರ್ಜೇವಾಲ (ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ) ಪಕ್ಷದ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸುವ ಮೂಲಕ ನಾಯಕತ್ವ ಬದಲಾವಣೆಗೆ ಅಡಿಪಾಯ ಹಾಕಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.
“ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನು ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಸಂಚಾಲಕರನ್ನಾಗಿ ನೇಮಿಸಿ ಅವರನ್ನು ನವದೆಹಲಿಗೆ ಸ್ಥಳಾಂತರಿಸಿದೆ. ಸಿದ್ದರಾಮಯ್ಯ ಅವರ ಸ್ಥಾನವನ್ನು ಬದಲಾಯಿಸಲಾಗುವುದು ಎಂದು ನನಗೆ ವಿಶ್ವಾಸವಿದೆ. ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಮುಂದಿನ ಎರಡು ತಿಂಗಳಲ್ಲಿ ರಾಜೀನಾಮೆ ನೀಡಬೇಕಾಗುತ್ತದೆ” ಎಂದು ವಿಜಯೇಂದ್ರ ಹೇಳಿದರು.

“ಕಳೆದ ಒಂದೂವರೆ ವರ್ಷದಿಂದ ಪಕ್ಷ ಸಂಘಟನೆಗೆ ನಾನು ಕೆಲಸ ಮಾಡಿದ್ದೇನೆ. ನನ್ನ ಹೋರಾಟದ ಬಗ್ಗೆ ಕಾರ್ಯಕರ್ತರು, ಹೈಕಮಾಂಡ್ಗೆ ತೃಪ್ತಿಯಿದೆ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ನನ್ನನ್ನೇ ಮುಂದುವರಿಸುವ ವಿಶ್ವಾಸ ನನಗಿದೆ. ಅಂತಿಮವಾಗಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ.”
– ಬಿ.ವೈ.ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷರು

