ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಕುಡಿಯುವ ನೀರಿನ ನಿರ್ವಹಣೆ ಕುರಿತು ಸಭೆಯಲ್ಲಿ ಡಿಸಿ ಡಾ.ಆನಂದ ಕೆ.
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ತೊಂದರೆಯಾಗಂತೆ ಈಗಿನಿಂದಲೇ ಮುಂಜಾಗೃತ ಕ್ರಮಕ್ಕಾಗಿ ಯೋಜನೆ ರೂಪಿಸಿ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಕುಡಿಯುವ ನೀರಿನ ನಿರ್ವಹಣೆ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ದುರಸ್ತಿ ಇರುವ ಬೋರವೆಲ್ಗಳನ್ನು ಪುನಶ್ಚೇತನಗೊಳಿಸಿ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿರುವ ದುರಸ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸಿ ಕುಡಿಯುವ ನೀರು ಸಮರ್ಪಕವಾಗಿ ದೊರೆಯುವಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಶುದ್ಧತೆ ಕುರಿತು ಮೇಲಿಂದ ಮೇಲೆ ಪರೀಕ್ಷಿಸಿ ಶುದ್ಧ ನೀರು ದೊರಕುವಂತ ಕ್ರಮ ವಹಿಸಬೇಕು. ಪ್ರಸಕ್ತ ವರ್ಷ ಏಪ್ರೀಲ್ ೩ರ ನಂತರ ಜಿಲ್ಲೆಯಲ್ಲಿರುವ ಕುಡಿಯುವ ನೀರಿಗಾಗಿ ಕಾಲುವೆಗಳ ಮೂಲಕ ಕೆರೆಗಳಿಗೆ ನೀರನ್ನು ಹರಿ ಬಿಡಲಾಗುತ್ತಿದ್ದು, ಕುಡಿಯುವ ನೀರಿಗಾಗಿ ಬಳಸಲು ಮಾತ್ರ ಉಪಯೊಗಿಸುವಂತೆಯೂ ಹಾಗೂ ಯಾವುದೇ ಕಾರಣಕ್ಕೂ ಇತರ ಕಾರಣಕ್ಕೆ ಬಳಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗಾಗಿ ಸಮಸ್ಯೆಯಾಗದಂತೆ ಕಾಲುವೆಗಳ ಮೇಲೆ ಪಂಪ್ ಸೆಟ್ ಇರದಂತೆ ನೋಡಿಕೊಳ್ಳಬೇಕು. ಹಗಲು ಮತ್ತು ರಾತ್ರಿ ವೇಳೆಯಲ್ಲಿ ನಿಗಾ ವಹಿಸುವಂತೆ ಅಗತ್ಯ ಸಿಬ್ಬಂದಿ ನೇಮಿಸಬೇಕು.ಅದರೊಂದಿಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಸಹಕರಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿರುವ ವಸತಿ ನಿಲಯ, ಅಂಗನವಾಡಿ, ಶಾಲಾ ಕಾಲೇಜುಗಳಲ್ಲಿ ನೀರಿನ ಅಭಾವವಾಗದಂತೆ ಈಗಿಂದಲೇ ಯೋಜನೆ ರೂಪಿಸಿ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಸರಬರಾಜುವಿಗೆ ಕ್ರಮ ವಹಿಸಬೇಕು. ಕುಡಿಯುವ ನೀರಿನ ತೊಂದರೆಯಾಗದಂತೆ ಜಿಲ್ಲೆಯ ಎಲ್ಲ ತಾಲೂಕು ತಹಶೀಲ್ಧಾರರು ಸಭೆ ಕರೆದು ಕ್ರಮ ವಹಿಸಬೇಕು. ಕುಡಿಯುವ ನೀರು ಸಂಗ್ರಹ ಘಟಕಗಳನ್ನು ಪ್ರತಿ ೧೫ ದಿನಗಳಿಗೊಮ್ಮೆ ಸ್ವಚ್ಚಗೊಳಿಸಿ, ಶುದ್ಧ ಕುಡಿಯುವ ನೀರು ಸರಬರಾಜಾಗುವಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಏಪ್ರೀಲ್ನಿಂದ ಬಿಸಿಲಿನ ಪ್ರಖರತೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಬೆಳಿಗ್ಗೆ ೧೧ ರಿಂದ ಮದ್ಯಾಹ್ನ ೪ ಗಂಟೆಯವರೆಗೆ ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ಸಾರ್ವಜನಿಕರಿಗೆ ಅಗತ್ಯ ತಿಳಿವಳಿಕೆ ಮೂಡಿಸಬೇಕು. ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಜನನಿಬಿಡ ಪ್ರದೇಶಗಳಲ್ಲಿ ಕರ ಪತ್ರ ವಿತರಣೆ, ಪ್ರಚಾರ ಫಲಕ, ಧ್ವನಿವರ್ಧಕಗಳನ್ನು ಬಳಸಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಈ ಕುರಿತು ಈಗಾಗಲೇ ಯೋಜನೆ ರೂಪಿಸಿ ಕಾರ್ಯರೂಪಕ್ಕೆ ತರಬೇಕು. ಮಳೆಗಾಲದ ಸಮಯದಲ್ಲಿ ಸಾರ್ವಜನಿಕರು ಗುಡುಗು ಮತ್ತು ಸಿಡಿಲುಗಳಿಂದ ಸುರಕ್ಷಿತವಾಗಿ ರಕ್ಷಿಸಿಕೊಳ್ಳಲು ಹಾಗೂ ಪ್ರಾಣಾಪಾಯದಿಂದ ಪಾರಾಗಲು ಮಾರ್ಗ ಸೂಚಿಗಳ ಜಾಗೃತಿ ಮೂಡಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಮಾತನಾಡಿ, ಜಿಲ್ಲೆಯ ಎಲ್ಲ ಪಟ್ಟಣ ಪಂಚಾಯತಿ ಗ್ರಾ,ಮ ಪಂಚಾಯತಿಗಳಲ್ಲಿ ಕುಡಿಯುವ ನೀರು ಹಾಗೂ ಬಿಸಿಲಿನ ಪ್ರಖರತೆಯಿಂದ ಸಾರ್ವಜನಿಕರ ಸುರಕ್ಷತೆಗಾಗಿ ಜಾಗೃತಿ ಕಾರ್ಯಕ್ರಮಗಳು ಮತ್ತು ಸಭೆಗಳನ್ನು ನಡೆಸಲಾಗಿದ್ದು,ಬೇಸಿಗೆ ಸಮಯದಲ್ಲಿ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಲಾಗುತ್ತಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಅಪರ ಜಿಲಾಧಿಕಾರಿ ಡಾ.ಔದ್ರಾಮ, ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ತಾಲೂಕಿನ ಎಲ್ಲ ತಹಶೀಲ್ಧಾರರು, ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಇತರರು ಉಪಸ್ಥಿತರಿದ್ದರು.

