ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವಕ್ಕೆ ಚಾಲನೆ | ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸಲಹೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಾಲ್ಯದಲ್ಲಿಯೇ ಮಕ್ಕಳಿಗೆ ಅವರ ಆಸಕ್ತಿಯ ವಿವಿಧ ಕಲೆಗಳೆಡೆಗೆ ಆಸಕ್ತಿ ಹಾಗೂ ಅವುಗಳನ್ನು ರೂಢಿಸಿಕೊಳ್ಳಲು ಪಾಲಕರು ಪ್ರೋತ್ಸಾಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಗುರುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವಿವಿಧ ಕಲಾಪ್ರಕಾರಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳ ಸ್ಪರ್ಧೆಯ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಲೆಗಳು ಸೃಜನಶೀಲತೆ, ಕೌಶಲ್ಯ, ಮಾನಸಿಕ ಸ್ಥೆöÊರ್ಯ ಹಾಗೂ ಸೌಂದರ್ಯವನ್ನು ವ್ಯಕ್ತಪಡಿಸುತ್ತವೆ. ಇವು ಮನರಂಜನೆಯೊಂದಿಗೆ ಜೀವನಶೈಲಿ ಪ್ರತಿಬಿಂಬಿಸುತ್ತವೆ. ಮನುಷ್ಯನ ಭಾವನೆ, ಸಂಸ್ಕೃತಿ ಹಾಗೂ ಪರಂಪರೆಯ ಅಭಿವ್ಯಕ್ತಿಯಾಗಿವೆ. ಸಂಗೀತ, ನೃತ್ಯ ಮುಂತಾದ ಕಲೆಗಳು ಮನಸ್ಸಿಗೆ ನೆಮ್ಮದಿ ಹಾಗೂ ಆತ್ಮ ಸಂತೃಪ್ತಿ ನೀಡುತ್ತವೆ. ವಿದ್ಯಾರ್ಥಿ ದೆಸೆಯಲ್ಲಿಯೇ ಮಕ್ಕಳು ಪಠ್ಯದೊಂದಿಗೆ ಸಾಂಸ್ಕೃತಿಕ ಚಟುವಟಿಕೆ ರೂಢಿಸಿಕೊಳ್ಳಬೇಕು. ವಿವಿಧ ಕಲಾ ಪ್ರಕಾರಗಳಲ್ಲಿ ಬಾಲಪ್ರತಿಭೆ, ಕಿಶೋರ ಪ್ರತಿಭೆ ಮತ್ತು ಯುವ ಪ್ರತಿಭೆಗಳ ಸ್ಪರ್ಧೆಗಳನ್ನು ಜಿಲ್ಲಾ ಮಟ್ಟದಲ್ಲಿ ಸರ್ಕಾರ ಏರ್ಪಡಿಸುವ ಮೂಲಕ ತಮ್ಮ ಕಲಾ ಪ್ರತಿಭೆ ಗುರುತಿಸಲು ಅವಕಾಶ ಒದಗಿಸಿದೆ. ವಿವಿಧ ಕಲಾ ಪ್ರಕಾರಗಳ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕಲಾ ಪ್ರತಿಭೆ ಪ್ರಸ್ತುತಪಡಿಸಿ ಎಂದು ಹೇಳಿದರು. ಕಲೆ ಮನುಷ್ಯನ ನೆಮ್ಮದಿ ಜೀವನಕ್ಕೆ ಪೂರಕವಾಗಿ ಸಹಕಾರಿಯಾಗಿದೆ. ನೃತ್ಯ, ಸಂಗೀತ ಸೇರಿದಂತೆ ವಿವಿಧ ಕಲಾ ಪ್ರಕಾರಗಳಲ್ಲಿ ಪ್ರಾವೀಣ್ಯತೆ ಹೊಂದಿ ಜಿಲ್ಲೆಯ ಕೀರ್ತಿ ತರಬೇಕು. ಜನಪದ ಹಾಡುಗಳು ಜನರ ಜೀವನಾಡಿಯಾಗಿವೆ. ಅವು ಮನೆ-ಮನಗಳಲ್ಲಿ ಹಾಸುಹೊಕ್ಕಾಗಿವೆ. ಜನಪದ ಸಾಹಿತ್ಯವು ಜನರ ಜೀವನದ ಅವಿಭಾಜ್ಯ ಅಂಗವಾಗಿದ್ದು, ತಮ್ಮ ಕೆಲಸ ಕಾರ್ಯಗಳೊಂದಿಗೆ ಹಾಡಿನ ಮೂಲಕ ತಮ್ಮ ದಣಿವನ್ನು ತಣಿಸಿಕೊಳ್ಳುವ ಜನಪದರು ನೀಡಿರುವ ಬಹುದೊಡ್ಡ ಕೊಡುಗೆಯಾಗಿದೆ. ಹಲಸಂಗಿ ಗೆಳೆಯರು ಜನಪದ ಸಾಹಿತ್ಯವನ್ನು ಸಮೃದ್ಧಗೊಳಿಸಿ, ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಹಿರಿಯ ರಂಗಭೂಮಿ ಕಲಾವಿದರಾದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಲ್.ಬಿ.ಶೇಖ್, ಕರ್ನಾಟಕ ಲಲಿತ ಕಲಾ ಅಕಾಡೆಮಿ ಸದಸ್ಯೆ ಶ್ರೀಮತಿ ರಾಜೇಶ್ವರಿ ಮೋಪಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿ ಅಮರೇಶ ದೊಡಮನಿ ಸೇರಿದಂತೆ ಹಿರಿಯ ಕಲಾವಿದರು, ತೀರ್ಪುಗಾರರು, ಸ್ಪರ್ಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
“ನಮ್ಮ ನಾಡಿನ ಕಲೆ, ಸಂಸ್ಕೃತಿ ಅರಿಯಬೇಕು. ಮಗುವಿನಲ್ಲಿಡಗಿರುವ ಸುಪ್ತ ಪ್ರತಿಭೆ ಗುರುತಿಸಲು ಇಂತಹ ಕಾರ್ಯಕ್ರಮಗಳು ಅತ್ಯಂತ ಅಗತ್ಯವಾಗಿದೆ.”
– ಪಿ.ಎಸ್.ಕಡೇಮನಿ
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದರು, ವಿಜಯಪುರ

