ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪ್ರಕೃತಿಯ ಸಂಪನ್ಮೂಲಗಳು ಸೀಮಿತವಾಗಿವೆ. ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವುದು ಅಭಿವೃದ್ಧಿಯಲ್ಲಿ ಹಿನ್ನೆಡೆಯಾಗುತ್ತಿದೆ. ಹೀಗಾಗಿ ಜನಸಂಖ್ಯೆ ನಿಯಂತ್ರಣ ಅಗತ್ಯವಾಗಿದೆ. ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ನೂರಾನಿ ಮುಗಲಾಯಿ ಹೇಳಿದರು.
ಸಿಂದಗಿ ಪಟ್ಟಣದ ತಾಲೂಕು ಆರೋಗ್ಯ ಕೇಂದ್ರದ ಸಭಾಭವನದಲ್ಲಿ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನಸಂಖ್ಯೆ ನಿಯಂತ್ರಿಸುವ ಉದ್ದೇಶದಿಂದ ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸಂತಾನ ನಿಯಂತ್ರಣಕ್ಕೆ ಮಾತ್ರಗಳು ಮತ್ತು ಚುಚ್ಚುಮದ್ದುಗಳು ಬಂದಿವೆ. ಅವುಗಳ ಕುರಿತು ಅರಿತುಕೊಂಡು ಜನಸಂಖ್ಯೆ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.
ಈ ವೇಳೆ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಎ.ಎ.ಮಾಗಿ ಮಾತನಾಡಿ, ಕಲ್ಯಾಣ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ತಾತ್ಕಾಲಿಕ ಹಾಗೂ ಶಾಶ್ವತ ವಿಧಾನಗಳನ್ನು ಒದಗಿಸಬೇಕು. ಇದರಿಂದ ಜನಸಂಖ್ಯೆಯಲ್ಲಿ ಸ್ಥಿರತೆ ಕಾಪಾಡಬಹುದು. ಆದ್ದರಿಂದ ಇಲಾಖೆಯ ಸಿಬ್ಬಂದಿಯವರು ಆರೋಗ್ಯ ಇಲಾಖೆಯ ಎಲ್ಲಾ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸಬೇಕೆಂದರು.
ಇದೇ ಸಂದರ್ಭದಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು. ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ವೈ.ಚೌಡಕಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆ ಆಪ್ತ ಸಮಾಲೋಚಕಿ ಗೀತಾ ಸಾಸಾಬಾಳ, ಉಮೇಶ ಗಂಗರಗೊಂಡ, ಮಹಾಲಿಂಗ ಫಕಿರಪೂರ, ಸಿದ್ದು ಕಡಬಗಾವಿ, ಪ್ರಭು ಜಂಗಿನಮಠ ಸೇರಿದಂತೆ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಆರೋಗ್ಯ ನಿರ್ವಹಣಾಧಿಕಾರಿ, ಸಮುದಾಯ ಆರೋಗ್ಯಾಧಿಕಾರಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

