ತ್ವರಿತ ಯೋಜನೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಡಿಸಿ ಡಾ.ಆನಂದ್ ಕೆ. ಎಚ್ಚರಿಕೆ | ಜಲಧಾರೆ ಯೋಜನೆ ಅನುಷ್ಠಾನಕ್ಕೆ ವಿಶೇಷ ಸಭೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು. ಬೇರೆ ಬೇರೆ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡುವ ಮೂಲಕ ಯೋಜನೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಲಧಾರೆ ಯೋಜನೆ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.
ಆಲಮಟ್ಟಿ ಹಾಗೂ ನಾರಾಯಣಪುರ ಹಿನ್ನೀರಿನ ಮೂಲಕ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಈ ಯೋಜನೆ ನಮ್ಮ ಜಿಲ್ಲೆಗೆ ವರದಾನವಾಗಿದೆ. ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು ಎಂದರು.
ಈ ಯೋಜನೆ ಅನುಷ್ಠಾನ ಪ್ರಕ್ರಿಯೆಯಲ್ಲಿ ವಿಳಂಬವಾಗಿದ್ದು, ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಯೋಜನೆ ಪೂರ್ಣಗೊಳಿಸಬೇಕು ಎಂದರು.
ಯೋಜನೆ ಅನುಷ್ಠಾನಕ್ಕೆ ಅನುದಾನದ ಕೊರತೆ ಇಲ್ಲ. ಸಮಸ್ಯೆ ಎಲ್ಲಿದೆ ಗುರುತಿಸಿ, ಜಾಗ ಗುರುತಿಸುವಿಕೆ ಪೈಪ್ ಲೈನ್ ಅಳವಡಿಸಲು ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದರು.
೪೩ ಸೈಟ್ ನಲ್ಲಿ ಸಮಸ್ಯೆ ಇದೆ. ೩೫ಕಿ.ಮೀ ಪೈಪ್ ಲೈನ್ ಮಾಡಲು ಅಧಿಕಾರಿಗಳು ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂದರು. ತಹಸೀಲ್ದಾರ್ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಉದ್ಭವಿಸುವ ತಾಂತ್ರಿಕ ಸಮಸ್ಯೆ ನಿವಾರಿಸಿಕೊಂಡು ಸುಗಮವಾಗಿ ಯೋಜನೆ ಅನುಷ್ಠಾನಕ್ಕೆ ಸಹಕರಿಸಬೇಕು. ಈ ಮಹತ್ವದ ಕುಡಿಯುವ ನೀರಿನ ಯೋಜನೆ ಅನುಷ್ಠಾನ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬಾರದು ಸೂಚಿಸಿದರು. ಅರಣ್ಯ ಭೂಮಿ ಸಮಸ್ಯೆ ನಿವಾರಿಸಿಕೊಂಡು ಕಾಮಗಾರಿಗೆ ವೇಗದ ಸ್ಪರ್ಶ ನೀಡಿ, ತಕ್ಷಣ ಯೋಜನೆ ಹಸ್ತಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಡಿಎಫ್ಒ ಅವರು ಎರಡು ಪ್ರಸ್ತಾವನೆ ಸರ್ಕಾರಕ್ಕೆ ಕಳಿಸಿದ್ದು. ೪ಕಿ.ಮೀ ಅರಣ್ಯ ಇಲಾಖೆಯ ಸಮಸ್ಯೆಯನ್ನು ಅರಣ್ಯ ಇಲಾಖೆಯವರು ಬಗೆಹರಿಸಿಕೊಳ್ಳಬೇಕು ಎಂದರು.
ಜಲಧಾರೆ ಯೋಜನೆಯ ಹಂತ.೧ರ ಕಾಮಗಾರಿ ಬಹುಮುಖ್ಯವಾಗಿದೆ. ಈ ಯೋಜನೆ ಬೇಗ ಪೂರ್ಣಗೊಳಿಸಲು ಸೂಚಿಸಿದರು.
ಈ ಕಾಮಗಾರಿಗೆ ಸಂಬಂಧಿಸಿದಂತೆ ವಿದ್ಯುತ್ ಸಮಸ್ಯೆಯನ್ನು ಹೆಸ್ಕಾಂ ಅಧಿಕಾರಿಗಳು ತಕ್ಷಣ ಬಗೆಹರಿಸಬೇಕು.
ಕೆಪಿಟಿಸಿಎಲ್, ಹೆಸ್ಕಾಂ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಪ್ರತ್ಯೇಕ ಸಭೆ ನಡೆಸಿ, ಈ ಯೋಜನೆಯ ನೀರು ಶುದ್ಧೀಕರಣ ಘಟಕಕ್ಕೆ ಮೋಟಾರ್ಸ್ ಪಂಪಿಂಗ್ ವಿದ್ಯುತ್ ಒದಗಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಎಲ್ಲರೂ ಸಂಪರ್ಕ ಹಾಗೂ ಸಂವಹನ ಸಾಧಿಸಿ ಬಗೆಹರಿಸಿಕೊಂಡು ಬಹುಪಯೋಗಿ ಶುದ್ಧ ಕುಡಿಯುವ ನೀರೊದಗಿಸುವ ಈ ಯೋಜನೆ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಯೋಜನೆಯಿಂದ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಕಾಮಗಾರಿ ಅನುಷ್ಠಾನಕ್ಕೆ ಎದುರಾಗುವ ಎಲ್ಲ ಅಡತಡೆಗಳನ್ನು ನಿವಾರಿಸಿಕೊಂಡು ಕಾರ್ಯನಿರ್ವಹಿಸಬೇಕು ಒಂದು ವೇಳೆ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕ್ರಮ ಕೈಕೊಳ್ಳಲಾಗುವುದು ಎಂಬುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಗ್ರಾಮದ ಒಎಚ್ಟಿ ನೀರಿನ ಟ್ಯಾಂಕ್ ಇದ್ದಲ್ಲಿ ಗ್ರಾಪಂ ವ್ಯಾಪ್ತಿಯ ಅಧಿಕಾರಿಗಳು ಹಾಗೂ ಇಒ ಗಳು ಒಎಸ್ ಟಿ ಲ್ಯಾಂಡ್ ಸಮಸ್ಯೆಯನ್ನು ಮುಂಬರುವ ಸಭೆಯೊಳಗಾಗಿ ಪೂರ್ಣಗೊಳಿಸಬೇಕು ಎಂದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿನ ಈ ಯೋಜನೆಗೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಈ ಯೋಜನೆ ಸ್ಥಳೀಯ ಸಂಸ್ಥೆಯ ವ್ಯಾಪ್ತಿಗೂ ಒಳಪಡಲಿದ್ದು, ಅಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ನಿವಾರಿಸಿಕೊಡಲು ಅಧಿಕಾರಿಗಳು ಗಮನಹರಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಎಲ್ಲ ತಾಲೂಕಿನ ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

