ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ
ಉದಯರಶ್ಮಿ ದಿನಪತ್ರಿಕೆ
ಹಡಪದ ಅಪ್ಪಣ್ಣನವರ ವಚನಗಳು ಸಾರ್ವಕಾಲಿಕ : ಬಬಲೇಶ್ವರ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಿಜಶರಣ ಹಡಪದ ಅಪ್ಪಣ್ಣನವರು ನಮ್ಮ ನಾಡಿನ ಸ್ವತ್ತು ಇದ್ದಂತೆ. ಬಸವಾದಿ ಕಾಲದ ಎಲ್ಲ ಶರಣರು ಸಮ ಸಮಾಜವನ್ನು ನಿರ್ಮಿಸುವಲ್ಲಿ ಬಹಳಷ್ಟು ಶ್ರಮಿಸಿದವರು ಎಂದು ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ೧೨ನೇ ಶತಮಾನದ ಶರಣರು ಅಂದಿನ ಸಮಾಜದಲ್ಲಿದ್ದ ಮೂಢನಂಬಿಕೆ, ಮೌಢ್ಯತೆಯನ್ನು ತೊಡೆದು ಹಾಕಲು ವಚನಗಳ ಮೂಲಕ ಸಂದೇಶ ಸಾರಿದರು. ಹಡಪದ ಅಪ್ಪಣ್ಣ ಅವರು ಜ್ಞಾನಿಗಳು, ಇದೇ ಜಿಲ್ಲೆಯವರು. ಅವರ ವಚನಗಳು ಸಾರ್ವಕಾಲಿಕವಾಗಿವೆ ಎಂದು ಅವರು ಹೇಳಿದರು.
ಡಿವೈಎಸ್ಪಿ ಬಸವರಾಜ ಯಲಿಗಾರ ಅವರು ಮಾತನಾಡಿ, ೧೨ನೇ ಶತಮಾನದ ಶರಣರು ಸಮಾಜದ ಅಂಕುಡೊಂಕು ಓರೆಕೋರೆ ತಿದ್ದುವಲ್ಲಿ ಬಹಳ ಶ್ರಮಿಸಿದರು. ವಚನಗಳ ಸಂಶೋಧನೆ ನಿರಂತರವಾಗಿ ನಡೆಯಬೇಕು. ಅವರ ವಚನಗಳಲ್ಲಿನ ಆದರ್ಶ ವಿಚಾರಗಳು ಜಯಂತಿಗೆ ಮಾತ್ರ ಸಿಮೀತವಾಗಿರದೇ ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಡಾ.ಬಸವರಾಜ ಹಡಪದ ಅವರು ವಿಶೇಷ ಉಪನ್ಯಾಸ ನೀಡಿದರು.
ಶ್ರೀಮತಿ ವಿಶಾಲಾಕ್ಷಿ ಬಡಿಗೇರ ವಚನ ಗಾಯನ ನಡೆಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ವೈ.ಎಚ್.ನಾರಾಯಣಕರ, ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಬಸವರಾಜ ಶಿವಶರಣ, ಅಶೋಕ ಉತ್ನಾಳ, ಎಸ್.ಜಿ.ದೇವೂರ, ವಿರುಪಾಕ್ಷಿ ಕತ್ನಳ್ಳಿ, ದಶರಥ ನಾವಿ, ಪ್ರಕಾಶ ಹಡಪದ, ಮಲ್ಲಿಕಾರ್ಜುನ ಬಟಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮೆರವಣಿಗೆಗೆ ಚಾಲನೆ
ಕಾರ್ಯಕ್ರಮಕ್ಕೂ ಮೊದಲು, ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭವಾದ ಹಡಪದ ಅಪ್ಪಣ್ಣ ಅವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ ನೀಡಿದರು.
ಭವ್ಯ ಮೆರವಣಿಗೆಯು ವಿವಿಧ ಕಲಾ ತಂಡಗಳೊಂದಿಗೆ ಅಂಬೇಡ್ಕರ ವೃತ್ತದಿಂದ ಸಾಗಿ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ಆವರಣದಲ್ಲಿ ಸಮಾವೇಶಗೊಂಡಿತು.

“ಶರಣರ ತತ್ವಾದರ್ಶಗಳನ್ನು, ಅವರ ವಚನಗಳ ಸಾರ ಮುಂದಿನ ಪೀಳಿಗೆಗೆ ತಿಳಿಸಬೇಕು. ಶರಣರು ತೋರಿಸಿದ ಜ್ಞಾನ ಪಥದಲ್ಲಿ ನಡೆದು ಜೀವನ ಸಾರ್ಥಕಪಡಿಸಿಕೊಳ್ಳಬೇಕು ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಬೇಕು ಶಿವಶರಣರ ವಚನಗಳ ಪುಸ್ತಕಗಳನ್ನು ಓದುವಂತಾಗಬೇಕು ವಚನ ಸಂಸ್ಕೃತಿ ಮನೆ-ಮನೆಗಳಿಗೆ ತಲುಪುವಂತಾಗಬೇಕು ಅವರ ವಿಚಾರಧಾರೆಗಳು ಸಮರ್ಪಕವಾಗಿ ಅನುಷ್ಟಾನಗೊಂಡಲ್ಲಿ ಮಾತ್ರ ಶರಣರಿಗೆ ಸಂದ ಗೌರವ.”
– ಸಂಗಮೇಶ ಬಬಲೇಶ್ವರ
ಅಧ್ಯಕ್ಷರು, ಕರ್ನಾಟಕ ಬಾಲವಿಕಾಸ ಅಕಾಡೆಮಿ