ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ರಾಜ್ಯ ಹಾಗೂ ಕೇಂದ್ರ ಸರಕಾರಗಳಲ್ಲಿ ದೀರ್ಘಕಾಲದಿಂದ ಖಾಲಿ ಉಳಿದಿರುವ ಸರಕಾರಿ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಬೇಕು ಎಂದು ಆಗ್ರಹಿಸಿ ಜಮಖಂಡಿಯ ಉಪವಿಭಾಗಾಧಿಕಾರಿಗಳ ಕಾರ್ಯಾಲಯದ ಎದುರುಗಡೆ ಯುವ ಅಧಿವೇಶನ ಆಯೋಜಿಸಲಾಯಿತು.
ಈ ಅಧಿವೇಶನದಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ ಉದ್ಯೋಗಾ ಕಾಂಕ್ಷಿ ಯುವಕರು ಹಾಗೂ ಚಿಂತಕರು ಭಾಗವಹಿಸಿ, ನೇಮಕಾತಿ ಪ್ರಕ್ರಿಯೆಯಲ್ಲಿನ ವಿಳಂಬ, ಖಾಲಿ ಹುದ್ದೆಗಳ ಹೆಚ್ಚಳ, ಪರೀಕ್ಷಾ ವ್ಯವಸ್ಥೆಯ ಅಸಮರ್ಪಕತೆ ಸೇರಿದಂತೆ ಹಲವು ಪ್ರಮುಖ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚೆ ನಡೆಸಿದರು.
ರಾಜ್ಯದ ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.84 ಲಕ್ಷ ಸರಕಾರಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು. ಕೇಂದ್ರ ಸರಕಾರದ ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 9.64 ಲಕ್ಷ ಹುದ್ದೆಗಳನ್ನು ಕೂಡ ಶೀಘ್ರದಲ್ಲಿ ಭರ್ತಿ ಮಾಡಬೇಕು. ಕೆಪಿಎಸ್ಸಿ, ಕೆಇಎ, ಕೆಎಸ್ಪಿ ಹಾಗೂ ಶಿಕ್ಷಣ ಇಲಾಖೆ ಸೇರಿದಂತೆ ನೇಮಕಾತಿ ಪ್ರಾಧಿಕಾರಗಳು ಪ್ರತಿ ವರ್ಷ ಖಾಲಿ ಹುದ್ದೆಗಳ ವಿವರ ಮತ್ತು ವಾರ್ಷಿಕ ನೇಮಕಾತಿ ಕ್ಯಾಲೆಂಡರ್ ಪ್ರಕಟಿಸಿ ನಿಗದಿತ ವೇಳಾಪಟ್ಟಿಯಂತೆ ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಯಪಿಎಸ್ಪಿ ಸೇರಿದಂತೆ ಎಲ್ಲ ಕೇಂದ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿಯೂ ನಡೆಸಬೇಕು. ನೇಮಕಾತಿ ಪ್ರಕ್ರಿಯೆಗಳಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಂಡು ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು ಹಾಗೂ ದುಬಾರಿ ಅರ್ಜಿ ಶುಲ್ಕವನ್ನು ರದ್ದುಪಡಿಸಬೇಕು. ರಾಜ್ಯದ ನೇಮಕಾತಿ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸಲು ಯಪಿಎಸ್ಪಿ ಮಾದರಿಯಲ್ಲಿ ಕೆಪಿಎಸ್ಸಿ ಯನ್ನು ಪುನರ್ರಚನೆ ಮಾಡಬೇಕು. ಸಭೆಯಲ್ಲಿ
ಅಂಗೀಕರಿಸಿದ ಈ ನಿರ್ಣಯಗಳ ಕುರಿತು ರಾಜ್ಯ ಸರಕಾರವು ತುರ್ತು ಗಮನಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಯುವಕರು ಆಗ್ರಹಿಸಿದರು.
ಅಧಿವೇಶನದ ಸಭಾಧ್ಯಕ್ಷ ಪ್ರದೀಪ ಮೆಟಗುಡ್ಡ ಮಹಾರಾಜ ಅವರ ಮಾರ್ಗದರ್ಶನದಲ್ಲಿ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಏಕಮತದಿಂದ ಅಂಗೀಕರಿಸಿ ಕೇಂದ್ರ ಸರಕಾರದ ವ್ಯಾಪ್ತಿಯ ವಿಷಯಗಳ ಬಗ್ಗೆ ರಾಜ್ಯ ಸರ್ಕಾರವು ಸೂಕ್ತ ಮಟ್ಟದಲ್ಲಿ ಒತ್ತಡ ತಂದು ಯುವಕರ ಬೇಡಿಕೆಗಳಿಗೆ ಸ್ಪಂದಿಸುವಂತೆ ಕ್ರಮ ವಹಿಸಬೇಕು ಎಂದು ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಇದೇ ವೇಳೆ ಹಣಮಂತ ಯಮಗಾರ, ಕಲ್ಲಪ್ಪ ಬಿರಾದಾರ, ಶೇಖರ್ಕಾಂಬಳೆ, ಶ್ರೀಶೈಲ ಭೂಮಾರ, ಸುಭಾಸ ಶಿರಬೂರ, ದುಂಡಪ್ಪ ಯರಗಟ್ಟಿ ಕರೆಪ್ಪ ಪೂಜಾರ, ಆಕಾಶ ಬೀಳಗಿ ಸೇರಿದಂತೆ ಹಲವು ಯುವಕರು ಉಪಸ್ಥಿತರಿದ್ದರು.

