ಉದಯರಶ್ಮಿ ದಿನಪತ್ರಿಕೆ
ವರದಿ: ಗುರು ಆರ್ ಹಿರೇಮಠ
ಆಲಮೇಲ: ಮಳೆಗಾಲ ಪ್ರಾರಂಭವಾದ ಮೇಲೆ ಭೀಮಾ ನದಿಗೆ ಈಗಾಗಲೇ 2-3 ಬಾರಿ ಅಪಾರ ಪ್ರಮಾಣದ ನೀರು ಹರಿದು ಕಡಿಮೆಯಾಗಿದೆ ಎನ್ನುವಷ್ಟರಲ್ಲಿ ಮತ್ತೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ
ಮಹಾರಾಷ್ಟ್ರದ ಭೀಮಾ ನದಿ ಪಾತ್ರದ ಪ್ರದೇಶದಲ್ಲಿ ಬೀಳುತ್ತಿರುವ ಅಪಾರ ಪ್ರಮಾಣದ ಮಳೆಯಿಂದಾಗಿ ಉಜನಿ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ನದಿ ಪಾತ್ರಕ್ಕೆ ಹರಿದು ಬಿಡಲಾಗಿದ್ದು, ಭೀಮಾ ನದಿಯ ಉಪನದಿಯಾದ ಸೀನಾ ನದಿಯು ಕೂಡ ತುಂಬಿ ಹರಿಯುತ್ತಿದ್ದು, ಅಫ್ಜಲಪುರ ತಾಲ್ಲೂಕಿನಲ್ಲಿ ಭೀಮಾ ನದಿಗೆ ಸೇರುವ ಬೋರಿ ಹಳ್ಳಕ್ಕೂ ಕೂಡ ಅಪಾರ ಪ್ರಮಾಣದಲ್ಲಿ ನೀರು ಬಂದಿರುವುದರಿಂದ ಮಂಗಳವಾರ ಸಂಜೆ ಅಥವಾ ಬುಧವಾರ ದಿವಸ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ ಸಮೀಪ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೊನ್ನ ಬ್ಯಾರೇಜ್ ಗೆ ಒಟ್ಟು 1 ಲಕ್ಷ 50 ಸಾವಿರ ಒಳ ಹರಿವು ಹಾಗೂ ಹೊರಹರಿವಿನ ಪ್ರಮಾಣ ಇರುವ ಅಂದಾಜು ಇರುವುದರಿಂದ ಭೀಮಾ ನದಿ ಪಾತ್ರದ ವಿಜಯಪುರ , ಕಲಬುರ್ಗಿ ಜಿಲ್ಲೆಯ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಹಾಗೂ ಜನಜಾನುವಾರುಗಳು ನದಿ ಪಾತ್ರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕೆಂದು ಅಫಜಲಪುರದ ಕೆ ಎನ್ ಎನ್ ಎಲ್ ಎಇಇ ಸಂತೋಷಕುಮಾರ ಸಜ್ಜನ ತಿಳಿಸಿದ್ದಾರೆ.
ಮಳೆಗಾಲ ಆರಂಭವಾದ ಮೇಲೆ ಈಗಾಗಲೇ ಎರಡು ಮೂರು ಬಾರಿ ಅಪಾರ ಪ್ರಮಾಣದ ನೀರು, ನದಿಯಲ್ಲಿ ಹರಿದು ನದಿ ಪಾತ್ರದಲ್ಲಿರುವ ಹಾಗೂ ತಗ್ಗು ಪ್ರದೇಶದಲ್ಲಿರುವ ಸಾವಿರಾರು ಎಕರೆ ಬೆಳೆಗಳು ನಾಶವಾಗಿ ಹೋಗಿದ್ದು ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ ಈಗ ಮತ್ತೆ ನದಿಯಲ್ಲಿ ಲಕ್ಷಾಂತರ ಪ್ರಮಾಣದ ನೀರು ಬರುತ್ತಿರುವುದು ನದಿ ಪಾತ್ರದ ಗ್ರಾಮಗಳ ಜನರಿಗೆ ಆತಂಕವನ್ನು ಉಂಟು ಮಾಡಿದೆ.
ಆಲಮೇಲ ತಾಲೂಕಿನ ತಾರಾಪುರ, ತಾವರಖೇಡ, ಬ್ಯಾಡಗಿಹಾಳ, ದೇವಣಗಾಂವ, ಕಡ್ಲೆವಾಡ, ಶಂಬೆವಾಡ, ಕುಮಸಗಿ, ಚಿಕ್ಕಹವಳಗಿ, ಬಗಲೂರ ಗ್ರಾಮಗಳ ಜನರ ಆತಂಕ ಹೆಚ್ಚಿಸಿದೆ
ಈಗಾಗಲೇ ಕಳೆದ ಎರಡು ತಿಂಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ತೊಂದರೆಗೊಳಗಾಗಿದ್ದಾರೆ ಬೆಳೆಗಳು ಹಾಳಾಗಿವೆ. ಗಾಯದ ಮೇಲೆ ಬರೆ ಎನ್ನುವಂತೆ ಮತ್ತೆ ಪ್ರವಾಹ ಪರಿಸ್ಥಿತಿ ತಲೆದೋರಿದ್ದು ಜನರ ಆತಂಕಕ್ಕೆ ಕಾರಣವಾಗಿದೆ.
ನದಿಯ ಸಮೀಪವಿರುವ ಗ್ರಾಮಗಳ ಮನೆಗಳಲ್ಲಿ ವಿಷಜಂತುಗಳ ಹಾವಳಿ ಹೆಚ್ಚಾಗಿ ಜನರಿಗೆ ತೊಂದರೆಯಾಗುತ್ತಿದೆ.