ಸಚಿವ ಡಾ.ಎಂ.ಬಿ.ಪಾಟೀಲ ರಿಗೆ ಸಂಸದ ರಮೇಶ ಜಿಗಜಿಣಗಿ ಒತ್ತಾಯ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಬೇಸಿಗೆಗೂ ಮುನ್ನವೇ ಬಿಸಲಿನ ಪ್ರಖರತೆ ಅಧಿಕವಾಗಿದೆ, ಬಿಸಿಲಿನ ತೀವ್ರತೆಯಿಂದ ಜಲಮೂಲಗಳು ಬತ್ತಿ ಕುಡಿಯುವ ನೀರಿಗೆ ವ್ಯತ್ಯಯ ಮೊದಲಾದ ಎದುರಾಗುವ ಸಮಸ್ಯೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲರು ಕೂಡಲೇ ಜನಪ್ರತಿನಿಧಿಗಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ವಿಶೇಷ ಸಭೆ ಕರೆಯಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೇಸಿಗೆ ಮುನ್ನವೇ ಬಿಸಿಲಿನ ತೀವ್ರತೆ ಅಧಿಕವಾಗಿದೆ, ವಿಜಯಪುರ ನಗರದಲ್ಲಿ ೮ ರಿಂದ ೧೦ ದಿನಕ್ಕೆ ನೀರು ಪೂರೈಕೆಯಾಗುತ್ತಿದ್ದು, ನೀರಿನ ಹಾಹಾಕಾರ ಉಂಟಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಹೀಗಾಗಿ ಮುಂಬರುವ ಪರಿಸ್ಥಿತಿಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವುದು ಒಳ್ಳೆಯದು, ನಗರ ಹಾಗೂ ಗ್ರಾಮೀಣ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮರ್ಪಕ ಪೂರೈಕೆಯಾಗಬೇಕು, ಈ ನಿಟ್ಟಿನಲ್ಲಿ ಆಡಳಿತ ಯಂತ್ರ ಚುರುಕಾಗಬೇಕು, ಅನೇಕ ವಿಷಯದಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈ ವಿಷಯವನ್ನಾದರೂ ಗಂಭೀರವಾಗಿ ತೆಗೆದುಕೊಳ್ಳಬೇಕು, ಈ ನಿಟ್ಟಿನಲ್ಲಿಯೂ ಉದಾಸೀನತೆ ಪ್ರದರ್ಶಿಸುವುದು ಸರಿಯಲ್ಲ. ಹೀಗಾಗಿ ಜಿಲ್ಲಾ ಉಸ್ತುವಾರಿಸ ಸಚಿವ ಡಾ.ಎಂ.ಬಿ. ಪಾಟೀಲ ಕೂಡಲೇ ಕುಡಿಯುವ ನೀರಿನ ಸಮರ್ಪಕ ಪೂರೈಕೆ ವಿಷಯವಾಗಿ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆ ಕರೆಯಬೇಕು, ಯಾವ ಸ್ಥಳದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಸಾಧ್ಯತೆ ಇದೆಯೋ ಅಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವುದು ಒಳಿತು, ಈ ಬಾರಿ ಬಿಸಲಿನ ತೀವ್ರತೆ ನೋಡಿದರೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣಿಸುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ, ಜಾನುವಾರುಗಳಿಗೆ ಮೇವಿನ ಕೊರತೆಯೂ ಉಂಟಾಗಬಹುದು, ಈ ಹಿನ್ನೆಲೆಯಲ್ಲಿ ಈಗಿನಿಂದಲೇ ಪೂರ್ವ ಸಿದ್ಧತೆ ಕೈಗೊಂಡರೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕು, ಈ ನಿಟ್ಟಿನಲ್ಲಿ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ವಿಶೇಷ ಮುತವರ್ಜಿ ವಹಿಸಿ ಕುಡಿಯುವ ನೀರಿನ ತೊಂದರೆಯಾಗದAತೆ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಬೇಕು, ಎಲ್ಲ ಜನಪ್ರತಿನಿಧಿಗಳನ್ನು ಈ ಸಭೆಗೆ ಆಹ್ವಾನಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ,

