ವಿಜಯಪುರದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಎಸ್ಸಿಪಿ-ಟಿಎಸ್ಪಿ ಇದೊಂದು ಕಾಯ್ದೆಯಾಗಿದೆ. ಈ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಸೌಲಭ್ಯ ದೊರಕಿಸಲು ಅಧಿಕಾರಿಗಳು ಈ ಕಾಯ್ದೆಯ ಗಂಭೀರತೆಯನ್ನು ಅರಿತುಕೊಂಡು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ೨೦೨೫-೨೬ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಸೆಪ್ಟಂಬರ್ ೨೦೨೫ರ ಮಾಹೆಯ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್ಸಿಪಿ-ಟಿಎಸ್ಪಿ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸಬೇಕು. ಸಂಬಂಧಿಸಿದ ಇಲಾಖೆಗಳು ಈ ಎಸ್ಸಿಪಿ-ಟಿಎಸ್ಪಿ ಕಾಯ್ದೆ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ಇದ್ದ ಸಂದರ್ಭದಲ್ಲಿ ಶೋಕಾಸ್ ನೋಟಿಸ್ ನೀಡಲು ಹಾಗೂ ನಿಗದಿತ ಅವಧಿಯಲ್ಲಿ ಎಸ್ಸಿಪಿ ಟಿಎಸ್ಪಿ ಅನುದಾನ ವೆಚ್ಚ ಮಾಡದೇ ಬಾಕಿ ಉಳಿಸಿಕೊಂಡಲ್ಲಿ ಕ್ರಮ ಜರುಗಿಸಲು ಅವಕಾಶವಿರುವುದರಿಂದ ಇದಕ್ಕೆ ಆಸ್ಪದ ನೀಡದೇ, ಕಾಯ್ದೆಯ ಗಂಭೀರತೆಯನ್ನು ಅರಿತುಕೊಂಡು, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ, ಸಮರ್ಪಕವಾಗಿ ಅನುಷ್ಠಾನಗೊಳಿಸಿ ಅರ್ಹರಿಗೆ ಸೌಲಭ್ಯ ದೊರಕಿಸಲು ಅನುದಾನ ವೆಚ್ಚ ಮಾಡುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾ ಹಾಗೂ ತಾಲೂಕಾ ಮಟ್ಟದಲ್ಲಿ ನಿರಂತರವಾಗಿ ಸಭೆಗಳನ್ನು ನಡೆಸಿ, ಪರಿಶೀಲನೆ ನಡೆಸಬೇಕು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕಾಲಕಾಲಕ್ಕೆ, ಅತ್ಯಂತ ಪ್ರಮುಖ ಇಲಾಖೆಗಳಾದ ಶಿಕ್ಷಣ ಇಲಾಖೆ, ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಬೇಕು. ಎಸ್ಸಿಪಿ-ಟಿಎಸ್ಪಿ ಯೋಜನೆಗಳು ಲಾಭ ಫಲಾನುಭವಿಗಳಿಗೆ ತಲುಪುತ್ತಿರುವ ಕುರಿತು ಪರಿಶೀಲನೆ ನಡೆಸಬೇಕ, ಈ ಯೋಜನೆಯಡಿ ಬಿಡುಗಡೆಯಾದ ಅನುದಾನ ಲ್ಯಾಪ್ಸ್ವಾಗದಂತೆ ಎಚ್ಚರಿಕೆ ವಹಿಸುವಂತೆ ಅವರು ಸೂಚನೆ ನೀಡಿದರು.
ಅಧಿಕಾರಿಗಳು ಎಸ್ಸಿಪಿ-ಟಿಎಸ್ಪಿ ಆರ್ಥಿಕ ಹಾಗೂ ಭೌತಿಕ ಸಾಧನೆಯ ನಿಖರವಾಗಿ ಮಾಹಿತಿ ಸಲ್ಲಿಸಬೇಕು. ಇಲಾಖಾವಾರು ಯೋಜನೆಯ ಮಾಹಿತಿ ಒದಗಿಸಬೇಕು.ಕೇಂದ್ರ, ರಾಜ್ಯ, ಜಿಲ್ಲಾ ಪಂಚಾಯತ್ ಸೇರಿದಂತೆ ಆಯಾ ವಲಯವಾರು ಪ್ರತ್ಯೇಕವಾಗಿ ಮಾಹಿತಿ ಒದಗಿಸಬೇಕು. ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಸೌಲಭ್ಯ ಒದಗಿಸಿರುವ ಕುರಿತು ನಿಖರವಾಗಿ ಮಾಹಿತಿ ಹಾಗೂ ಬಾಕಿ ಉಳಿಯಲು ಇರುವ ಕಾರಣವನ್ನು ನಿಖರವಾಗಿ ಒದಗಿಸಬೇಕು. ಅನುದಾನ ವೆಚ್ಚ ಮಾಡದೆ ಬಾಕಿ ಉಳಿಸಿಕೊಂಡಿರುವ ಕುರಿತು ಸಬೂಬೂ ನೀಡದೆ, ಬಿಡುಗಡೆಯಾದ ಅನುದಾನ, ವೆಚ್ಚ ಮಾಡಿದ ಅನುದಾನಕ್ಕೆ ಪೂರಕ ದಾಖಲೆಗಳನ್ನು ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ನಗರಾಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ರೇಷ್ಮೆ ಇಲಾಖೆ, ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.