ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರ, ವೆಬ್ ಕಾಸ್ಟಿಂಗ್ ಕೇಂದ್ರಗಳ ಸೂಕ್ಷ್ಮ ಪರಿಶೀಲನೆ, ಪ್ರೇರಣಾದಾಯಕ ಭೇಟಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬುಧವಾರ ನಡೆದ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಭೇಟಿ ನೀಡಿ ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದರು.
ತಾಲೂಕಿನ ಹಿಟ್ಟಿನಹಳ್ಳಿ ಶ್ರೀ ಶಿವಮೂರ್ತಿ ಸ್ವಾಮಿ ಚರಂತಿಮಠ ಪ್ರೌಢ ಶಾಲೆ ಹಾಗೂ ನಗರದ ಲೋಯೋಲಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಾಗೂ ವಿಕಾಸ್ ಪ್ರೌಢ ಶಾಲೆಗಳಿಗೆ ಭೇಟಿ ನೀಡಿ, ಪರೀಕ್ಷಾ ಪರೀಕ್ಷಾ ವ್ಯವಸ್ಥೆಯ ಸಮಗ್ರ ಪರಿಶೀಲನೆ ನಡೆಸಿದರು.
ವಿದ್ಯಾರ್ಥಿಗಳೊಂದಿಗೆ ಸ್ನೇಹಪೂರ್ಣವಾಗಿ ಮಾತನಾಡಿದ ಅವರು, ಯಾವುದೇ ರೀತಿಯ ಆತಂಕ ಪಡದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಪ್ರೇರೇಪಿಸಿದರು. ನಿಮ್ಮ ಪರಿಶ್ರಮವೇ ನಿಮ್ಮ ಯಶಸ್ಸಿನ ಮೂಲ, ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿರಿ ಎಂದು ವಿದ್ಯಾರ್ಥಿಗಳಿಗೆ ಹುರಿದುಂಬಿಸಿದರು. ಈ ಮಾತುಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು ತುಂಬಿದವು
ಬಳಿಕ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾ, ಭದ್ರತಾ ವ್ಯವಸ್ಥೆಗಳು, ಪ್ರಶ್ನೆಪತ್ರಿಕೆ ವಿತರಣೆ ಕ್ರಮ, ಪರೀಕ್ಷಾ ಮೇಲ್ವಿಚಾರಣೆ, ಪ್ರಥಮ ಚಿಕಿತ್ಸಾ ವ್ಯವಸ್ಥೆ ಹಾಗೂ ಕುಡಿಯುವ ನೀರು ಸೇರಿದಂತೆ ಪ್ರತಿಯೊಂದು ಹಂತವನ್ನು ಸೂಕ್ಷ್ಮವಾಗಿ ಪರಿಶೀಲಿಸಿದರು.
ಪರೀಕ್ಷಾ ಮೇಲ್ವಿಚಾರಕರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿರುವುದನ್ನು ಪರಿಶೀಲಿಸಿ, ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಲು ಸೂಚಿಸಿದರು.
ನಂತರ, ಸಿಇಒ ಅವರು ಪರೀಕ್ಷೆಗಳ ಮೇಲ್ವಿಚಾರಣೆಗಾಗಿ ಜಿಲ್ಲಾ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಸ್ಥಾಪಿಸಲಾಗಿರುವ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ, ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಪ್ರಕ್ರಿಯೆಯನ್ನು ಲೈವ್ ಪ್ರಸಾರದ ಮೂಲಕ ವೀಕ್ಷಿಸಿ, ಪ್ರತಿಯೊಂದು ಕೇಂದ್ರದಲ್ಲಿಯೂ ಶಿಸ್ತು ಮತ್ತು ನಿಯಮ ಪಾಲನೆಯು ಸಮರ್ಪಕವಾಗಿ ನಡೆಯುತ್ತಿರುವುದನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಜಿಲ್ಲಾ ನೋಡೆಲ್ ಅಧಿಕಾರಿಗಳಾದ ಟಿ. ಎಸ್. ಕೊಲ್ಹಾರ, ವೆಬ್ ಕಾಸ್ಟಿಂಗ್ ಕೇಂದ್ರದ ಮುಖ್ಯಸ್ಥರಾದ ರೇಣುಕಾ ಕಲಬುರ್ಗಿ, ಜಿಲ್ಲೆಯ ಎಲ್ಲಾ ವಲಯಗಳ ಮುಖ್ಯಸ್ಥರು ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ವೀಕ್ಷಕರು, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪೋಲಿಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಗೂ ಇತರೆ ಸಿಬ್ಬಂದಿಯವರು ಉಪಸ್ಥಿತರಿದ್ದರು.

