ಚಡಚಣದಲ್ಲಿ ನಡೆದ ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಭೆಯಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ಚಡಚಣ: ಬೇಸಿಗೆಯ ತೀವ್ರತೆಗೆ ಮುನ್ನ ತಾಲೂಕಿನಲ್ಲಿ ಎಲ್ಲೆಡೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಸೂಚಿಸಿದರು.
ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಭೆಯಲ್ಲಿ ಅವರು ಮಾತನಾಡಿದರು. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉಷ್ಣತೆ ಹೆಚ್ಚಾಗುವ ಸಾಧ್ಯತೆ ಇದ್ದು, ಕೊಳವೆಬಾವಿಗಳು ಸೇರಿದಂತೆ ನೀರಿನ ಮೂಲಗಳು ಬತ್ತಿಹೋಗುವ ಪರಿಸ್ಥಿತಿ ಎದುರಾಗಬಹುದು. ಆದ್ದರಿಂದ ಪ್ರತಿಯೊಂದು ಗ್ರಾಮದಲ್ಲೂ ಜನರು ಹಾಗೂ ಜಾನುವಾರುಗಳಿಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರತಿ ಗ್ರಾಮ ಲೆಕ್ಕಾಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಗಮನಹರಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಸದಸ್ಯರ ಅವಧಿ ಮುಗಿದಿರುವ ಹಿನ್ನೆಲೆ ಆಡಳಿತಾಧಿಕಾರಿಗಳು ಮತ್ತು ಪಿಡಿಓಗಳು ಸಮನ್ವಯದಿಂದ ಕೆಲಸ ಮಾಡಬೇಕು. ವಾರಕ್ಕೊಮ್ಮೆ ಸಭೆ ನಡೆಸಿ ಸಮಸ್ಯೆಗಳ ಪರಿಶೀಲನೆ ಮಾಡಬೇಕು ಎಂದು ಹೇಳಿದರು.
ನೀರಿನ ಸಂಬಂಧ ಸಣ್ಣಪುಟ್ಟ ಕಾಮಗಾರಿಗಳಿಗೆ ಬಜೆಟ್ ಕೊರತೆ ಇದ್ದರೂ ಕೂಡ ತಕ್ಷಣ ತಮ್ಮ ಗಮನಕ್ಕೆ ತಂದರೆ ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಚಿಕಿತ್ಸೆಗೆ ನೀರು ಅತಿ ಮುಖ್ಯ ಹಾಗಾಗಿ ವಾರದಲ್ಲಿ ಎರಡು ಸಲ ಸರಿಯಾಗಿ ನೀರು ಬೇಕೆಬೇಕು ಎಂದು ಆರೊಗ್ಯಾಧೀಕಾರಿಗಳು ಕೇಳಿದಾಗ ಪ.ಪಂ.ಮುಖ್ಯಾಧಿಕಾರಿ ತಾವಸೇ ಅವರು ನೀರಿನ ಕೊರತೆ ಆಗದಂತೆ ನೋಡಿಕೊಳ್ಳಲಾಗುವದು ಎಂದರು.
ಶಾಸಕರು ನೀರಿನ ವ್ಯವಸ್ಥೆ ಇರುವ ಸ್ಥಳದಲ್ಲಿ ಅಂದರೆ ಕೊಳವೆಭಾವಿ ಹಾಗೂ ಭೀಮಾ ನದಿಯ ಸ್ಥಳದಲ್ಲಿ ವಿದ್ಯುತ್ ಕೊರತೆ ಆಗದಂತೆ ನೋಡಿಕೊಳ್ಳಲು ಮತ್ತು ಟಿಸಿ ವಿಫಲವಾದರೆ ಕೂಡಲೆ ರಿಪೇರಿ ಮಾಡಿಸಿ ಅಳವಡಿಸುವಂತೆ ಎಇಇ ವಿಜಯಕುಮಾರ ಹವಾಲ್ದಾರ ಅವರಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಏಪ್ರಿಲ್ 1ರಿಂದ ಬೇಸಿಗೆ ಅವಧಿಯಲ್ಲಿ ಸರ್ಕಾರಿ ಕಚೇರಿಗಳ ಸಮಯವನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿಗದಿಪಡಿಸಿರುವುದರಿಂದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗಬೇಕು. ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಚಡಚಣ ಪಟ್ಟಣಕ್ಕೆ ಮಂಜೂರಾಗಿರುವ ಮೌಲಾನಾ ಆಜಾದ್ ವಸತಿ ಶಾಲೆ, ಸರ್ಕಾರಿ ಪದವಿ ಕಾಲೇಜುಗಳಿಗೆ ಕನಿಷ್ಠ 30 ಎಕರೆ ಜಮೀನು ಅಗತ್ಯವಿದೆ ಎಂದು ಶಾಸಕ ಪ್ರಶ್ನಿಸಿದಾಗ, ತಹಶೀಲ್ದಾರ ಸಂಜಯ ಇಂಗಳೆ ಪ್ರತಿಕ್ರಿಯಿಸಿ, ಪಟ್ಟಣದಿಂದ ಸುಮಾರು 3 ಕಿ.ಮೀ ದೂರದಲ್ಲಿರುವ ಹಾವಿನಾಳ ಗ್ರಾಮದಲ್ಲಿ ಸರ್ಕಾರದ 45 ಎಕರೆ ಜಾಗ ಲಭ್ಯವಿದ್ದು, ಅಲ್ಲಿ ಶಿಕ್ಷಣ ಹಬ್ ನಿರ್ಮಿಸಲು ಅವಕಾಶವಿದೆ ಎಂದು ತಿಳಿಸಿದರು.
ಒಂದೇ ಆವರಣದಲ್ಲಿ ವಸತಿ ಶಾಲೆ, ಕೈಗಾರಿಕಾ ತರಬೇತಿ ಕೇಂದ್ರ, ಪದವಿ ಕಾಲೇಜು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಬಹುದಾಗಿದೆ ಎಂದರು.
ಬೇಸಿಗೆಯ ಬಿಸಿಲಿನಲ್ಲಿ ಹಳ್ಳ ಕೊಳ್ಳಗಳು, ಭಾವಿಗಳು ಬತ್ತಿಹೋಗುವ ಪರಿಣಾಮ ಜಾನುವಾರಗಳಿಗೆ ಹಾಗೂ ಪಕ್ಷಿಗಳಿಗೆ ಕುಡಿಯಲು ನೀರು ಸಿಗದೆ ಸಾವನ್ನಪ್ಪುವ ಪರಿಸ್ಥಿತಿ ಬರುವ ಸಾಧ್ಯತೆ ಹೆಚ್ಚಿರುವದರಿಂದ ಸಾರ್ವಜನಿಕರು ತಮ್ಮ ಮನೆಯ ಮುಂದೆ ಜಾನುವಾರಗಳಿಗೆ ಹಾಗೂ ಪಕ್ಷಿಗಳಿಗೆ ಕುಡಿಯಲು ನೀರಿನ ವ್ಯವಸ್ಥೆ ಮಾಡುವಂತೆ ಶಾಸಕರು ಸಾರ್ವಜನಿಕರಿಗೆ ಮನವಿ ಮಾಡಿಕೊಂಡರು.
ಸಭೆಯಲ್ಲಿ ತಾಲೂಕು ಟಾಸ್ಕ ಫೋರ್ಸ್ ನೋಡಲ್ ಅಧಿಕಾರಿ ಸಿ.ಬಿ. ಕುಂಬಾರ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಅಶೋಕಕುಮಾರ ರಾಠೋಡ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಾಬಾಸಾಹೇಬ ತಾವಸೆ, ಆಹಾರ ನಿರೀಕ್ಷಕ ಶಿವಾನಂದ ಕೋಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.

