ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಕಟ್ಟುನಿಟ್ಟಿನ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅತಿವೃಷ್ಟಿ-ಪ್ರವಾಹದಿಂದ ಉಂಟಾಗುವ ಮನೆ ಹಾನಿ, ಜನ-ಜಾನುವಾರುಗಳ ಹಾನಿಗೆ ನಿಗದಿತ ಅವಧಿಯಲ್ಲಿ ತುರ್ತಾಗಿ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಂಗವಾರ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಅತಿವೃಷ್ಟಿ ಪ್ರವಾಹದಿಂದ ಹಾನಿಗೀಡಾದ ಮನೆಗಳಿಗೆ ೭೨ ಗಂಟೆಯೊಳಗೆ ಹಾಗೂ ಜಾನುವಾರು ಹಾನಿಗೆ ೪೨ ಗಂಟೆಯೊಳಗೆ ಪರಿಹಾರ ಒದಗಿಸಲು ಕ್ರಮ ವಹಿಸಬೇಕು. ತುರ್ತು ಪರಿಸ್ಥಿತಿಯಲ್ಲಿ ತುರ್ತಾಗಿ ನೀಡುವ ಪರಿಹಾರವಾಗುವುದರಿಂದ ಈ ಕಾರ್ಯವನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ಪ್ರಕರಣಗಳನ್ನು ಬಾಕಿ ಉಳಿಸಿಕೊಳ್ಳದೇ, ಪ್ರಕರಣಗಳನ್ನು ಇತ್ಯರ್ಥಪಡಿಸಿ, ತುರ್ತಾಗಿ ನಿಗದಿತ ಅವಧಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಅತಿವೃಷ್ಟಿ-ಪ್ರವಾಹಕ್ಕೊಳಪಡುವ ಪ್ರದೇಶಗಳ ಮಾಹಿತಿಯನ್ನು ಅಧಿಕಾರಿಗಳು ಮುಂಚಿತವಾಗಿ ಹೊಂದಿರಬೇಕು. ಯಾವ ನದಿಯಿಂದ ಎಷ್ಟು ಪ್ರಮಾಣದ ನೀರು ಬಂದಲ್ಲಿ ಹಳ್ಳಿಗಳು ಬಾಧಿತವಾಗಲಿವೆ ಎಂಬುದನ್ನು ತಿಳಿದುಕೊಂಡಿರಬೇಕು. ಸಂಪೂರ್ಣ ಮಾಹಿತಿ ಅರಿತುಕೊಂಡಲ್ಲಿ ಮಾತ್ರ ಪ್ರವಾಹದಂತಹ ಪರಿಸ್ಥಿತಿಯನ್ನು ಸಮರ್ಥವಾಗಿ ಹಾಗೂ ಸಮರ್ಪಕವಾಗಿ ನಿಭಾಯಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸಂಪೂರ್ಣ ಮಾಹಿತಿ ಅರಿತುಕೊಳ್ಳಬೇಕು ಎಂದು ಅವರು ಹೇಳಿದರು.
ಬೆಳೆ ಹಾನಿಗೆ ಸಂಬಂಧಿಸಿದ ಯಾವುದೇ ಕಡತಗಳನ್ನು ಬಾಕಿ ಉಳಿಸಿಕೊಳ್ಳದಂತೆ ಸೂಚಿಸಿದ ಅವರು, ಬೆಳೆ ಹಾನಿ ಪರಿಹಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಕಾರ್ಯದಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸದೇ, ತುರ್ತೆಂದು ಪರಿಗಣಿಸಿ ರೈತರನ್ನು ಅಲೆದಾಡಿಸದೇ ಪರಿಹಾರ ಪೋರ್ಟಲ್ ಮೂಲಕ ನಿಗದಿತ ಕಾಲಾವಧಿಯೊಳಗೆ ಪರಿಹಾರ ದೊರಕಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯ ಗ್ರಾಮ ಮಟ್ಟದಲ್ಲಿರುವ ಓವರ್ ಹೆಡ್ ಟ್ಯಾಂಕ್ಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಸ್ವಚ್ಛಗೊಳಿಸಬೇಕು. ಓವರ್ ಟ್ಯಾಂಕ್ ಸ್ವಚ್ಛಗೊಳಿಸುವ ಮಾಹಿತಿ ಜನರಿಗೆ ಒದಗಿಸಬೇಕು. ಸ್ವಚ್ಛಗೊಳಿಸಿದ ಕುರಿತು ಸಂಬಂಧಿಸಿದ ಗ್ರಾಮ ಪಂಚಾಯತ್ನಲ್ಲಿ ಲಾಗ್ ಪುಸ್ತಕ ನಿರ್ವಹಿಸಿ, ಪುಸ್ತಕದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಸದಸ್ಯರು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ವಹಿಸಿ ಸಹಿ ಮಾಡಿ ದೃಢೀಕರಿಸಿ ಸಂರಕ್ಷಿಸಿಡುವಂತೆ ಅವರು ಸೂಚನೆ ನೀಡಿದರು.
ಮಳೆಗಾಲದ ಸಂದರ್ಭದಲ್ಲಿ ನಗರ ಪ್ರದೇಶ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಎಚ್ಚರಿಕೆ ವಹಿಸಬೇಕು. ಕುಡಿಯುವ ನೀರಿನಲ್ಲಿ ಕಲುಷಿತ ನೀರು ಅಥವಾ ಕೊಳಚೆ ನೀರು ಸೇರದಂತೆ ಕಟ್ಟೆಚ್ಚರ ವಹಿಸಬೇಕು. ಕುಡಿಯುವ ನೀರು ಪೂರೈಸುವ ಮುನ್ನ ನೀರಿನ ಮೂಲ, ನೀರು ಸಂಗ್ರಹಿಸುವ ಸ್ಥಳ, ನೀರಿನ ಮುಕ್ತಾಯದ ಹಂತದ ಸೇರಿದಂತೆ ೩ ಕಡೆ ಪರೀಕ್ಷಿಸಿದ ನಂತರವೇ ಸಂಬಂಧಿಸಿದ ಅಧಿಕಾರಿಗಳು ಖಚಿತಪಡಿಸಿಕೊಂಡು ನೀರು ಪೂರೈಕೆಗೆ ಕ್ರಮ ವಹಿಸಬೇಕು. ವಿಜಯಪುರ ನಗರದ ೩೫ ವಾರ್ಡಗಳ ವ್ಯಾಪ್ತಿಯಲ್ಲಿ ಪ್ರತಿ ೧೫ ದಿನಗಳಿಗೊಮ್ಮೆ ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಿ ನೀರು ಪೂರೈಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಎದುರಾಗಬಹುದಾದ ಅತಿವೃಷ್ಟಿ-ಪ್ರವಾಹ ಪರಿಸ್ಥಿತಿಯಿಂದ ಜನರಿಗೆ ಆಶ್ರಯ ಒದಗಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಎತ್ತರದ ಪ್ರದೇಶದಲ್ಲಿ ಕಾಳಜಿ ಕೇಂದ್ರಗಳ ನಿರ್ಮಾಣಕ್ಕೆ ಮುಂಚಿತವಾಗಿಯೇ ಗುರುತಿಸಬೇಕು. ಬಾಧಿತವಾಗುವ ಪ್ರದೇಶಗಳ ಜನರಿಗೆ ಸುಲಭವಾಗಿ ಕೇಂದ್ರಗಳ ಮಾಹಿತಿ ದೊರಕುವಂತಿರಬೇಕು. ಈ ಕುರಿತು ಜನರಿಗೆ ಮಾಹಿತಿ ಒದಗಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಕಂದಾಯೇತರ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ಕಾಳಜಿ ಕೇಂದ್ರ ಉತ್ತಮ ಸ್ಥಿತಿಯ ಕಟ್ಟಡ ಸೇರಿದಂತೆ ಮೂಲಭೂತ ಸೌಲಭ್ಯ ಹೊಂದಿರಬೇಕು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ವಿಫಲವಾದ ಬೊರವೆಲ್ಗಳು ಇರದಂತೆ ನೋಡಿಕೊಳ್ಳಬೇಕು. ಇಂತಹ ಬೊರವೆಲ್ ಕಂದು ಬಂದಲ್ಲಿ ಕೂಡಲೇ ಮುಚ್ಚಲು ಕ್ರಮ ವಹಿಸಬೇಕು. ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಬೊರವೆಲ್ಗಳ ಮಾಹಿತಿಯನ್ನು ಅಧೀನ ಸಿಬ್ಬಂದಿಯಿಂದ ಸಂಗ್ರಹಿಸಿಟ್ಟುಕೊಳ್ಳುವಂತೆ ಅವರು ಸೂಚನೆ ನೀಡಿದರು.
ವಿಪತ್ತು ನಿರ್ವಹಣೆಯಲ್ಲಿ ಅಗ್ನಿಶಾಮಕ ಇಲಾಖೆ ಪಾತ್ರ ಅತಿ ಮಹತ್ವದ್ದಾಗಿದೆ. ಕಳೆದ ೫ ವರ್ಷಗಳಲ್ಲಿ ಅಗ್ನಿ ಶಾಮಕ ಇಲಾಖೆಗೆ ಬಂದಿರುವ ದೂರುಗಳು, ದೂರುಗಳಿಗೆ ಸ್ಪಂದಿಸಿದ ವಿವರ ಸೇರಿದಂತೆ ವರ್ಗೀಕರಿಸಿ ಸಮಗ್ರ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುರ್ತು ಸಂದರ್ಭದಲ್ಲಿ ರಕ್ಷಣಾ ಸಮಾಗ್ರಿ ಬೋಟ್ಸ್, ರೋಪ್ಸ್, ಲೈಫ್ ಜಾಕೆಟ್, ಇತ್ಯಾದಿ ಸಾಮಗ್ರಿಗಳನ್ನು ತಾಲೂಕಾ ಹಾಗೂ ಜಿಲ್ಲಾ ಮಟ್ಟದಲ್ಲಿ ಸುಸಜ್ಜಿತವಾಗಿಟ್ಟುಕೊಳ್ಳಬೇಕು. ಕೃಷ್ಣಾ-ಭೀಮಾ ನದಿ ಒಳ ಹರಿವು ಕುರಿತು ಮಹಾರಾಷ್ಟç ರಾಜ್ಯದ ಅಧಿಕಾರಿಗಳೊಂದಿಗೆ ನಿರಂತರ ಸಾಧಿಸಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಕೇಂದ್ರ ೧೦೭೭ ವಿದ್ದು, ತಾಲೂಕಾ ಮಟ್ಟದಲ್ಲಿ ಸಹಾಯಣಿ ಆರಂಭಿಸಬೇಕು. ಆಗಾಗ ಜಿಲ್ಲಾ ವಿಪತ್ತು ಪ್ರಾಧಿಕಾರ ಸಭೆ ನಡೆಸಿ ತಾಲೂಕಾ ಮಟ್ಟದಲ್ಲಿ ಸಭೆ ನಡೆಸಿ ಪ್ರವಾಹ ಎದುರಿಸಲು ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಅಗತ್ಯ ಸಲಹೆ-ಸೂಚನೆಗಳನ್ನ ನೀಡಬೇಕು. ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಲು ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭಧಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಸರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

