ಅಕ್ಕಮಹಾದೇವಿ ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸ್ವಚ್ಛತೆಯು ಕೇವಲ ವೈಯಕ್ತಿಕ ಅಭ್ಯಾಸವಲ್ಲ, ಸಮಾಜದ ಉನ್ನತಿ ಮತ್ತು ಸಮೃದ್ಧಿಗೆ ಅಗತ್ಯವಾದ ಜವಾಬ್ದಾರಿ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್. ಎಸ್ ಕೋಶ ಹಾಗೂ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ವಿಶ್ವವಿದ್ಯಾಲಯದ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ವಚ್ಛತೆಯು ಉತ್ತಮ ಆರೋಗ್ಯಕ್ಕೆ ಅವಶ್ಯಕವಾಗಿದ್ದು, ಇದು ರೋಗಾಣುಗಳು ಮತ್ತು ಸೋಂಕುಗಳ ಹರಡುವಿಕೆಯನ್ನು ತಡೆಯುವುದರೊಂದಿಗೆ ಮಾನಸಿಕ ಯೋಗಕ್ಷೇಮವನ್ನು ಹೆಚ್ಚಿಸಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಸಹಕಾರಿ ಆಗುತ್ತದೆ. ವೈಯಕ್ತಿಕ ಸ್ವಚ್ಛತೆ, ಪರಿಸರ ಸ್ವಚ್ಛತೆ ಮತ್ತು ಆಹಾರದ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ವ್ಯಕ್ತಿಗೂ ಸಮಾಜಕ್ಕೂ ಸಮಾನವಾಗಿ ಪ್ರಯೋಜನಕಾರಿ ಎಂದರು.
ಈ ಕಾರ್ಯಕ್ರಮದಲ್ಲಿ ಪ್ರೊ.ಪಿ.ಜಿ.ತಡಸದ, ಪ್ರೊ.ಸಕ್ಪಾಲ್ ಹೂವಣ್ಣ, ಪ್ರೊ.ಮಹೇಶ ಚಿಂತಾಮಣಿ, ಪ್ರೊ.ಅಶೋಕಕುಮಾರ ಸುರಪುರ, ಪ್ರೊ.ಜ್ಯೋತಿ ಉಪಾಧ್ಯಾಯ, ಪ್ರೊ. ಹಣಮಂತಯ್ಯ ಪೂಜಾರಿ, ಪ್ರೊ.ರಾಜು ಬಾಗಲಕೋಟ, ಪ್ರೊ. ರಾಜಕುಮಾರ ಮಾಲಿಪಾಟೀಲ, ಪ್ರೊ. ನಾರಾಯಣ ಪವಾರ, ಪ್ರೊ. ನಾಮದೇವ ಗೌಡ, ಡಾ. ಜಾಯ್ ಹೊಸಕೇರಿ, ಡಾ.ಅಮರನಾಥ ಪ್ರಜಾಪತಿ, ಡಾ.ಗುಲಾಬ್ ರಾಠೋಡ, ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳು, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿನಿಯರು, ಸಂಶೋಧನಾ ವಿದ್ಯಾರ್ಥಿನಿಯರು, ಅತಿಥಿ ಉಪನ್ಯಾಸಕರು ಹಾಗೂ ಎನ್.ಎಸ್.ಎಸ್ ಸ್ವಯಂಸೇವಕಿಯರು ಭಾಗವಹಿಸಿ ವಿಶ್ವವಿದ್ಯಾನಿಲಯದ ಆವರಣವನ್ನು ಸ್ವಚ್ಛಗೊಳಿಸಿದರು.

