ವಿಶ್ವ ಪ್ರವಾಸೋದ್ಯಮ ದಿನ ಆಚರಣೆಯಲ್ಲಿ ಶಾಸಕ ವಿಠ್ಠಲ ಕಟಕದೊಂಡ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬರಗಾಲ ಜಿಲ್ಲೆ ಎಂದು ಪ್ರಸಿದ್ದಿ, ನೀರಿಗೂ ತತ್ವಾರ ಇದ್ದ ವಿಜಯಪುರ ಇಂದು ಹಸರಿನಿಂದ ಕಂಗೊಳಿಸುತ್ತಿದೆ, ಪ್ರವಾಸೋದ್ಯಮ ಅಭಿವೃದ್ದಿಯೊಂದಿಗೆ ಪರಿವರ್ತನೆಯಡೆಗೆ ಸಾಗುತ್ತಿದೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.
ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಶನಿವಾರ ನಗರದ ಶಿವಗಿರಿಯಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ವಿಶ್ವವಿಖ್ಯಾತ ಗೋಳಗುಮ್ಮಟದೊಂದಿಗೆ ಐತಿಹಾಸಿಕ ತಾಣಗಳುಳ್ಳ ವಿಜಯಪುರ ಬರಗಾಲಕ್ಕೆ ತುತ್ತಾಗಿದ್ದ ಜಿಲ್ಲೆ. ಸಚಿವ ಎಂ.ಬಿ.ಪಾಟೀಲರು ನೀರಾವರಿ ಸಚಿವರಾಗಿದ್ದ ಸಂದರ್ಭದಲ್ಲಿ ಕೈಗೊಂಡ ಹಲವು ನೀರಾವರಿ ಯೋಜನೆ, ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯಗಳಿಂದ ಇಂದು ಹಸಿರಿನಿಂದ ಕಂಗೊಳಿಸುತ್ತಿದೆ. ಇದರೊಂದಿಗೆ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಈ ನಿಟ್ಟಿನಲ್ಲಿ ಇದಕ್ಕೆ ಪೂರಕವಾಗಿ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ, ರಸ್ತೆ ಸಂಪರ್ಕವೂ ಇದೆ. ಕುಡಿಯುವ ನೀರಿನ ಸಮಸ್ಯೆ ಇಲ್ಲ.ನಗರದ ಐತಿಹಾಸಿಕ ಭಾವಿ ಸ್ವಚ್ಛಗೊಳಿಸಿ, ಅನ್ಯ ಉದ್ಧೇಶಕ್ಕೆ ನೀರು ಬಳಕೆಗೆ ಕ್ರಮವಹಿಸಿದ್ದರಿಂದ ಕುಡಿಯುವ ನೀರಿನ ಸಮಸ್ಯೆಯೂ ಕಡಿಮೆಯಾಗಿದೆ. ಜಿಲ್ಲೆಯಲ್ಲಿ ವಿಮಾನಯಾನ ಸೇವೆಯಿಂದ ದೇಶ-ವಿದೇಶದಿಂದ ಹೆಚ್ಚಿನ ಪ್ರವಾಸಿಗರು ಆಗಮಿಸಲು ಅನುಕೂಲವಾಗುತ್ತದೆ. ಇಲ್ಲಿ ಬೆಳೆದಿರುವ ಬೆಳೆಗಳಿಗೂ ಅಂತರರಾಷ್ಟ್ರೀಯ ಮಾರುಕಟ್ಟೆ ಲಭ್ಯವಾಗಲಿದೆ, ಜಿಯೋ ಟ್ಯಾಗ್ ಹೊಂದಿರುವ ಲಿಂಬೆಯೂ ಸೇರಿದಂತೆ ತೋಟಗಾರಿಕಾ ಬೆಳೆಗಳಾದ ದ್ರಾಕ್ಷಿ,ದಾಳಿಂಬೆ ಸೇರಿದಂತೆ ಹಣ್ಣು ಹಂಪಲ ವಿದೇಶಕ್ಕೆ ರಪ್ತು ಮಾಡುವುದರಿಂದ ಆರ್ಥಿಕವಾಗಿ ಸಬಲತೆ ಹೊಂದಲು ಅನುಕೂಲ ಒದಗಿಸಿದೆ ಎಂದು ಅವರು ಹೇಳಿದರು.
ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಹೆಚ್ಚೆಚ್ಚು ಪ್ರವಾಸಿಗರನ್ನು ಜಿಲ್ಲೆಗೆ ಆಕರ್ಷಿಸುವ ನಿಟ್ಟಿನಲ್ಲಿ ನಮ್ಮ ಪಾರಂಪರಿಕ ತಾಣಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ಕುರಿತು ಜಾಗೃತಿ ಮೂಡಿಸುವ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ಕೊಡುಗೆ ನೀಡೋಣ ಎಂದು ಹೇಳಿದರು.
ಪೀಟರ್ ಅಲೆಕ್ಸಾಂಡರ್ ಉಪನ್ಯಾಸ ನೀಡಿದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಅರವಿಂದ ಹೂಗಾರ ಪ್ರಾಸ್ತಾವಿಕ ಮಾತನಾಡಿದರು.
ಸುಭಾಶ್ಚಂದ್ರ ಕನ್ನೂರ ಅವರು ಕಾರ್ಯಕ್ರಮ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಉಪ ಮಹಾಪೌರರಾದ ಸುಮಿತ್ರ ಜಾಧವ, ಜಿಲ್ಲಾ ಪಂಚಾಯತಿಯ ಯೋಜನಾ ಮುಖ್ಯ ಯೋಜನಾಧಿಕಾರಿ ಸಿ.ವಿ ಕುಂಬಾರ, ಕೆಕೆಆರ್ಟಿಸಿಯ ವಿಭಾಗಾಧಿಕಾರಿ ನಾರಾಯಣಪ್ಪ ಕುರುಬರ, ಎಎಸ್ಐ ಅಧಿಕಾರಿ ವಿಜಯಕುಮಾರ, ಕೆಎಸ್ಟಿಡಿಸಿಯ ವ್ಯವಸ್ಥಾಪಕರಾದ ಶ್ರೀಮತಿ ಜಗದೇವಿ,ಡಿಟಿಒ ಹುಗ್ಗೇನ್ನವರ, ಶಿವಗಿರಿಯ ವ್ಯವಸ್ಥಾಪಕರಾದ ಶ್ರೀಮತಿ ಆರತಿ ಪಾಟೀಲ, ಬಂಗಾರಮ್ಮ ಸಜ್ಜನ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಡಾ.ತಮ್ಮಣ್ಣ, ಶಾಂತೇಶ ಕಳಸಗೊಂಡ, ಪ್ರಶಾಂತ ಶೆಟ್ಟಿ, ಅಮೀನ ಹುಲ್ಲೂರ, ಬಿ.ಟಿ,ಜಾಧವ, ಅಡಿವೆಪ್ಪ ಸಾಲಗಲ್, ಎಸ್.ಬಿ.ಪಾಟೀಲ, ಎಸ್.ಬಿ ಬಿರಾದಾರ, ಮಹೇಶ ಕ್ಯಾತನವರ ಸೇರಿದಂತೆ ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

