ವಿಜಯಪುರದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗ್ರಾಮ ಪಂಚಾಯಿತಿಗಳಲ್ಲಿ ನಡೆಯುತ್ತಿರುವ ತೆರಿಗೆ ಸಂಗ್ರಹಣಾ ಪ್ರಗತಿ ಶೇ.೧೦೦ ರಷ್ಟು ಸಾಧಿಸಬೇಕು. ಗುರಿ ಸಾಧನೆಯಲ್ಲಿ ಹಿಂದುಳಿದ ಪಂಚಾಯಿತಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.
ವಿಜಯಪುರ ತಾಪಂ ಸಭಾಭವನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಕುರಿತು ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಗೆ ಸಂಬಂಧಿಸಿದ ಸಾಮಗ್ರಿ ಹಣ ಪಾವತಿ, ಬಾಕಿ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಿ, ಬಾಕಿ ಪಾವತಿಗಳನ್ನು ತ್ವರಿತವಾಗಿ ಪಾವತಿ ಮಾಡಿ ಕಾಮಗಾರಿಗಳ ನಿರಂತರತೆ ಕಾಯ್ದುಕೊಳ್ಳಬೇಕು ಎಂದರು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿಕಾರರ ಇ-ಕೆವೈಸಿ ಪ್ರಕ್ರಿಯೆಯ ಪ್ರಗತಿಯು ನಿರೀಕ್ಷಿತವಾಗಿಲ್ಲ. ಆದ್ದರಿಂದ ಎಲ್ಲ ಕೂಲಿಕಾರರ ಇ-ಕೆವೈಸಿಯನ್ನು ಶೇ. ೧೦೦ರಷ್ಟು ಪೂರ್ಣಗೊಳಿಸಬೇಕು. ಅದೇ ರೀತಿ, ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಕ್ರಮ ಕೈಗೊಳ್ಳಲು ಎಲ್ಲ ಗ್ರಾಮ ಪಂಚಾಯತಿ ಪಿಡಿಒಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈಗಾಗಲೇ ಬೇಸಿಗೆ ಆರಂಭವಾಗಿರುವುದರಿಂದ, ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಎಲ್ಲ ಗ್ರಾಮಗಳಿಗೂ ಸಮರ್ಪಕ ಕುಡಿಯುವ ನೀರಿನ ಪೂರೈಕೆ ಮಾಡಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಪಂನ ಸಹಾಯಕ ನಿರ್ದೇಶಕರು(ಗ್ರಾ.ಉ) ಎಸ್. ಆರ್. ಕಟ್ಟಿ, ತಾಲೂಕಿನ ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು ಉಪಸ್ಥಿತರಿದ್ದರು.

