ವಿಜಯಪುರ: ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕವಾಗಿ ಗಟ್ಟಿಗೊಳ್ಳುವುದರೊಂದಿಗೆ ಮಾನಸಿಕ ಸದೃಢತೆ ಹೊಂದಲು ಯುವಕರು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.
ಅವರು, ನಗರದ ಡಾ. ಬಿ.ಆರ್.ಅಂಬೇಡ್ಕರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ೨೦೨೩-೨೪ನೇ ಸಾಲಿನ ವಿಜಯಪುರ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ, ಮಾತನಾಡಿದರು.
ಜಿಲ್ಲೆಯ ೧೩ ತಾಲ್ಲೂಕುಗಳಲ್ಲಿ ವಿಜೇತರಾದ ಕ್ರೀಡಾಪಟುಗಳು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆಯನ್ನು ಹೊಂದಿದ್ದು, ಕ್ರೀಡಾ ನಿಯಮಗಳಿಗೆ ಬದ್ಧರಾಗಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಕರೆ ನೀಡಿದರು.
ಕ್ರೀಡೆ ಪ್ರತಿಯೊಬ್ಬ ಮನುಷ್ಯನ ಅವಿಭಾಜ್ಯ ಅಂಗವಾಗಿದ್ದು, ಶಿಕ್ಷಣದ ಜೊತೆಗೆ ದೈಹಿಕ ಸಾಮರ್ಥ್ಯ ಬೆಳಸಿಕೊಳ್ಳಲು ಪ್ರತಿದಿನ ಕ್ರೀಡೆ ಯೋಗ ಪ್ರಾಣಾಯಾಮ, ಈಜು ಮುಂತಾದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತೀ ಅವಶ್ಯವಾಗಿದೆ ಎಂದು ಹೇಳಿದರು.
ಡಾ.ಜಾವೀದ ಜಮಾದಾರ ಮಾತನಾಡಿ, ಪ್ರತಿದಿನ ಕ್ರೀಡಾ ಅಭ್ಯಾಸವನ್ನು ರೂಡಿಸಿಕೊಳ್ಳಬೇಕು. ಯುವಜನಾಂಗ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದೇ ಸುಂದರ ಜೀವನ ರೂಪಿಸಿಕೊಳ್ಳಲು ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಒಲವು ಹೊಂದಬೇಕು ಎಂದರು.
ರಾಜ್ಯ ಪ್ರಶಸ್ತಿ ವಿಜೇತ ಅರವಿಂದ ಕೊಪ್ಪಮಾತನಾಡಿದರು.,
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಜಿ. ಲೋಣಿ, ಅಡಿವೆಪ್ಪ ಸಾಲಗಲ್, ಎಂ.ವೈ ಚಿಂಚಲಿ ಉಪಸ್ಥಿತರಿದ್ದರು.
Related Posts
Add A Comment