ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ | ಪಕ್ಷ ನೋಟಿಸ್ ಕೊಟ್ಟರೆ ಉತ್ತರ ಕೊಡುವೆ | ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ
ಮೈಸೂರು: ತಮ್ಮ ತಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ, ‘ನವೆಂಬರ್ ಕ್ರಾಂತಿ’ ಕೇವಲ ಊಹಾಪೋಹ. ನಮ್ಮ ಪಕ್ಷದಲ್ಲಿ ಅಂತಹ ಯಾವುದೇ ಚರ್ಚೆ ಇಲ್ಲ ಎಂದರು.
ನಿಮ್ಮ ತಂದೆ ಐದು ವರ್ಷ ಪೂರ್ಣಗೊಳಿಸುತ್ತಾರೆಯೇ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಪುತ್ರ, “ಪ್ರಸ್ತುತ ಪರಿಸ್ಥಿತಿಯಲ್ಲಿ, ಅವರು ಐದು ವರ್ಷಗಳ ಅವಧಿ ಪೂರ್ಣಗೊಳಿಸುತ್ತಾರೆ” ಎಂದು ಹೇಳಿದರು.
ಇದೇ ವೇಳೆ ಸಿದ್ದರಾಮಯ್ಯ ನಂತರ ಸಚಿವ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ ಎಂಬ ಅರ್ಥದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡ ಯತೀಂದ್ರ, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಎಂದಿದ್ದಾರೆ.
ನನ್ನ ಹೇಳಿಕೆಯಲ್ಲಿ ತಪ್ಪೇನಿಲ್ಲ. ನನ್ನ ಹೇಳಿಕೆಯನ್ನು ಬೇರೆ ಬೇರೆ ರೀತಿ ಬಿಂಬಿಸುತ್ತಿದ್ದಾರೆ ಎಂದು ಯತೀಂದ್ರ ಹೇಳಿದ್ದಾರೆ.
ಇನ್ನು ಪಕ್ಷದಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದಿರುವ ಸಿಎಂ ಪುತ್ರ, ಪಕ್ಷ ನೋಟಿಸ್ ಕೊಟ್ಟರೆ ಅದಕ್ಕೆ ನಾನು ಉತ್ತರ ಕೊಡುತ್ತೇನೆ ಎಂದು ಹೇಳಿದ್ದಾರೆ.

ಯತೀಂದ್ರ ವಿರುದ್ಧ ಶಿವಗಂಗಾ ಬಸವರಾಜು ಆಕ್ರೋಶ
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಪರಮಾಪ್ತ, ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬದಲಾವಣೆ ವಿಚಾರದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಉತ್ತರಾಧಿಕಾರಿ ಯಾರು ಎಂಬುದು ಹೈ ಕಮಾಂಡ್ ತೀರ್ಮಾನಿಸಲಿದೆ ಎಂದಿದ್ದಾರೆ. ಯತೀಂದ್ರ ಈ ತರ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಬಾರದು. ಈ ರೀತಿಯ ಬಾಲಿಶ ಹೇಳಿಕೆ ನೀಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಅಂತ ಯತೀಂದ್ರ ವಿರುದ್ಧ ಶಿವಗಂಗಾ ಬಸವರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವು ಮಾಡಿದ್ರೆ, ಬಲತ್ಕಾರ, ಬೇರೆಯವರು ಮಾಡಿದ್ರೆ ಚಮತ್ಕಾರ
ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಶಾಸಕ ಎಚ್. ಎ. ಇಕ್ಬಾಲ್ ಹುಸೇನ್, ಸಿಎಂ ಬದಲಾವಣೆ ವಿಚಾರ ಕುರಿತು ನಾವೇನಾದರೂ ಹೇಳಿಕೆ ಕೊಟ್ಟರೆ ನೋಟಿಸ್ ಕೊಟ್ತಾರೆ. ಅಂದ್ರೆ ನಾವು ಮಾಡಿದ್ರೆ, ಬಲತ್ಕಾರ, ಬೇರೆಯವರು ಮಾಡಿದ್ರೆ ಚಮತ್ಕಾರ ಅನ್ನುವ ಪರಿಸ್ಥಿತಿ ಇದೆ ಎಂದರು.
ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಎಳಸುತದಿಂದ ಕೂಡಿದೆ. ಅವರ ಮಾತಿನ್ನೂ ಬಲಿತಿಲ್ಲ. ಜೊತೆಗೆ ಶಕ್ತಿಯೂ ಇಲ್ಲ. ಅವರು ಪರಿಷತ್ ಸದಸ್ಯರೇ ಹೊರತು ವಿಧಾನಸಭಾ ಸದಸ್ಯರಲ್ಲ. ಅವರು ತಮ್ಮ ಇತಿ ಮಿತಿಗಳನ್ನು ಅರಿತು ಗೌರವಯುತ ಹೇಳಿಕೆ ನೀಡಬೇಕು. ಸಿಎಂ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲ ಸೃಷ್ಟಿಸಬಾರದು ಎಂದು ಹೇಳಿದರು.

