ಮನವಿಗೆ ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್ ರಿಂದ ಪೂರಕ ಸ್ಪಂದನೆ
ಉದಯರಶ್ಮಿ ದಿನಪತ್ರಿಕೆ
ಬೆಂಗಳೂರು: ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ತಿಂಗಳಿಗೆ ಒಂದು ಪುಟ ಹೆಚ್ಚುವರಿ ಸರ್ಕಾರಿ ಜಾಹೀರಾತು ನೀಡುವಂತೆ ಕರ್ನಾಟಕ ರಾಜ್ಯ ಮಹಿಳಾ ದಿನಪತ್ರಿಕೆಗಳ ಸಂಪಾದಕರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬುಧವಾರ ವಿಧಾನಸೌಧದಲ್ಲಿ ಮನವಿ ಸಲ್ಲಿಸಿದ ಬಳಿಕ ಸಂಘದ ಅಧ್ಯಕ್ಷೆ ರಶ್ಮಿ ಪಾಟೀಲ್ ಮಾತನಾಡಿ, ರಾಜ್ಯದಲ್ಲಿ ಮಹಿಳೆಯರ ನೇತೃತ್ವದಲ್ಲಿ ಪ್ರಕಟವಾಗುತ್ತಿರುವ ದಿನಪತ್ರಿಕೆಗಳು ಸಾಮಾಜಿಕ ಜಾಗೃತಿ, ಮಹಿಳಾ ಸಬಲೀಕರಣ ಹಾಗೂ ಗ್ರಾಮೀಣ ಸಮಸ್ಯೆಗಳ ಕುರಿತಾಗಿ ನಿರಂತರವಾಗಿ ಧ್ವನಿ ಎತ್ತುತ್ತಿವೆ. ಇಂತಹ ಪತ್ರಿಕೆಗಳಿಗೆ ಸರ್ಕಾರದ ಮಟ್ಟದಲ್ಲಿ ಪ್ರೋತ್ಸಾಹ ಅಗತ್ಯವಿದ್ದು, ಹೆಚ್ಚುವರಿ ಜಾಹೀರಾತು ಸೌಲಭ್ಯ ದೊರೆತರೆ ಮಹಿಳಾ ಸಂಪಾದಕತ್ವದ ಪತ್ರಿಕೆಗಳು ಆರ್ಥಿಕವಾಗಿ ಬಲಿಷ್ಠವಾಗುವ ಜೊತೆಗೆ ಗುಣಮಟ್ಟದ ಪತ್ರಿಕೋದ್ಯಮಕ್ಕೂ ಉತ್ತೇಜನ ಸಿಗಲಿದೆ ಎಂದು ಹೇಳಿದರು.
ಕಳೆದ ಏಳು ವರ್ಷಗಳಿಂದ ಸಂಘದ ವತಿಯಿಂದ ನಿರಂತರವಾಗಿ ಮನವಿ ಸಲ್ಲಿಸುತ್ತಿದ್ದರೂ ಸಮರ್ಪಕ ಸ್ಪಂದನೆ ದೊರಕಿಲ್ಲ. ಈ ಬಾರಿಯಾದರೂ ಮನವಿಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಅವರು ಒತ್ತಾಯಿಸಿದರು.
ಮನವಿಗೆ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು, ವಿಷಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಹಾಗೂ 2026–27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಅಳವಡಿಸುವ ಕುರಿತು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಹಿಳಾ ದಿನಪತ್ರಿಕೆಗಳ ಸಂಪಾದಕರ ಸಂಘದ ಪ್ರಧಾನ ಕಾರ್ಯದರ್ಶಿ ಶಾಂಭವಿ ನಾಗರಾಜ್, ಖಜಾಂಚಿ ರೇಖಾ ಪ್ರಕಾಶ್, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಸಚಿವ ಜಮೀರ್ ಅಹ್ಮದ್ ಖಾನ್ ಅವರ ಮಾಧ್ಯಮ ಸಲಹೆಗಾರರಾದ ಲಕ್ಷ್ಮೀನಾರಾಯಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ಅಧಿಕಾರಿ ಪುಟ್ಟಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಆಯುಕ್ತರಿಂದ ಬೇಡಿಕೆ ಈಡೇರಿಸುವ ಭರವಸೆ
ಇದೆ ಮಾರ್ಚ್ 8ರಂದು ಜರುಗುವ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನದಂದು ರಾಜ್ಯದ ಮಹಿಳಾ ಸಂಪಾದಕತ್ವದ ಪತ್ರಿಕೆಗಳಿಗೆ ವಿಶೇಷ ಪ್ರೋತ್ಸಾಹ ರೂಪದಲ್ಲಿ ನೀಡಲಾಗುವ ಸರ್ಕಾರಿ ಜಾಹೀರಾತನ್ನು ಒಂದು ಸಂಪೂರ್ಣ ಪುಟಕ್ಕೆ ನಿಗದಿಪಡಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರಿಗೆ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ಮನವಿಗೆ ಸ್ಪಂದಿಸಿದ ಆಯುಕ್ತರು ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದರು.

