ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಅಂಗವಿಕಲರು ಸಮಾಜದಲ್ಲಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ಆತ್ಮವಿಶ್ವಾಸದಿಂದ ಜೀವನ ನಡೆಸುವಂತೆ ಅವಕಾಶ ಕಲ್ಪಿಸುವುದು ಸಮಾಜ ಹಾಗೂ ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಮನಹರಿಸಬೇಕೆಂದು ಕ್ಷೇತ್ರ ಸಮನ್ವಯಾಧಿಕಾರಿ ಸುನೀಲ ನಾಯಕ ಹೇಳಿದರು.
ತಾಲೂಕಿನ ಇವಣಗಿ ಗ್ರಾಮದ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನ ಮಕ್ಕಳ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಕಲಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಿಕೊಡುವ ಮೂಲಕ ಅವರು ಎಲ್ಲರಂತೆ ಸ್ವಾವಲಂಬಿ ಜೀವನ ಸಾಗಿಸಲು ನೆರವಾಗಬೇಕು. ವಿಕಲಚೇತನ ಮಕ್ಕಳಿಗೆ ವಿಶೇಷವಾಗಿ ಗಮನ ಹರಿಸಿ ಅವರಿಗೆ ಶಿಕ್ಷಣ ನೀಡಿದರೆ ಖಂಡಿತ ಅವರು ಎಲ್ಲ ಮಕ್ಕಳಂತೆ ಸಾಧನೆ ಮಾಡುವುದರಲ್ಲಿ ಸಂದೇಹವಿಲ್ಲ ಎಂದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಮ್. ವ್ಹಿ. ಗಬ್ಬೂರ ಮಾತನಾಡಿ, ಅಂಗವಿಕಲ ಮಕ್ಕಳ ಸಬಲೀಕರಣಕ್ಕಾಗಿ ಅನೇಕ ಶಾಲಾ- ಕಾಲೇಜು ಹಾಗೂ ಸಂಘ-ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಕಾಲದಲ್ಲಿ ವಿಕಲಚೇತನರಿಗೆ ವಿದ್ಯಾಭ್ಯಾಸದ ಅವಕಾಶಗಳ ಜೊತೆಗೆ ಕೌಶಲಾಭಿವೃದ್ಧಿಗಳ ಕಲಿಕೆಯು ಅವರ ಬದುಕಿನಲ್ಲಿ ಸಾಧನೆ ಮಾಡುವಂತಹ ಭರವಸೆ ಮೂಡಿಸುತ್ತಿದೆ ಎಂದರು.
ಬಿ.ಐ,.ಇ.ಆರ್.ಟಿ. ಶ್ರೀಮತಿ ಐ.ಎಂ.ಇಂಡಿ ಮಾತನಾಡಿ, ಅಂಗವಿಕಲ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹ ನೀಡುವುದರಿಂದ ಅವರ ದೌರ್ಬಲ್ಯಗಳ ಹೊರತಾಗಿಯೂ ಅದಮ್ಯ ಶಕ್ತಿ ಅವರಲ್ಲಿದೆ ಎಂಬುದನ್ನು ನಿರೂಪಿಸಲು ಸಾಧ್ಯ. ಅಂಗವಿಕಲರ ಏಳಿಗೆಗೆ ಕುಟುಂಬದ ಸದಸ್ಯರು ಮಾತ್ರವಲ್ಲದೇ ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು. ಅಂಗವಿಕಲರಿಗಾಗಿ ಕಾನೂನು ಅಡಿಯಲ್ಲಿ ಅನೇಕ ಹಕ್ಕುಗಳನ್ನು ನೀಡಿದೆ. ಅವರ ಶ್ರೇಯಸ್ಸು ಹಾಗೂ ಮಾನವ ಹಕ್ಕುಗಳಿಗೆ ಚ್ಯುತಿ ತರದಂತೆ ಅವರ ಅಭಿವೃದ್ಧಿಯಲ್ಲಿ ಸಹಕಾರ ನೀಡಬೇಕೆಂದರು.
ಕಾರ್ಯಕ್ರಮದಲ್ಲಿ ಬಿಆರ್ಪಿ ಭಾರತಿ ಪಾಟೀಲ, ಸಿಆರ್ಸಿ ಎಸ್.ಬಿ.ದಳವಾಯಿ, ಹಾಗೂ ಶಾಲೆಯ ಎಲ್ಲ ಶಿಕ್ಷಕರು ಇದ್ದರು. ಎಸ್. ಸಿದ್ದಪ್ಪ ಸ್ವಾಗತಿಸಿದರು. ಎಸ್.ಎಸ್.ಇಂಗಳೇಶ್ವರ ನಿರೂಪಿಸಿದರು .ಸವಿತಾ ಚಿತ್ತರಗಿ ವಂದಿಸಿದರು.

