ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವಂತೆ ಧಾರವಾಡ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.
ಅವರು ತಿಕೋಟಾ ತಾಲೂಕಿನ ಅರಕೇರಿಯಲ್ಲಿರುವ ಅಲ್ಪಸಂಖ್ಯಾತರ ಇಲಾಖೆಯ ಡಾ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಮಂಗಳವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ವಿದ್ಯಾರ್ಥಿಗಳ ಕಲಿಕೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ದೆಸೆಯಲ್ಲಿಯೇ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಪಠ್ಯದಿಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ವಿದ್ಯಾರ್ಥಿ ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ. ವಿದ್ಯಾರ್ಥಿ ಜೀವನವನ್ನು ಅತ್ಯಂತ ಸದುಪಯೋಗಪಡೆದುಕೊಂಡು ಉನ್ನತ ಹುದ್ದೆ ಹೊಂದುವ ಮೂಲಕ ಮಾದರಿ ಎನಿಸಿಕೊಳ್ಳಬೇಕು. ಶಿಕ್ಷಣದ ಜೊತಗೆ ಶಿಸ್ತನ್ನು ಅಳವಡಿಸಿಕೊಳ್ಳಬೇಕು. ಉತ್ತಮ ಭವಿಷ್ಯ ನಿರ್ಮಾಣ ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಅಧ್ಯಯನಶೀಲತೆ ಹಾಗೂ ದೃಢ ನಿಶ್ಚಯ ಹೊಂದಿ, ಆ ದಿಸೆಯಲ್ಲಿ ಸಾಗಬೇಕು. ವಿದ್ಯಾರ್ಥಿಗಳು ಅಮೂಲ್ಯವಾದ ಸಮಯವನ್ನು ಸದುಪಯೋಗ ಪಡೆದು ಕಲಿಕೆಯ ಕಡೆ ಗಮನ ಹರಿಸಬೇಕು ಎಂದು ಮಕ್ಕಳಿಗೆ ಹೇಳಿದರು.
ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ನೀವು ತಂದೆ-ತಾಯಿಗಳಿಂದ ದೂರ ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಮಕ್ಕಳಸ್ನೇಹಿ ವಾತಾವರಣ ಹಾಗೂ ಶಿಸ್ತನ್ನು ಕಲಿಯಬೇಕು ಎಂದು ಹೇಳಿದರು.
ಅಡುಗೆ ಕೊಠಡಿ ಶುಚಿತ್ವ ಮತ್ತು ಶೌಚಗೃಹ ಶಾಲಾ ಆವರಣದ ನೈರ್ಮಲ್ಯ ಶುಚಿತ್ವ ಕಾಪಾಡುವುದರೊಂದಿಗೆ ವಸತಿ ಶಾಲೆಗೆ ವಿತರಣೆ ಆಗಿರುವ ಸೌಲಭ್ಯಗಳ ಸರಿಯಾದ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳ ಶಿಕ್ಷಣದ ಪ್ರಗತಿಗೆ ಹೆಚ್ಚು ಒತ್ತು ನೀಡುವಂತೆ ಅಧಿಕಾರಿಗಳಿಗೆ ಹೇಳಿದರು.
ಈ ಸಂದರ್ಭದಲ್ಲಿ ಅಲ್ಫಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಶಾಂತ ಪೂಜಾರಿ, ಪ್ರಾಂಶುಪಾಲರಾದ ಸಂಗಣ್ಣ ಆಲಗೂರ, ಮಲ್ಲಿಕಾರ್ಜುನ ಹೆಬ್ಬಳ್ಳಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಿದ ಬಬಲೇಶ್ವರ
ಇದೇ ವೇಳೆ ಮಕ್ಕಳ ಸಮಸ್ಯೆ ಆಲಿಸಿದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು, ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಿದರು.