ವಿಜಯಪುರದ ಬಾಲಮಂದಿರದಲ್ಲಿ ಹೊಸ ವರ್ಷಾಚರಣೆ | ಮಕ್ಕಳೊಂದಿಗೆ ಸಂಭ್ರಮ | ಸಸಿ ನೆಡುವಿಕೆ | ಪ್ರತಿಭಾವಂತ ವಿದ್ಯಾರ್ಥಿಗೆ ಸನ್ಮಾನ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಾಲಮಂದಿರದ ಆವರಣದಲ್ಲಿ ಕೈತೋಟ ಅಭಿವೃದ್ಧಿಪಡಿಸಬೇಕು ಹಾಗೂ ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಯೋಜನಾಬದ್ಧವಾಗಿ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು.
ಜಿಲ್ಲಾಡಳಿತ,ಎಂ.ಬಿ.ಪಾಟೀಲ ಫೌಂಡೇಷನ್, ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ದಿನಾಂಕ ೦೧-೦೧-೨೦೨೬ ರಂದು ನಗರದ ಸರ್ಕಾರಿ ಬಾಲಕರ ಬಾಲಮಂದಿರ ವಿಜಯಪುರದಲ್ಲಿ ಹೊಸ ವರ್ಷಾಚರಣೆಯನ್ನು ಮಕ್ಕಳೊಂದಿಗೆ ಆಚರಿಸಿ ಅವರು ಮಾತನಾಡಿದರು.
ಮಕ್ಕಳು ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗಾಗಿ ಅನೇಕ ಸೌಲಭ್ಯ ಒದಗಿಸಿದೆ. ಇದರ ಸದುಪಯೋಗಪಡೆದುಕೊಂಡು ಸತತ ಪರಿಶ್ರಮಿಗಳಾಗಿ ಅಧ್ಯಯನ ಮಾಡಿ, ಉನ್ನತ ಹುದ್ದೆಗೇರುವ ಗುರಿ ಹೊಂದಬೇಕು ಎಂದು ಪ್ರೇರಣಾ ನುಡಿಗಳನ್ನಾಡಿದರು.
ಧಾರವಾಡದ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಮಾತನಾಡಿ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಹಲವು ಯೋಜನೆ ಜಾರಿಗೆ ತರಲಾಗುತ್ತಿದೆ. ಬಾಲಮಂದಿರದ ಮಕ್ಕಳಲ್ಲಿ ಅಪಾರ ಪ್ರತಿಭೆಯನ್ನು ಹೊಂದಿದ್ದು, ಅವರ ಭವಿಷ್ಯ ಉಜ್ವಲಗೊಳಿಸುವ ಜವಾಬ್ದಾರಿ ಅಧಿಕಾರಿ, ಸಿಬ್ಬಂದಿ ಮೇಲಿದೆ. ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ದಿಸೆಯಲ್ಲಿ ಕೆಲಸ ಮಾಡುವಂತೆ ಸಲಹೆ ನೀಡಿದರಲ್ಲದೇ, ವಿಜಯಪುರ ಜಿಲ್ಲೆಯಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುತ್ತಿದ್ದು, ಸಹಕಾರ ಕೋರಿದರು.
ಬಾಲಕರೊಂದಿಗೆ ಸಿಹಿ ಊಟ ಉಣಬಡಿಸಿ, ಗಣ್ಯರು ಮಕ್ಕಳೊಂದಿಗೆ ಊಟ ಸವಿದ ಬಬಲೇಶ್ವರ ಆತ್ಮೀಯತೆ ಮೆರೆದರು.
ಈ ಸಂದರ್ಭದಲ್ಲಿ ಸರ್ಕಾರಿ ಬಾಲಕರ ಬಾಲಮಂದಿರದ ಮನೋಜ ಶಿವಲಾಲ ಜಾಧವ ಅವರು ಅತ್ಯಂತ ಕಠಿಣ ಪರೀಕ್ಷೆಯಾದ ಐಐಟಿಯಲ್ಲಿ ತೇರ್ಗಡೆಗೊಂಡು, ಐಐಟಿ ಧಾರವಾಡದಲ್ಲಿ ವ್ಯಾಸಂಗ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಿ, ಶುಭಕೋರಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ. ಚವ್ಹಾಣ, ಜಿಲ್ಲಾ ನಿರೂಪಣಾಧಿಕಾರಿ ಶ್ರೀಮತಿ ನಿರ್ಮಲಾ ಹೆಚ್ ಸುರಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶ್ರೀಮತಿ ದೀಪಾ ಕಾಳೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ದೀಪಾಕ್ಷಿ ಜಾನಕಿ,ಶ್ರೀಮತಿ ಭಾರತಿ ಹೊನ್ನಳ್ಳಿ, ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಸವರಾಜ ಜಿಗಳೂರು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಗೀತಾ ಎಸ್. ಗುತ್ತರಗಿಮಠ,ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು, ಸುಧಾರಣಾ ಸಂಸ್ಥೆಗಳ ಅಧೀಕ್ಷಕರು ಸೇರಿದಂತೆ ಇಲಾಖೆಯ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.
ಮಕ್ಕಳಿಗೆ ಸ್ಟೀಲ್ ವಾಟರ್ ಬಾಟಲ್ಸ್ ವಿತರಣೆ
ಸಮಾರಂಭದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಅ. ಬಬಲೇಶ್ವರ ಹಾಗೂ ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಸರ್ಕಾರಿ ಬಾಲಕರ ಬಾಲಮಂದಿರ ಆವರಣದಲ್ಲಿ ಸಸಿ ನೆಡುವ ಮೂಲಕ ಹಸರೀಕರಣದ ಮಹತ್ವ ಸಾರಿದರು.
ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಾಣ ಹಾಗೂ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಸರ್ಕಾರಿ ಬಾಲಕರ ಬಾಲಮಂದಿರದ ಮಕ್ಕಳಿಗೆ ಸ್ಟೀಲ್ ವಾಟರ್ ಬಾಟಲ್ ವಿತರಿಸಲಾಯಿತು.

