ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಕ್ಕಳ ರಕ್ಷಣೆ ಮತ್ತು ಅವರ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು ಈ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಮಕ್ಕಳ ರಕ್ಷಣೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ಹೇಳಿದರು.
ಮಕ್ಕಳ ನಿರ್ದೇಶನಾಲಯ ಬೆಂಗಳೂರು, ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಭಾಗಿದಾರ ಇಲಾಖೆಗಳು, ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಆರ್ಟಿಇ-೨೦೦೯ ಪೋಕ್ಸೋ-೨೦೧೨ ಹಾಗೂ ಬಾಲ ನ್ಯಾಯ ಕಾಯ್ದೆ ೨೦೧೫ ಅನುಷ್ಠಾನ ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾರ್ಯಕ್ರಮ-ಯೋಜನೆಗಳ ಕುರಿತು ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಇರುವ ಕಾಯ್ದೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ-೧೦೯೮ ಎದ್ದು ಕಾಣುವಂತೆ ಮಾಹಿತಿ ಫಲಕ ಅಳವಡಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಕ್ಕಳ ಸಭೆ ನಡೆಸಿ ನಡಾವಳಿಯನ್ನು ನಿರ್ವಹಿಸಬೇಕು. ಬಾಲ್ಯವಿವಾಹ, ಅಪೌಷ್ಠಿಕತೆ, ಬಾಲಕಾರ್ಮಿಕ ಪದ್ಧತಿ ಇಂತಹ ವಿಷಯಗಳಲ್ಲಿ ಮಕ್ಕಳಿಗೆ ಮತ್ತು ಪಾಲಕರಿಗೆ ಜಾಗೃತಿ ಮೂಡಿಸಬೇಕು. ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿ ಕಾಲಕಾಲಕ್ಕ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ನಡೆಸುವಂತೆ ಅವರು ಸೂಚನೆ ನೀಡಿದರು.
ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಎಂಬುದು ಪತ್ರ ವ್ಯವಹಾರದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬಾಲ್ಯ ವಿವಾಹ ಕುರಿತು ಜಾಗೃತಿ ಮೂಡಿಸಬೇಕು. ವಿಶೇಷವಾಗಿ ವೈದ್ಯಕೀಯ ಚೀಟಿಯಲ್ಲಿ ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಕುರಿತು ಬಳಸುವಂತೆ ಒತ್ತು ನೀಡಬೇಕು. ಅನಿಮಿಯಾ ಮುಕ್ತ ಜಿಲ್ಲೆಯನ್ನಾಗಿಸಲು ಈಗಾಗಲೇ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಕುರಿತು ವ್ಯಾಪಕವಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ಅಪೌಷ್ಠಿಕತೆ, ತಾಯಿ-ಮಕ್ಕಳ ಮರಣ ಪ್ರಮಾಣ, ಪ್ರಸವಪೂರ್ವ ಭ್ರೂಣ ಪತ್ತೆ ನಿಷೇಧ ಕಾಯ್ದೆಯನ್ನು ಜಿಲ್ಲೆಯಲ್ಲಿ ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕಾಲಕಾಲಕ್ಕೆ ಸ್ಕ್ಯಾನಿಂಗ್ ಸೆಂಟರ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿಗಳ ಕೇಂದ್ರಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.
ವಿವಿಧ ವಸತಿ ನಿಲಯ, ವಸತಿ ಶಾಲೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಕಾಲಕಾಲಕ್ಕೆ ಭೇಟಿ ನೀಡಿ ನಿಲಯಗಳಲ್ಲಿ ಮಕ್ಕಳಿಗೆ ಕಲ್ಪಿಸಲಾಗುತ್ತಿರುವ ಆಹಾರ, ಮೂಲಭೂತ ಸೌಲಭ್ಯಗಳ ಪರಿಶೀಲನೆ ನಡೆಸಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಮಾತನಾಡಿ, ಪ್ರತಿ ಶಾಲಾ ಕಾಲೇಜ್ಗಳಲ್ಲಿ ಅರಿವು ಮೂಡಿಸಲು ವಿಶೇಷ ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಬಾಲ್ಯವಿವಾಹ, ಬಾಲಕಾರ್ಮಿಕ, ಮಕ್ಕಳಲ್ಲಿರುವ ಅಪೌಷ್ಠಿಕತೆ, ಅನಿಮಿಯಾ, ಶಾಲೆ ಬಿಟ್ಟ ಮಕ್ಕಳು ಸೇರಿದಂತೆ ಸಮಗ್ರ ಮಾಹಿತಿ ಪಡೆದು, ರೂಪರೇಷೆ ಸಿದ್ಧಪಡಿಸಿಕೊಂಡು ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಲಾತ್ತಿದ್ದು, ಮಕ್ಕಳ ರಕ್ಷಣೆಗಾಗಿ ಆಯೋಗ ನೀಡಿರುವ ಸಲಹೆ-ಸೂಚನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ಹೇಳಿದರು.
ಸಭೆಯಲ್ಲಿ ಆಯೋಗದ ಸದಸ್ಯರುಗಳಾದ ಶೇಖರಗೌಡ ರಾಮತ್ನಾಳ, ಶಶಿಧರ ಕೋಸಂಬೆ, ಡಾ.ಕೆ.ಟಿ. ತಿಪ್ಪೇಸ್ವಾಮಿ, ಶ್ರೀಮತಿ ಮಂಜು ವೆಂಕಟೇಶ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಡಿವೈಎಸ್ಪಿ ಬಸವರಾಜ ಯಲಿಗಾರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ ಸೌದಾಗರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಶ್ರೀಮತಿ ದೀಪಾಕ್ಷಿ ಜಾನಕಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕಾಲಕಾಲಕ್ಕೆ ಸಭೆಗಳನ್ನು ನಡೆಸಿ ಸೂಕ್ತ ಸೂಚನೆಗಳನ್ನು ನೀಡಲಾಗಿದೆ. ಶಿಕ್ಷಣ, ಆರೋಗ್ಯ, ಪೋಲಿಸ್ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯಿಂದ ವರ್ಷಪೂರ್ತಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ತಿಳುವಳಿಕೆ ನೀಡಲಾಗುತ್ತಿದೆ ಎಂದು ಹೇಳಿದರು.
– ಡಾ.ಆನಂದ್ ಕೆ
ಜಿಲ್ಲಾಧಿಕಾರಿ, ವಿಜಯಪುರ

" ಪಂಚಾಯತ್ ರಾಜ್ ಇಲಾಖೆಯು ಮಕ್ಕಳ ಹಿತದೃಷ್ಟಿಯಿಂದ ಆರೋಗ್ಯ, ಶಿಕ್ಷಣ ಭವಿಷ್ಯ ಇದನ್ನರಿತು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಲಾಗುತ್ತಿದೆ. ಮಕ್ಕಳ ಓದಿಗಾಗಿ ಗ್ರಾಮ ಪಂಚಾಯತ್ ಕರ ವಸೂಲಾತಿಯನ್ನು ಬಳಸಿಕೊಂಡು ಮಕ್ಕಳಿಗಾಗಿ ಗ್ರಂಥಾಲಯ ಸೇರಿದಂತೆ ಮಕ್ಕಳಿಗೆ ಪೂರಕ ಚಟವಟಿಕೆ, ವಾತಾವರಣ ನಿರ್ಮಿಸಲಾಗಿದೆ."– ರಿಷಿ ಆನಂದ
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ

