ವಿಶ್ವ ಏಡ್ಸ್ ದಿನಾಚರಣೆಯಲ್ಲಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಕರೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಏಡ್ಸ್ ರೋಗದ ಬಗ್ಗೆ ಭಯ ಬೇಡ ಜಾಗೃತಿ ಅಗತ್ಯ ಜಿಲ್ಲೆಯಲ್ಲಿ ಏಡ್ಸ್ ರೋಗವನ್ನು ಶೂನ್ಯಕ್ಕೆ ತರುವಲ್ಲಿ ಅಗತ್ಯ ಜಾಗೃತಿ ಮೂಡಿಸೋಣ ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಮರ್ಚಂಟ್ ಅಸೋಸಿಯೇರ್ಶನ ಎಪಿಎಂಸಿ ಯಾರ್ಡ ಇವರ ಸಹಯೋಗದಲ್ಲಿ ನಗರದ ಇಂಡಿ ರಸ್ತೆಯ ನೀಲಕಂಠೇಶ್ವರ ಮಂಗಲ ಕಾರ್ಯಾಲಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಎಚ್ಐವಿ ಏಡ್ಸ್ ಹರಡುವಿಕೆಯನ್ನು ನಿಯಂತ್ರಿಸಲು ಇರುವ ಅಡೆ-ತಡೆಗಳನ್ನು ಕೊನೆಗಾಣಿಸೋಣ ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಏಡ್ಸ್ ರೋಗ ಯಾವುದೇ ಶಾಪವಲ್ಲ, ಈ ರೋಗ ನಿಯಂತ್ರಣಕ್ಕೆ ಜಾಗೃತಿ-ಅರಿವು ಹೊಂದುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಗ್ರಾಮ, ತಾಲೂಕಾ ಮಟ್ಟ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಹೊಂದುವಂತೆ ಪ್ರೇರೆಪಿಸೋಣ. ಎಚ್ಐವಿ ಮತ್ತು ಏಡ್ಸ್ ಕಾಯಿಲೆ ಮಾನವ ಜನಾಂಗವನ್ನು ಭಾದಿಸುತ್ತಿದ್ದು, ಈ ರೋಗವನ್ನು ತೊಡೆದು ಹಾಕಲು ಅರಿವು ಹೊಂದುವುದು ಅತಗತ್ಯವಾಗಿದೆ. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳು, ಸಂಘ-ಸಂಸ್ಥೆಗಳು ಏಡ್ಸ್ ನಿಯಂತ್ರಣಕ್ಕಾಗಿ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಯುವ ಸಮುದಾಯವನ್ನು ಕೇಂದ್ರೀಕರಿಸಿ ಅರಿವು ಮೂಡಿಸುತ್ತಿವೆ ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸಂಪತ್ ಗುಣಾರಿ ಮಾತನಾಡಿ, ಏಡ್ಸ್ ರೋಗದ ಬಗ್ಗೆ ,ವಿಶೇಷವಾಗಿ ಯುವಕರು ಹೆಚ್ಚು ಜಾಗೃತರಾಗಿ ಎಚ್ಚರಿಕೆ ವಹಿಸಬೇಕು. ಈ ರೋಗದ ದುಷ್ಪರಿಣಾಮಗಳ ಕುರಿತು ಅರಿತುಕೊಳ್ಳಬೇಕು. ಈ ರೋಗ ನಿಯಂತ್ರಣಕ್ಕಾಗಿ ಜನಜಾಗೃತಿ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳೂ, ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.ಮಾರಕ ರೋಗ ನಿಯಂತ್ರಣಕ್ಕಾಗಿ ಇಲಾಖೆಗಳೊಂದಿಗೆ ವಿವಿಧ ಸಂಘ-ಸಂಸ್ಥೆಗಳು ಕೈ ಜೋಡಿಸಿದ್ದು, ಏಡ್ಸ್ ರೋಗವನ್ನು ಬರುವ ೨೦೩೦ರೊಳಗೆ ಶೂನ್ಯಕ್ಕೆ ತರಲು ಎಲ್ಲರೂ ಶ್ರಮಿಸೋಣ ಎಂದು ಅವರು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಅವರು ಮಾತನಾಡಿ, ಇಲಾಖೆಯಿಂದ ಧನಶ್ರೀ ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಠಾನಗೊಳಿಸಲಾಗುತ್ತಿದ್ದು, ವಿವಿಧ ಇಲಾಖೆಗಳೊಂದಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿ ನೆರವು ಒದಗಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಇದಕ್ಕೂ ಮೊದಲು ಬೆಳಿಗ್ಗೆ ನಗರದ ಕಂದಗಲ್ ಹನುಮಂತರರಾಯ ರಂಗಮದಿರದಿಂದ ಆರಂಭಗೊಂಡ ಜಾಗೃತಿ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಜಿಲ್ಲಾ ಏಡ್ಸ್ ಮತ್ತು ಕ್ಷಯರೋಗ ನಿಯಂತ್ರಣ ರಕ್ತ ಸುರಕ್ಷತಾ ಅಧಿಕಾರಿ ಡಾ.ಮಲ್ಲನಗೌಡ ಬಿರಾದಾರ, ಡಾ.ಜಾನ್ ಕಟವಟೆ, ಡಾ.ಶ್ವೇತಾ ಸನದಿ, ಡಾ.ರಾಯಣ್ಣವರ, ಡಾ.ವಾಸಂತಿ, ಪೀಟರ್ ಅಲೆಕ್ಸಾಂಡರ್, ರಾಜು ಕಪಾಲಿ, ಸುಭಾಸ ಜಾಧವ, ವಿವಿಧ ಸಂಘಟನೆಯ ಮುಖಮಡರು, ಸಂಘ-ಸಂಸ್ಥೆ ಪದಾಧಿಕಾರಿಗಳು ಶಾಲಾ ಕಾಲೇಜ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜಿಲ್ಲಾ ಆಸ್ಪತ್ರೆಯ ಹಿರಿಯ ಆಪ್ತ ಸಮಾಲೋಚಕ ರವಿ ಕಿತ್ತೂರ, ಜಿಲ್ಲಾ ಏಡ್ಸ್ ನಿಯಂತ್ರಣ ಕಚೇರಿಯ ಮೇಲ್ವಿಚಾರಕ ಬಾಬುರಾಯ ತಳವಾರ ನಿರೂಪಿಸಿದರು. ಅನ್ನಪೂರ್ಣ ಪತ್ತಾರ ವಂದಿಸಿದರು.

