೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಲು ಅಧಿಕಾರಿಗಳಿಗೆ ಡಿಸಿ ಡಾ. ಕೆ ಆನಂದ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದಡಿ ಡಿ.೨೧ ರಿಂದ ೨೪ರವರೆಗೆ ೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಕುರಿತು ಕೈಗೊಂಡಿರುವ ಪೂರ್ವಸಿದ್ಧತೆಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಸಕ್ತ ಸಾಲಿನ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಅತ್ಯಂತ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಿಯೋಜನಗೊಂಡ ವೈದ್ಯರು,ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ತಮಗೆ ವಹಿಸಿದ ಕೆಲಸ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.
ತಮ್ಮ ವ್ಯಾಪ್ತಿಯಲ್ಲಿನ ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸುವ ಕುರಿತು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೂಚಿಸಲಾಯಿತು.
ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಲ್ಲಿ ದಿನದ ೨೪ ಗಂಟೆಯೂ ಲಸಿಕಾ ಕೇಂದ್ರಗಳನ್ನು ತೆರೆಯುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಈ ಕುರಿತು ನಿರಂತರವಾಗಿ ಕಾರ್ಯಕ್ರಮದ ಬಗ್ಗೆ ಪ್ರಚಾರ ಮಾಡಬೇಕು. ಗ್ರಾಮ ಹಾಗೂ ನಗರ ವ್ಯಾಪ್ತಿಗಳಲ್ಲಿ ಪ್ರಾಮುಖ್ಯತೆ ನೀಡಿ, ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಸ್ಥಳೀಯ ವೈದ್ಯಾಧಿಕಾರಿಗಳಿಗೆ ಮೇಲುಸ್ತುವಾರಿ ವಹಿಸುವಂತೆ ಸೂಚಿಸಲಾಯಿತು. ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಎಚ್ಚರಿಕೆ ವಹಿಸಿ ಸಿದ್ಧತೆ ಮಾಡಿಕೊಳ್ಳಬೇಕು. ಅಭಿಯಾನದ ಕುರಿತು ಪೋಷಕರಿಗೆ ಮೊದಲೇ ಮಾಹಿತಿ ನೀಡುವಂತೆ ಸೂಚಿಸಿದರು.
ನಗರದಲ್ಲಿರುವ ಕೊಳಚೆ ಪ್ರದೇಶಗಳಲ್ಲಿ, ಕಟ್ಟಡ ಕಾರ್ಮಿಕ ಪ್ರದೇಶಗಳು, ಹೊಸದಾಗಿ ಸೃಜನವಾಗಿರುವ ಪ್ರದೇಶಗಳಲ್ಲಿ ಹಾಗೂ ಇತರೆ ಹೈರಿಸ್ಕ್ ಪ್ರದೇಶಗಳನ್ನು ಗುರುತಿಸಿ ಅಲ್ಲಿ ೦-೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಕಡ್ಡಾಯವಾಗಿ ಹಾಕಲು ತಾಲೂಕಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಗ್ರಾಮ ಪಂಚಾಯತಿ ಅಧಿಕಾರಿಗಳು, ಸಾರಿಗೆ ಇಲಾಖೆ,ಆಶಾ ಕಾರ್ಯಕರ್ತೆರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಲು ಈಗಾಗಲೇ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಕರಪತ್ರ, ಬ್ಯಾನರ್ಗಳ ಮೂಲಕ ಪ್ರಚಾರ ಕೈಗೊಳ್ಳಲು, ಅವಶ್ಯಕತೆ ಇರುವ ಶುಶ್ರೂಷಕ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ನಿಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಸಂಪತ್ ಗುಣಾರಿ ಹೇಳಿದರು.
ಜಿಲ್ಲೆಯಲ್ಲಿ ೦-೫ ವರ್ಷದೊಳಗಿನ ಮಕ್ಕಳ ಗುರಿ-೨೯೬೧೧೯ ಇದ್ದು, ಅದಕ್ಕಾಗಿ ಪೋಲಿಯೋ ಲಸಿಕಾ ಭೂತಗಳ ಸಂಖ್ಯೆ-೧೩೩೧ ರಚಿಸಿದ್ದು, ಇದರಲ್ಲಿ ೩೧ ಸಂಚಾರಿ ತಂಡಗಳು ಮತ್ತು ಟ್ರಾಂಜಟ್-೪೦ ತಂಡಗಳನ್ನು ಒಳಗೊಂಡಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.
ಈ ಸಭೆಯಲ್ಲಿ ವಿವಿಧ ಇಲಾಖೆಗಳ ಪಾತ್ರ ಹಾಗೂ ಪಾಲಿಕೆಯ ಮಹತ್ವದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿ ಕಾರ್ಯಕ್ರಮದ ಯಶಸ್ವಿಗೆ ಸಂಬಂಧಿಸಿದಂತೆ ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ಹಾಗೂ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಸಹಕಾರ ನೀಡುವಂತೆ ಕೋರಲಾಯಿತು.
ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಡಬ್ಲೂ,ಹೆಚ್.ಓ ಅಧಿಕಾರಿಗಳಾದ ಡಾ. ಮುಕಂದ ಗಲಗಲಿ, ಪರಸುರಾಮ ಹಿಟ್ನಳ್ಳಿ, ಜಾನ್ ಕಟವಟೆ, ಅಪ್ಪಾಸಾಹೇಬ ಇನಾಮದಾರ,ರಾಜೇಶ್ವರಿ ಗೋಲಗೇರಿ, ಕೆ ಡಿ ಗುಂಡಬಾವಡಿ, ಎಲ್ಲಾ ತಾಲೂಕು ಆರೋಗ್ಯ ಅಧಿಕಾರಿಗಳುಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

