ವಿಜಯಪುರ ಜಿಲ್ಲಾ ಮಟ್ಟದ ೩ನೇ ತ್ರೈಮಾಸಿಕ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪೌರ ಕಾರ್ಮಿಕ ವೇತನ ವಿಳಂಬ ಮಾಡದೆ ನಿಗದಿತ ಅವಧಿಯಲ್ಲಿ ಪಾವತಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ನಗರಾಭಿವೃದ್ಧಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮ್ಯಾನುಯಲ್ ಸ್ಕೆವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ ೨೦೧೩ ಜಿಲ್ಲಾ ಮಟ್ಟದ ೩ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೊರಗುತ್ತಿಗೆ ಆಧಾರ ಮೇಲೆ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿ, ಪೌರ ಕಾರ್ಮಿಕರಿಗೆ ಕನಿಷ್ಟ ವೇತನದಡಿ ಇ.ಎಸ್.ಐ ಇ.ಪಿ.ಎಫ್ ಕಟಾವು ಮತ್ತು ವಿಮಾ ಕಂತಿನ ಸಮಗ್ರ ಮಾಹಿತಿಯನ್ನು ಕಾಲ ಕಾಲಕ್ಕೆ ಮಾಹಿತಿ ನೀಡಬೇಕು ಎಂದರು.
ಕಾರ್ಮಿಕರ ಆರೋಗ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಮೇಲಿಂದ ಮೇಲೆ ಆರೋಗ್ಯ ಶಿಬಿರಗಳನ್ನು ಏರ್ಪಡಿಸಬೇಕು. ಅವರಿಗೆ ಸುರಕ್ಷಿತ ಪರಿಕರಗಳನ್ನು ಸಮರ್ಪಕವಾಗಿ ವಿತರಿಸಲು ಕ್ರಮ ವಹಿಸಬೇಕು. ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಪಡೆದುಕೊಂಡಿರುವ ಫಲಾನುಭವಿಗಳ ಹಾಗೂ ಇಲ್ಲಿಯವರೆಗೆ ಹಕ್ಕು ಪತ್ರಗಳನ್ನು ವಿತರಿಸಿದ ವಿವರ ಒದಗಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಉದ್ಯಮಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ನೇರ ಸಾಲ, ಮೈಕ್ರೋಡಿಟ್ ಕಿರುಸಾಲ ಹಾಗೂ ಉಚಿತ ಲ್ಯಾಪ್ ಟಾಪ್ ಹಾಗೂ ಇತರ ಯೋಜನೆಗಳಲ್ಲಿ ಪಡೆದಿರುವ ಫಲಾನುಭವಿಗಳ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಸಿ.ಬಿ ಕುಂಬಾರ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವಿರ ಬೋರಣ್ಣವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಕುಮಾರ ಗುಣಾರಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ನಗರಾಭಿವೃದ್ಧಿ ಯೋಜನಾಧಿಕರಿ ಬದ್ರುದ್ದೀನ ಸೌದಾಗರ, ಸಫಾಯಿ ಕರ್ಮಚಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾದ ದಯಾನಂದ ಅಲಿಯಾಬಾದ, ಮಹಾದೇವಿ ಹಾದಿಮನಿ, ಸೇರಿದಂತೆ ಬಬಿನಾಬಾಯಿ ನಾಗರಾಳ ಹಾಗೂ ಇತರರು ಉಪಸ್ಥಿತರಿದ್ದರು.

